ಬೇಲೂರು: ಮಲೆನಾಡಿನ ಸಮಗ್ರ ಅಭಿವೃದ್ಧಿಗೆ ಬದ್ಧನಾಗಿದ್ದು, ಈ ಭಾಗದ ರಸ್ತೆ, ಕುಡಿಯುವ ನೀರು, ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.
ತಾಲೂಕಿನ ತುಂಬು ದೇವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ಆಯೋಜಿಸಿದ್ದ ಗ್ರಾಮಸಭೆಯಲ್ಲಿ ಮಾತನಾಡಿದರು.
ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಬಾಳದಕಲ್ಲು ಹಾಗೂ ಬಾಸುರ ಹೊಸಮನೆ ಗ್ರಾಮಗಳ ರಸ್ತೆ ಹಾಗೂ ಮುರೆಹಳ್ಳಿ ಗ್ರಾಮದ ಸೇತುವೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಫಸಲಿಗೆ ಬಂದಿರುವ ಕಾಫಿ, ಭತ್ತದ ಬೆಳೆಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ರೈತರು ಹಾಗೂ ಕಾಫಿ ಬೆಳೆಗಾರರ ಹತ್ತು ಎಚ್ಪಿ ಪಂಪ್ಸೆಟ್ ವಿದ್ಯುತ್ ಬಿಲ್ ಬಾಕಿ ಮೊತ್ತವನ್ನು ಮನ್ನಾ ಮಾಡಿ ಬೆಳೆಗಾರರ ನೆರವಿಗೆ ಬರುವಂತೆ ಅಧಿವೇಶನದಲ್ಲಿ ಸರ್ಕಾರವನ್ನು ಒತ್ತಾಯ ಮಾಡಲಾಗಿದೆ. ಈಗಾಗಲೇ ಬೇಸಿಗೆ ಸಮೀಪಿಸುತ್ತಿದ್ದು, ಮಲೆನಾಡು ಭಾಗದ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕೇಳಿಬರುತ್ತಿದೆ. ನೀರು ಪೂರೈಕೆಯಲ್ಲಿ ಜನಸಾಮಾನ್ಯರಿಗೆ ಯಾವುದೇ ತೊಂದರೆಯಾಗದಂತೆ ಪಿಡಿಒಗಳು ಹಾಗೂ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಪಿ.ಮಲ್ಲೇಶ್ ಮಾತನಾಡಿ, ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್, ಕಾಡಾನೆಗಳ ಸಮಸ್ಯೆ, ಸ್ಮಶಾನಕ್ಕೆ ಹೋಗುವ ದಾರಿ, ಮನೆಗಳಿಗೆ ಹಕ್ಕುಪತ್ರ ವಿತರಣೆ, ಕಸ ವಿಲೇವಾರಿ ಘಟಕ ನಿರ್ಮಾಣ, ಸಮುದಾಯ ಭವನ, ದೇವಾಲಯ ಅಭಿವೃದ್ಧಿ, ಜನ ಹಾಗೂ ಜಾನುವಾರುಗಳ ಆಸ್ಪತ್ರೆ ಸೇರಿದಂತೆ ಇತರ ಅಭಿವೃದ್ಧಿ ಕಾಮಗಾರಿಗಳು ಅಗತ್ಯವಿದ್ದು, ಶಾಸಕರು ಗಮನ ಹರಿಸಬೇಕು ಎಂದು ಮನವಿ ಪತ್ರ ಸಲ್ಲಿಸಿದರು.
ಉಪಾಧ್ಯಕ್ಷೆ ಲೋಲಾಕ್ಷಿ, ಸದಸ್ಯರಾದ ಶೋಭಾ, ಚಂದ್ರು, ಲಲಿತಮ್ಮ, ಕಲ್ಪನಾ, ತಾಪಂ ಇಒ ಸತೀಶ್, ಪಿಡಿಒ ವಾಸು, ಕಾರ್ಯದರ್ಶಿ ಜಗದೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.