ಹರಿಹರ: ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಮಠಕ್ಕೆ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕಾಲೇಜು ಮತ್ತಿತರ ಬೇಡಿಕೆಗಳನ್ನು ಮಾ. 5ರಂದು ಮಂಡಿಸುವ ಬಜೆಟ್ನಲ್ಲಿ ಪ್ರಸ್ತಾಪಿಸುವಂತೆ ಮುಖ್ಯಮಂತ್ರಿಗೆ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಮನವಿ ಮಾಡಿದರು.
ಮಂಗಳವಾರ ಬೆಂಗಳೂರಿನ ಮುಖ್ಯಮಂತ್ರಿ ನಿವಾಸದಲ್ಲಿ ಭೇಟಿ ಮಾಡಿದ ಸ್ವಾಮೀಜಿ, ವಾಲ್ಮೀಕಿ ನಾಯಕ ಸಮುದಾಯಕ್ಕೆ ಶಾಸನಬದ್ಧವಾಗಿ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಈಡೇರಿಸಲು ಸರ್ಕಾರ ಕ್ರಮ ಕೈಗೊಳ್ಳುವಂತೆ ಮನವಿ ನೀಡಿ ಒತ್ತಾಯಿಸಿ ಮನವಿ ಸಲ್ಲಿಸಿದರು.
ಸಾಧ್ಯವಾದಷ್ಟು ಬೇಡಿಕೆ ಈಡೇರಿಸುವ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿರುವುದಾಗಿ ವಾಲ್ಮೀಕಿ ಶ್ರೀಗಳು ಹೇಳಿದರು.
ಡಿಸಿಎಂ ಲಕ್ಷಣ ಸವದಿ, ಸಚಿವ ಸಿ.ಟಿ.ರವಿ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಶಾಸಕರಾದ ಎಸ್.ವಿ.ರಾಮಚಂದ್ರಪ್ಪ, ವಿರೂಪಾಕ್ಷಪ್ಪ ಬಳ್ಳಾರಿ, ಮಾಜಿ ಶಾಸಕ ಬಿ.ಪಿ.ಹರೀಶ್, ಸಮಾಜದ ಮುಖಂಡ ಟಿ.ಈಶ್ವರ ಮತ್ತಿತರರಿದ್ದರು.