ಬೆಂಗಳೂರು: ಆತ್ಮಸಾಕ್ಷಿ ಮತ ಎನ್ನುವ ಪದವನ್ನು ದೇಶದಲ್ಲಿ ಮೊದಲು ಹುಟ್ಟು ಹಾಕಿದ್ದೇ ನ್ಯಾಷನಲ್ ಕಾಂಗ್ರೆಸ್ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ಬೆಟ್ಟಿಂಗ್ ಚಟ: ಆನ್ಲೈನ್ ಆ್ಯಪ್ ಸಾಲ ತೀರಿಸಲಾಗದೆ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ!
ಮಂಗಳವಾರ ವಿಧಾನಸೌಧದಲ್ಲಿ ರಾಜ್ಯಸಭೆ ಅಭ್ಯರ್ಥಿಗಳ ಪರವಾಗಿ ಮತದಾನ ಮಾಡಿದ ಬಳಿಕ ಮಾತನಾಡಿದ ಅವರು, ಆತ್ಮಸಾಕ್ಷಿ ಮತ ಎಂದರೆ ಅಡ್ಡಮತ ಎಂದೇ ಅರ್ಥ. 1969ರಲ್ಲಿ ಅಂದಿನ ಪ್ರಧಾನಿಗಳಾದ ಶ್ರೀಮತಿ ಇಂದಿರಾ ಗಾಂಧಿ ಅವರು ತಮ್ಮ ಕೈಗೊಂಬೆ ರಾಷ್ಟ್ರಪತಿ ಬೇಕೆಂದು ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿದ್ದ ಶ್ರೀ ನೀಲಂ ಸಂಜೀವರೆಡ್ಡಿ ಅವರ ವಿರುದ್ಧ ಶ್ರೀ ವಿ.ವಿ.ಗಿರಿ ಅವರನ್ನು ಕಣಕ್ಕೆ ಇಳಿಸಿ ಆತ್ಮಸಾಕ್ಷಿ ಮತ ಹಾಕುವಂತೆ ಕರೆ ನೀಡಿದ್ದರು.
ಅಂದು ಪಕ್ಷದ ಅಧಿಕೃತ ಅಭ್ಯರ್ಥಿಯಾಗಿದ್ದ ಶ್ರೀ ನೀಲಂ ಸಂಜೀವರೆಡ್ಡಿ ಅವರು ಆತ್ಮಸಾಕ್ಷಿ ಮತ ಅಲಿಯಾಸ್ ಅಡ್ಡಮತದಿಂದ ಸೋತರು. ಅಡ್ಡಮತ ಪರಿಕಲ್ಪನೆಯ ಜನಕನೇ ಕಾಂಗ್ರೆಸ್ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ನಾವು ಈ ಚುನಾವಣೆಯಲ್ಲಿ ಗೆಲ್ಲಬೇಕು ಎಂಬುದಕ್ಕಿಂತ ಹೆಚ್ಚಾಗಿ ನಮ್ಮ ಶಾಸಕರನ್ನು ಒಡೆಯಲು ನಡೆಸಿದ ಯತ್ನವನ್ನು ವಿಫಲಗೊಳಿಸಲು ಸ್ಪರ್ಧೆ ಮಾಡಿದ್ದೇವೆ ಎಂದರು.
ನಾವು 19 ಜನರು ಒಟ್ಟಾಗಿದ್ದೇವೆ ಎಂಬ ಸಂದೇಶವನ್ನು ಕೊಡಲು ಈ ಚುನಾವಣೆಯಲ್ಲಿ ಕುಪೇಂದ್ರ ರೆಡ್ಡಿಯನ್ನು ಕಣಕ್ಕಿಳಿಸಿದ್ದೇವೆ. ಶರಣ್ಗೌಡ ಕಂದಕೂರ್ ನಮ್ಮ ಕುಟುಂಬದ ಸದಸ್ಯ. ಕುಟುಂಬದವರು ಎಲ್ಲರೂ ಒಟ್ಟಾಗಿದ್ದೇವೆ ಎಂದು ತಿಳಿಸುವ ಉದ್ದೇಶದಿಂದ ನಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ ಎಂದು ಹೇಳಿದರು. ಲೋಕಸಭೆ ಚುನಾವಣೆ ನಿಜವಾದ ಅಖಾಡ. ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟಿನಿಂದ ಸ್ಪರ್ಧಿಸಲಿದ್ದೇವೆ ಎಂದು ಎಚ್.ಡಿ ಕುಮಾರಸ್ವಾಮಿ ಅವರು ಹೇಳಿದರು.