ನವದೆಹಲಿ: ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕರ್ನಾಟಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಈಗಾಗಲೇ 24 ಕ್ಷೇತ್ರಗಳಿಗೆ ಹುರಿಯಾಳುಗಳನ್ನು ಘೋಷಿಸಿದ್ದು, 4 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ. ಅಭ್ಯರ್ಥಿಗಳ ಆಯ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಬುಧವಾರ (ಮಾರ್ಚ್ 27) ನವದೆಹಲಿಯಲ್ಲಿ ಸಭೆ ಕರೆದಿದ್ದು, ಬುಧವಾರ ಸಂಜೆ ಅಥವಾ ಗುರುವಾರ ಪಟ್ಟಿ ಪ್ರಕಟಿಸುವ ಸಾಧ್ಯತೆ ಹೆಚ್ಚಿದೆ.
ಮಾರ್ಚ್ 27ರಂದು ಸಂಜೆ 6 ಗಂಟೆ ಸುಮಾರಿಗೆ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಕರ್ನಾಟಕದ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ. ಅದರಂತೆ ಕರ್ನಾಟಕದ ಚಾಮರಾಜನಗರ, ಬಳ್ಳಾರಿ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಕ್ಷೇತ್ರಗಳಿಗೆ ಮಾರ್ಚ್ 27ರಂದು ಟಿಕೆಟ್ ಫೈನಲ್ ಆಗುವ ಸಾಧ್ಯತೆ ಇದೆ.
ಇದನ್ನೂ ಓದಿ: ಬೆಂಗಳೂರು ಜಲಕ್ಷಾಮ; ಕನ್ನಡದಲ್ಲಿಯೇ ಟ್ವೀಟ್ ಮಾಡಿ ಪರಿಹಾರ ತಿಳಿಸಿದ ಮೆಗಾಸ್ಟಾರ್
ಕೋಲಾರ ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಬುಗಿಲೆದ್ದಿರುವ ಅಸಮಾಧಾನ ತಣಿಸಲು ಖುದ್ದು ಎಂಟ್ರಿ ಕೊಟ್ಟಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನಿತರನ್ನು ಖುದ್ದು ಕರೆಸಿ ಮಾನಾಡಿದ್ದಾರೆ ಎಂದು ತಿಳಿದು ಬಂದಿದೆ. ಇದಲ್ಲದೆ ಬಾಕಿ ಉಳಿದಿರುವ ಕ್ಷೇತ್ರಗಳ ಮುಖಂಡರ ಜೊತೆ ಮಾತುಕತೆ ನಡೆಸಿದ್ದು, ಅಭಿಪ್ರಾಯ ಸಂಗ್ರಹಿಸಿದ್ದಾರೆ ಎಂದು ವರದಿಯಾಗಿದೆ.
ಕರ್ನಾಟಕದ ಜೊತೆಜೊತೆಗೆ ಗೋವಾ, ಜಾರ್ಖಂಡ್, ಉತ್ತರಪ್ರದೇಶ ರಾಜ್ಯಗಳ ಟಿಕೆಟ್ ಬಗ್ಗೆಯೂ ಚರ್ಚೆ ನಡೆಯಲಿದ್ದು, ಬುಧವಾರ ಅಥವಾ ಗುರುವಾರ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವ ಸಾಧ್ಯತೆ ಹೆಚ್ಚಿದೆ.