ಶಿವಮೊಗ್ಗ: ಕರಾವಳಿ ಭಾಗದ ಮೂರು ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್ ಭತ್ತಕ್ಕೆ ಎಂಎಸ್ಪಿ(ಕನಿಷ್ಠ ಬೆಂಬಲ ಬೆಲೆ) ಮೇಲೆ 500 ರೂ. ಹೆಚ್ಚುವರಿ ನೀಡುತ್ತಿದ್ದು, ಈ ಯೋಜನೆಯನ್ನು ಇತರೆ ಜಿಲ್ಲೆಗಳಿಗೂ ವಿಸ್ತರಿಸಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ ಒತ್ತಾಯಿಸಿದರು.
ರಾಜ್ಯದಲ್ಲಿ ಇದುವರೆಗೂ ಬಿಜೆಪಿ ಸರ್ಕಾರ ಜಾತಿ, ಧರ್ಮದ ವಿಷಯದಲ್ಲಿ ದ್ವೇಷ ಭಾವನೆ ಬಿತ್ತುತ್ತಿತ್ತು. ಇದೀಗ ರೈತರ ವಿಚಾರದಲ್ಲೂ ತಾರತಮ್ಯ ಮಾಡುತ್ತಿದೆ. ಎಂಎಸ್ಪಿ ಮೂಲಕ ಭತ್ತ ಖರೀದಿಗೆ ಅವಕಾಶ ಕಲ್ಪಿಸಿದ್ದು ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಇತರೆ ಜಿಲ್ಲೆಗಳಿಗೆ ಅದು ಉಪಯೋಗ ಆಗುತ್ತಿಲ್ಲ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಎಂಎಸ್ಪಿ ಮೂಲಕ ರಾಜ್ಯದ ರೈತರಿಂದ 5 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿಗೆ ಸುತ್ತೋಲೆ ಹೊರಡಿಸಿದೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿರುವ ಕಮಿಟಿ ತೀರ್ಮಾನ ಮಾಡಿದ್ದು ಕರಾವಳಿ ಭಾಗದವರಿಗೆ ಅನುಕೂಲ ಮಾಡಿಕೊಡಲಾಗಿದೆ. ಶಿವಮೊಗ್ಗ, ರಾಯಚೂರು, ಕೊಪ್ಪಳ, ಗಂಗಾವತಿ ಸೇರಿದಂತೆ ಹಲವೆಡೆ ಭಾಗದಲ್ಲೂ ಭತ್ತ ಬೆಳೆಯುತ್ತಿದ್ದು ಅವರ್ಯಾರು ರೈತರಲ್ಲವೇ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್, ಮಾಜಿ ಎಂಎಲ್ಸಿ ಆರ್.ಪ್ರಸನ್ನಕುಮಾರ್, ಮುಖಂಡರಾದ ಎನ್.ರಮೇಶ್, ಎಸ್.ಪಿ.ದಿನೇಶ್, ಕಲಗೋಡು ರತ್ನಾಕರ್, ಎಚ್.ಸಿ.ಯೋಗೇಶ್, ಬಿ.ಎ.ರಮೇಶ್ ಹೆಗಡೆ, ಸಿ.ಎಸ್.ಚಂದ್ರಭೂಪಾಲ್, ಜಿ.ಡಿ.ಮಂಜುನಾಥ ಸುದ್ದಿಗೋಷ್ಠಿಯಲ್ಲಿದ್ದರು.