More

    ಯುವಕರನ್ನು ಮುಂಚೂಣಿಗೆ ತರುವುದೇ ಕಾಂಗ್ರೆಸ್ ಧ್ಯೇಯ

    ಚಿಕ್ಕಮಗಳೂರು: ದೇಶದ ಭವಿಷ್ಯವನ್ನು ಸದೃಢಗೊಳಿಸುವ ಹಾಗೂ ಯುವಪೀಳಿಗೆಯನ್ನು ಜಾತ್ಯತೀತವಾಗಿ ಸಮಾಜದಲ್ಲಿ ಮುಂಚೂಣಿಗೆ ತರುವುದೇ ಕಾಂಗ್ರೆಸ್ ಪಕ್ಷದ ಮೂಲಧ್ಯೇಯ ಎಂದು ಜಿಲ್ಲಾ ಉಸ್ತು ವಾರಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

    ನಗರದ ನಿರಂತರ ಸಮುದಾಯ ಭವನದಲ್ಲಿ ಚುನಾವಣಾ ವಾರ್ ರೂಂ.ಗೆ ಮಂಗಳವಾರ ಭೇಟಿ ನೀಡಿ ಮಾತನಾಡಿದ ಅವರು, ಯುವಕರನ್ನು ಉದ್ಯೋಗವಂತರನ್ನಾಗಿ ಮಾಡುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಉದ್ಯೋಗ ನೀಡದೆ ಯುವಜನರಿಗೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಕಳೆದ ಹತ್ತು ವರ್ಷಗಳಿಂದ ಕೇಂದ್ರದಿಂದ ಜನಸಾಮಾನ್ಯರಿಗೆ ಬೆಲೆಏರಿಕೆ ಸಂಕಷ್ಟ ಎದುರಾಗಿದೆ. ಪೆಟ್ರೋಲ್, ಅಡುಗೆ ಅನಿಲ, ದಿನ ಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದನ್ನು ಮನಗಂಡ ರಾಜ್ಯದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಅನುಷ್ಟಾನಕ್ಕೆ ತರುವ ಮೂಲಕ ಜನರ ಬದುಕು ಕಟ್ಟಿಕೊಡುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.
    ಪ್ರಸ್ತುತ ಐದು ಶಾಸಕರನ್ನು ಒಳಗೊಂಡಿರುವ ಜಿಲ್ಲೆ ಚಿಕ್ಕಮಗಳೂರು. ಮುಖ್ಯವಾಗಿ ಸಿ.ಟಿ.ರವಿ ಮಣಿಸಿದ ತಮ್ಮಯ್ಯ ಅವರನ್ನು ಮರೆಯಲಾಗದು. ಅಲ್ಲದೇ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರದ ಸುಳಿವೇ ಇರಲಿಲ್ಲ. ಆದರೆ ರಾಹುಲ್‌ಗಾಂಧಿ ಹಾಗೂ ಮಲ್ಲಿಕಾರ್ಜುನ್ ಖರ್ಗೆ ನಾಯಕತ್ವದಲ್ಲಿ ಅಧಿಕಾರ ಪಡೆದಿರುವುದು ಸಾಮಾನ್ಯ ವಿಚಾರವಲ್ಲ ಎಂದರು.
    ರಾಜ್ಯದಲ್ಲಿ ಸುಮಾರು ೧.೬೫ ಕೋಟಿ ಮನೆಗಳಿಗೆ ಉಚಿತ ವಿದ್ಯುತ್, ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ನೀಡಲಾಗಿದೆ. ಉಚಿತ ಅಕ್ಕಿ ವಿತರಣೆಯಲ್ಲೂ ಮಾತನ್ನು ತಪ್ಪದೇ ಪ್ರಾಮಾಣಿಕವಾಗಿ ನಡೆದುಕೊಂಡಿರುವುದು ರಾಜ್ಯ ಕಾಂಗ್ರೆಸ್ ಸರ್ಕಾರ. ಬಡವರ ಅಕ್ಕಿಯನ್ನು ನೀಡದೇ ನಾಟಕವಾಡುತ್ತಿರುವುದು ಕೇಂದ್ರ ಸರ್ಕಾರ ಎಂಬುದನ್ನು ಪ್ರತಿಯೊಬ್ಬರೂ ಅರಿಯಬೇಕು ಎಂದು ಹೇಳಿದರು.
    ಪ್ರಪಂಚದಲ್ಲಿ ಪ್ರತಿಯೊಬ್ಬ ಮನುಷ್ಯ ಕಾಲಕ್ರಮೇಣ ಮುಂದಿನ ಪೀಳಿಗೆಗೆ ಅವಕಾಶ ಕಲ್ಪಿಸಿ ಒಂದಲ್ಲೊಂದು ದಿನ ಬದುಕನ್ನು ತೊರೆಯಬೇಕು. ಈ ಮಧ್ಯದಲ್ಲಿ ನಾವು ಸಲ್ಲಿಸಿದ ಸೇವೆ ಜನಮಾನಸದಲ್ಲಿ ಉಳಿಯುವಂತಾಗಬೇಕು. ಆ ಪ್ರಾಮಾಣಿಕ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಹೀಗಾಗಿ ರಾಜಕೀಯದಲ್ಲಿ ಸೇವಾಗುಣ ಮುಖ್ಯವಾಗಿ ಅಳವಡಿಸಿಕೊಳ್ಳಬೇಕು ಎಂದರು.
    ದೇಶದಲ್ಲಿ ಕಾಂಗ್ರೆಸ್ ಅಧಿಕಾರ ಪಡೆಯಲಿಚ್ಚಿಸುವ ನಿಟ್ಟಿನಲ್ಲಿ ಯುವಕರು ಅತಿಹೆಚ್ಚು ಸಂಖ್ಯೆಯಲ್ಲಿ ಬೆಂಬಲಿಸಬೇಕು. ಪ್ರಸ್ತುತ ವಾರ್ ರೂಂ.ನಲ್ಲಿ ಕಾರ್ಯನಿರ್ವಹಿಸುತ್ತಿರುವ ಯುವಜನಾಂಗಕ್ಕೆ ಚುನಾವಣಾ ಬಳಿಕ ಮತ್ತೊಮ್ಮೆ ಭೇಟಿ ಮಾಡಿ ದನ್ಯವಾದ ಸಲ್ಲಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.
    ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ಡಿ.ಎಲ್.ವಿಜಯ್‌ಕುಮಾರ್ ಮಾತನಾಡಿ, ಉಡುಪಿ-ಚಿಕ್ಕಮಗಳೂರು ಅಭ್ಯರ್ಥಿ ಕರಾವಳಿ ಪ್ರದೇಶವರಾದ ಕಾರಣ ಎರಡು ಜಿಲ್ಲೆಗಳಿಗೂ ಸೇರಿ ಚಿಕ್ಕಮಗಳೂರಿನಲ್ಲಿ ಚುನಾವಣಾ ವಾರ್ ರೂಂ. ನಿರ್ಮಾಣಗೊಂಡಿದೆ. ಒಟ್ಟಾರೆ ಜಿಲ್ಲೆಗಳಿಂದ ೧೮ ಬ್ಲಾಕ್‌ಗಳಿಗೆ ಸಂಪರ್ಕವನ್ನು ಹೊಂದಲಿದೆ ಎಂದು ತಿಳಿಸಿದರು.
    ವಾರ್ ರೂಂ.ನಲ್ಲಿ ಕಾರ್ಯನಿರ್ವಹಿಸುವ ಯುವಕರು ಪ್ರತಿ ಬೂತ್ ಅಧ್ಯಕ್ಷರಿಗೆ ಕರೆಮಾಡಿ ಗ್ಯಾರಂಟಿ ಕಾರ್ಡ್ ತಲುಪಿದೆ, ವಾಟ್ಸಪ್ ಗ್ರೂಪ್ ರಚನೆಗೊಂಡಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಕಲೆಹಾಕುವರು. ಯುವತಿಯರು ಗೃಹಲಕ್ಷ್ಮೀ ಯೋಜನೆಯ ಮಹಿಳೆಯರಿಗೆ ಕರೆಮಾಡಿ ಸೌಲಭ್ಯ ಸದ್ಬಳಕೆಯಾಗಿದೆಯೇ ಎಂಬುದನ್ನು ದೃಢೀಕರಿಸಿಕೊಂಡು ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
    ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಅಂಶುಮಂತ್, ಶಾಸಕ ಎಚ್.ಡಿ.ತಮ್ಮಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದ ಸ್ವಾಮಿ, ಪ್ರಚಾರ ಸಮಿತಿ ಅಧ್ಯಕ್ಷ ಹನೀಫ್, ಮುಖಂಡರಾದ ಬಿ.ಎಚ್.ಹರೀಶ್, ನಯಾಜ್, ಶ್ರೀಕಾಂತ್, ಪ್ರದೀಪ್, ಅನ್ಸರ್ ಆಲಿ, ಕೆ.ಭರತ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts