ಗೋಣಿಕೊಪ್ಪ; ಕಾಂಗ್ರೆಸ್ನ ಬೆನ್ನೆಲುಬಾಗಿರುವ ಅಲ್ಪಸಂಖ್ಯಾತರ ಘಟಕವನ್ನು ಜಿಲ್ಲೆಯಲ್ಲಿ ಮತ್ತಷ್ಟು ಬಲಿಷ್ಠಗೊಳಿಸಲು ತೀರ್ಮಾನಿಸಲಾಯಿತು.
ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್ ಅಧ್ಯಕ್ಷತೆಯಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲೆಯ ವಿವಿಧ 6 ಬ್ಲಾಕ್ಗಳ ನೂತನ ಅಧ್ಯಕ್ಷರ ಸಮಾಲೋಚನಾ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು.
ಬೇರೆ ಬೇರೆ ಕಾರಣಗಳಿಗಾಗಿ ಪಕ್ಷದ ಸಂಘಟನಾ ಕಾರ್ಯಗಳಿಂದ ದೂರವಿರುವ ಅಲ್ಪಸಂಖ್ಯಾತ ಮುಖಂಡರನ್ನು ಮತ್ತೆ ಒಂದೆಡೆ ಸೇರಿಸಿ ಪಕ್ಷದ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡಬೇಕು. ಇದರಿಂದ ಪಕ್ಷದ ಬೆಳವಣಿಗೆಗೆ ಸಹಕಾರಿಯಾಗಲಿದೆ. ಅಲ್ಲದೆ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿವಿಧ ಜನೋಪಯೋಗಿ ಯೋಜನೆಗಳ ಕುರಿತು ಮತದಾರರಿಗೆ ಜಾಗೃತಿ ಮೂಡಿಸಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ ವಿವಿಧ ಬ್ಲಾಕ್ ಸಮಿತಿ ಅಧ್ಯಕ್ಷರು, ಮುಂಬರುವ ಲೋಕಸಭೆ ಸೇರಿದಂತೆ ಜಿಪಂ ಮತ್ತು ತಾಪಂ ಚುನಾವಣೆಗೆ ಘಟಕವನ್ನು ಮತ್ತಷ್ಟು ಸಜ್ಜುಗೊಳಿಸಬೇಕು ಎಂದು ಸಲಹೆ ನೀಡಿದರು.
ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಜಿಲ್ಲೆಯ ಅಲ್ಪಸಂಖ್ಯಾತರಿಗೆ ವಿವಿಧ ಯೋಜನೆಗಳ ಸೌಲಭ್ಯ ನಿರೀಕ್ಷಿತ ಮಟ್ಟದಲ್ಲಿ ದೊರೆಯುತ್ತಿಲ್ಲ. ವಿಶೇಷವಾಗಿ ಜಿಲ್ಲೆಯಲ್ಲಿ ಪಕ್ಷವನ್ನು ಹಲವು ದಶಕಗಳಿಂದ ಬೆಂಬಲಿಸುತ್ತ ಬಂದಿರುವ ಅಲ್ಪಸಂಖ್ಯಾತ ಕಾರ್ಯಕರ್ತರು ಮತ್ತು ಪ್ರಮುಖರಿಗೆ ಸೂಕ್ತ ರಾಜಕೀಯ ಸ್ಥಾನಮಾನ ಇದುವರೆಗೂ ದೊರೆತಿಲ್ಲ. ಸಾಮಾಜಿಕ ನ್ಯಾಯದ ಆಧಾರದಲ್ಲಾದರೂ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರಿಗೆ ದೊರಬೇಕಾದ ಸ್ಥಾನಮಾನಗಳನ್ನು ದೊರಕಿಸಿಕೊಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಅಲ್ಲದೆ ಕಾಂಗ್ರೆಸ್ಗೆ ಅಲ್ಪಸಂಖ್ಯಾತರ ವಿಶೇಷ ಋಣ ಭಾರವಿದ್ದು, ಈ ಕುರಿತು ರಾಜ್ಯದ ವರಿಷ್ಠರ ಮುಂದೆ ಹಕ್ಕೊತ್ತಾಯ ಮಂಡಿಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಅರ್ಹರನ್ನು ಮತದಾರರ ಪಟ್ಟಿಗೆ ಸೇರಿಸಲು ಬ್ಲಾಕ್ ಸಮಿತಿ ಅಧ್ಯಕ್ಷರು ವಿಶೇಷ ಜವಾಬ್ದಾರಿ ತೆಗೆದುಕೊಳ್ಳಬೇಕು. ಎಲ್ಲ ಮುಖಂಡರು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೂಡಲೇ ಬ್ಲಾಕ್ ಸಮಿತಿಯನ್ನು ಪೂರ್ಣ ಪ್ರಮಾಣದಲ್ಲಿ ರಚಿಸಬೇಕು. ಬ್ಲಾಕ್ ಸಮಿತಿ ರಚನೆ ಕಾರ್ಯ ಪೂರ್ಣಗೊಂಡ ಬಳಿಕ ಆಯಾ ವ್ಯಾಪ್ತಿಯ ವಲಯ ಸಮಿತಿಗಳಿಗೆ ಪದಾಧಿಕಾರಿಗಳನ್ನು ನೇಮಿಸುವ ಪ್ರಕ್ರಿಯೆಯನ್ನೂ ಪೂರ್ಣಗೊಳಿಸಬೇಕು. ಅಲ್ಪಸಂಖ್ಯಾತರ ವಿಭಾಗವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಸಂಘಟಿಸಲು ಬ್ಲಾಕ್ ಮಟ್ಟದಲ್ಲಿ ಅಗತ್ಯ ರೂಪುರೇಷೆ ಸಿದ್ಧಪಡಿಸಬೇಕು ಎಂದು ಪಿ.ಎ. ಹನೀಫ್ ಸೂಚಿಸಿದರು.
ಸಭೆಯಲ್ಲಿ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಸಯ್ಯದ್ ಭಾವ, ಮಡಿಕೇರಿ ಬ್ಲಾಕ್ ಅಧ್ಯಕ್ಷ ಕೆ.ಜಿ.ಪೀಟರ್, ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಕೋಳುಮಂಡ ರಫೀಕ್, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಎಂ.ಎ.ಶಮೀರ್, ಕುಶಾಲನಗರ ಬ್ಲಾಕ್ ಅಧ್ಯಕ್ಷ ಕೆ.ಇ.ಅಬ್ದುಲ್ ರಜಾಕ್, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಎ.ಎಂ.ಉಮ್ಮರ್, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷ ಅಕ್ಮಲ್ ಪಾಷ ಉಪಸ್ಥಿತರಿದ್ದರು.