ಮೈಸೂರು: ರಾಜ್ಯ ನಾಯಕರ ಯುವ ಸೇನೆ ವತಿಯಿಂದ ನಗರದ ವಾಲ್ಮೀಕಿ ಭವನದಲ್ಲಿ ಭಾನುವಾರ ನಾಯಕ ಸಮಾಜದ ಸಾಧಕರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು.
ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಮನೋವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ.ಮಂಜುನಾಥ್ ಮಾತನಾಡಿ, ನಮ್ಮ ಸಮುದಾಯದಲ್ಲಿ ವಿದ್ಯಾವಂತರ ಸಂಖ್ಯೆ ಕಡಿಮೆ. ಆದರೆ, ಇತ್ತೀಚೆಗೆ ಅಕ್ಷರಸ್ಥರ ಸಂಖ್ಯೆ ವೃದ್ಧಿಯಾಗುತ್ತಿರುವುದು ಸಂತಸದ ವಿಚಾರ. ಪ್ರತಿಯೊಬ್ಬರು ವಿದ್ಯೆಯನ್ನು ಪಡೆಯುವ ಮೂಲಕ ಉನ್ನತ ಸ್ಥಾನಕ್ಕೆ ಏರಬೇಕೆಂದು ಕರೆ ನೀಡಿದರು.
ದಾವಣಗೆರೆಯ ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಎಂ.ಅಪ್ಪಣ್ಣ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದ 13 ಜನರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಮಾಜಿ ಸಚಿವ ಸತೀಶ್ ಜಾರಕಿಹೊಳಿ, ಮುಕ್ತ ವಿವಿಯ ಕುಲಪತಿ ಪ್ರೊ.ವಿದ್ಯಾಶಂಕರ್, ಮೈಸೂರು ವಿವಿ ಪ್ರಾಧ್ಯಾಪಕ ಪ್ರೊ.ಆರ್.ರಾಜಣ್ಣ, ರಾಜ್ಯ ನಾಯಕರ ಯುವ ಸೇನೆ ಅಧ್ಯಕ್ಷ ದೇವರಾಜ್ ಟಿ.ಕಾಟೂರು, ಸಬ್ ಇನ್ಸ್ಪೆಕ್ಟರ್ ಮಾದೇಶ್ ಇತರರು ಇದ್ದರು.