ಶಿಮ್ಲಾ: ಹಿಮಾಚಲ ಪ್ರದೇಶದ ರಾಜ್ಯಸಭೆ ಚುನಾವಣೆಯಲ್ಲಿ ಅಚ್ಚರಿ ಎಂಬಂತೆ ಬಿಜೆಪಿ ಜಯಗಳಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಭಾರಿ ಮುಖಭಂಗ ಅನುಭವಿಸಿದೆ. ಈ ಸೋಲು ಕಾಂಗ್ರೆಸ್ ಸರ್ಕಾರವನ್ನೇ ಉರುಳಿಸುವ ಸುಳಿವನ್ನು ಕೂಡ ನೀಡಿದೆ. ಕಾಂಗ್ರೆಸ್ ಶಾಸಕರೇ ಅಡ್ಡಮತದಾನ ಮಾಡಿರುವ ಹಿನ್ನೆಲೆಯಲ್ಲಿ ಸಿಎಂ ಸುಖ್ವಿಂದರ್ ಸಿಂಗ್ ಸುಖು ಶಾಸಕರ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಹೇಳಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಕೈಗೊಳ್ಳಲು ಬಿಜೆಪಿ ಮುಂದಾಗಿದೆ.
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು, 68 ಸದಸ್ಯರ ವಿಧಾನಸಭೆಯಲ್ಲಿ 40 ಶಾಸಕರ ಸಂಖ್ಯಾಬಲವನ್ನು ಹೊಂದಿದೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಹಿರಿಯ ನಾಯಕ, ಸುಪ್ರೀಂಕೋರ್ಟ್ ವಕೀಲ ಅಭಿಷೇಕ್ ಮನುಸಿಂಘಿಯವರಿಗೆ ಗೆಲುವು ಸುಲಭದ ತುತ್ತಾಗಬೇಕಿತ್ತು. ಆದರೆ, ಭಾರಿ ಕಾರ್ಯಾಚರಣೆ ನಡೆಸಿದ ಬಿಜೆಪಿ ನಾಯಕರು, 6 ಕಾಂಗ್ರೆಸ್ ಶಾಸಕರಿಂದ ಅಡ್ಡಮತದಾನ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ, 3 ಪಕ್ಷೇತರ ಶಾಸಕರು ಕೂಡ ಬಿಜೆಪಿ ಅಭ್ಯರ್ಥಿ ಬೆಂಬಲಿಸಿ ಮತ ಹಾಕಿದ್ದು, ಇದರಿಂದಾಗಿ ಬಿಜೆಪಿ ಹರ್ಷ ಮಹಾಜನ್ ಗೆಲುವು ಸಾಧಿಸಿದ್ದಾರೆ.
ಒಟ್ಟು 26 ಶಾಸಕರು ಸಿಎಂ ಸುಖು ವಿರುದ್ಧ ಅಸಮಾಧಾನಗೊಂಡಿದ್ದಾರೆ ಮತ್ತು ಸಿಎಂ ಬದಲಾವಣೆಯನ್ನೂ ಬಯಸಿದ್ದಾರೆ. ಅಡ್ಡ ಮತದಾನ ಮಾಡಿದ ಶಾಸಕರೇ ಇದನ್ನು ಬಹಿರಂಗವಾಗಿ ಹೇಳಿದ್ದು, ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರದ ಬುಡ ಅಲುಗಾಡುತ್ತಿದೆ. ಸಿಎಂ ಸುಖು ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ, ಮತ್ತೊಬ್ಬ ಬಲಿಷ್ಠ ನಾಯಕನ್ನು ಸಿಎಂ ಸ್ಥಾನಕ್ಕೆ ಕೂರಿಸುವ ಸಾಧ್ಯತೆಯೂ ಇದೆ.
ಈ ಬೆಳವಣಿಗೆಯ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್, ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮಾಜಿ ಹರಿಯಾಣ ಸಿಎಂ ಭೂಪಿಂದ್ರ ಹೂಡರನ್ನು ಕಳುಹಿಸಿ, ಅಸಮಾಧಾನಿತರ ಜತೆ ಮಾತುಕತೆ ನಡೆಸಲು ಸೂಚಿಸಲಾಗಿದೆ. ಸುಖುವನ್ನು ಬದಲಾಯಿಸದ ಹೊರತು ನಮ್ಮ ಅಸಮಾಧಾನ ತಗ್ಗುವುದಿಲ್ಲ ಎಂದು ಭಿನ್ನಮತಿಯರು ಹೇಳಿದ್ದಾರೆ ಎಂದು ವರದಿಯಾಗಿದೆ.
ಮಹಾಜನ್ ಗೆಲುವಿನ ಬಗ್ಗೆ ಸಂಭ್ರಮ ವ್ಯಕ್ತಪಡಿಸಿರುವ ಮಾಜಿ ಸಿಎಂ, ಬಿಜೆಪಿ ನಾಯಕ ಜೈರಾಮ್ ಠಾಕೂರ್, ಹಿಮಾಚಲ ಪ್ರದೇಶದಲ್ಲಿ ನಾವು ಅಸಾಧ್ಯವಾಗಿದ್ದನ್ನು ಸಾಧ್ಯವಾಗಿಸಿದ್ದೇವೆ. ಕಾಂಗ್ರೆಸ್ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ನಾವು ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲಿದ್ದೇವೆ ಎಂದು ಹೇಳಿದ್ದಾರೆ. (ಏಜೆನ್ಸೀಸ್)
ಮಳೆಯಲ್ಲಿ ಸಾಂಗ್ ಶೂಟಿಂಗ್ ವೇಳೆ ಒಳ ಉಡುಪು ಧರಿಸಿರಲಿಲ್ಲ: ಮೇಲಕ್ಕೆತ್ತಿದಾಗ ರಜನಿಕಾಂತ್ ಗಲಿಬಿಲಿಗೊಂಡಿದ್ದರು!
ಅಪ್ಪಿತಪ್ಪಿ ಈ ಆಹಾರಗಳ ಜತೆ ಬಾಳೆಹಣ್ಣು ತಿನ್ನಬೇಡಿ… ತಿಂದ್ರೆ ಆರೋಗ್ಯಕ್ಕೆ ತುಂಬಾ ಡೇಂಜರ್!