ತರೀಕೆರೆ: ಆರೋಗ್ಯ ಕೇಂದ್ರಗಳಿಗೆ ಮೂಲ ಸೌಕರ್ಯ ಒದಗಿಸಲು ಸರ್ಕಾರ ಸಾಕಷ್ಟು ಅನುದಾನ ನೀಡುತ್ತಿದೆ ಎಂದು ಶಾಸಕ ಡಿ.ಎಸ್.ಸುರೇಶ್ ತಿಳಿಸಿದರು.
ತಾಲೂಕಿನ ಲಕ್ಕವಳ್ಳಿಯಲ್ಲಿ ಅಮೃತ ಆರೋಗ್ಯ ಮೂಲ ಸೌಕರ್ಯ ಉನ್ನತೀಕರಣ ಅನುದಾನದಲ್ಲಿ 20 ಲಕ್ಷ ರೂ. ವೆಚ್ಚದ ಪ್ರಯೋಗಶಾಲೆ ನಿರ್ಮಾಣ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಮೂಲ ಸೌಕರ್ಯ ಉನ್ನತೀಕರಣ ಅನುದಾನದಲ್ಲಿ ತಾಲೂಕಿನ 5 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತಲಾ 20 ಲಕ್ಷ ರೂ. ಬಿಡುಗಡೆಯಾಗಿದೆ. ಇದರಲ್ಲಿ ಶೌಚಗೃಹ ದುರಸ್ತಿ, ನೀರು ಸರಬರಾಜು, ವಿದ್ಯುತ್ ಸಂಪರ್ಕ ಮತ್ತಿತರ ಕಾರ್ಯ ಕೈಗೊಳ್ಳಬಹುದು ಎಂದರು.
ಈಗಾಗಲೇ ಲಕ್ಕವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎನ್ಎಸ್ಟಿ ಮತ್ತು ಇಸಿಜಿ ವ್ಯವಸ್ಥೆ ಕಲ್ಪಿಸಲಾಗಿದೆ. ಆಸ್ಪತ್ರೆ ಮೇಲ್ದರ್ಜೆಗೇರಿಸಿ 30 ಹಾಸಿಗೆ ಸೌಲಭ್ಯವುಳ್ಳ ಸಮುದಾಯ ಆರೋಗ್ಯ ಕೇಂದ್ರ ನಿರ್ವಿುಸಲು 8 ಕೋಟಿ ರೂ. ಮಂಜೂರಾಗಿದೆ. ಸೂಕ್ತ ಜಾಗದ ವ್ಯವಸ್ಥೆಯಾದರೆ ಶೀಘ್ರ ಟೆಂಡರ್ ಕರೆದು ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದರು.