ಶಿವಮೊಗ್ಗ: ವಿಧಾನಸಭೆ ಚುನಾವಣೆ ಇನ್ನೊಂದು ತಿಂಗಳಲ್ಲಿ ಎದುರಾಗಲಿದ್ದು 10 ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ತೀರ್ಮಾನ ಆಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಎರಡನೇ ವಾರದಲ್ಲಿ ಸ್ಕ್ರೀನಿಂಗ್ ಕಮಿಟಿ ಹಲವು ಸಭೆಗಳು ನಡೆಯಲಿದ್ದು ನಂತರ ಅಭ್ಯರ್ಥಿಗಳ ಹೆಸರು ಘೋಷಣೆ ಆಗಲಿದೆ. ಈ ಬಾರಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡುವ ನಮ್ಮ ಭರವಸೆಗಳನ್ನು ಜನರಿಗೆ ತಲುಪಿಸುತ್ತೇವೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಈಗಾಗಲೇ ರಾಜ್ಯಾದ್ಯಂತ ಪ್ರಜಾಧ್ವನಿ ಯಾತ್ರೆ ಕೈಗೊಂಡಿದ್ದೇವೆ. ಭದ್ರಾವತಿ ಮತ್ತು ತೀರ್ಥಹಳ್ಳಿ ಕ್ಷೇತ್ರದಲ್ಲೂ ಯಾತ್ರೆ ಯಶಸ್ವಿಯಾಗಿದೆ. ಶೀಘ್ರವೇ ಇನ್ನುಳಿದ ಕ್ಷೇತ್ರಗಳಲ್ಲೂ ಯಾತ್ರೆ ನಡೆಸುತ್ತೇವೆ. ರಾಜ್ಯದ ಭ್ರಷ್ಟ ಬಿಜೆಪಿ ಸರ್ಕಾರ ಕಿತ್ತು ಹಾಕಬೇಕೆಂದು ಜನ ಬೆಂಬಲ ನೀಡುತ್ತಿದ್ದಾರೆ. ಭ್ರಷ್ಟ ಆಡಳಿತ ಕೊನೆ ಮಾಡುವ ಅವರ ಅಪೇಕ್ಷೆಯಂತೆ ನಾವು ಕೂಡ ಕೆಲಸ ಮಾಡುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರ ಇದ್ದಾಗ ಹಲವು ಜನಪರ ಯೋಜನೆ ಜಾರಿಗೆ ತಂದಿತ್ತು. ಆದರೆ ಬಿಜೆಪಿ ಸರ್ಕಾರ ಅವುಗಳನ್ನು ರದ್ದು ಮಾಡಿದೆ. ಸಾಮಾಜಿಕ ನ್ಯಾಯ, ವಿದ್ಯಾರ್ಥಿ ವೇತನ ಎಲ್ಲವೂ ಇಲ್ಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಮ್ಮಿಶ್ರ ಸರ್ಕಾರದ ವೇಳೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪಕ್ಷ ವಿಸರ್ಜನೆ ಮಾಡುವುದಕ್ಕೆ ಹೇಳಿಲ್ಲ. ನಾನು ಗೆಲ್ಲಲಿಲ್ಲ ಅಂದರೆ ವಿಸರ್ಜನೆ ಮಾಡುತ್ತೇನೆ ಎಂದು ಅವರೇ ಹೇಳಿಕೊಂಡಿದ್ದರು. ಅವರು ಹೇಳಿದ್ದಾರಾ ಅಥವಾ ಇಲ್ಲವಾ ಎಂಬುದಕ್ಕೆ ದಾಖಲೆ ನೋಡಿದರೆ ಗೊತ್ತಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ರೈತರ ಹಿತರಕ್ಷಣೆಗೆ ಬದ್ಧ: ಬಗರ್ಹುಕುಂ, ಅರಣ್ಯಭೂಮಿ ಸಾಗುವಳಿ ರೈತರ ಹಿತರಕ್ಷಣೆಗೆ ಕಾಂಗ್ರೆಸ್ ಬದ್ಧವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮೇಲೂ ಒತ್ತಡ ಹೇರುತ್ತಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಮಲೆನಾಡಿನಲ್ಲಿ ಹಲವು ಸಮಸ್ಯೆಗಳಿದ್ದು ನಮ್ಮ ಪ್ರಣಾಳಿಕೆಯಲ್ಲೂ ಹೇಳಿದ್ದೇವೆ. ಬೇಧ-ಭಾವ ಮಾಡದೆ ಎಲ್ಲರಿಗೂ ರಕ್ಷಣೆ ಕೊಡಲು ಅರಣ್ಯ ಕಾಯ್ದೆ ತಿದ್ದುಪಡಿ ಅಗಬೇಕು. ಯಾರನ್ನು ಒಕ್ಕಲೆಬ್ಬಿಸದೆ, ರೈತರ ರಕ್ಷಣೆಗೆ ಒತ್ತಾಯ ಮಾಡುತ್ತೇವೆ ಎಂದರು.