ಜೈಪುರ: ಮುಂದಿನ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷದ ಹಾಲಿ ಶಾಸಕ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಚುನಾವಣೆಯ ಹೊಸ್ತಿಲಲ್ಲಿ ಪಕ್ಷಕ್ಕೆ ದೊಡ್ಡ ಹೊಡೆತ ಒಂದನ್ನು ನೀಡಿದ್ದಾರೆ.
ಧೋಲ್ಪುರದ ಬಾರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಗಿರ್ರಾಜ್ ಮಾಲಿಂಗ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದು, ಕಾಂಗ್ರೆಸ್ನಲ್ಲಿ ಕೊಡಲಾಗುತ್ತಿದ್ದ ಕಿರುಕುಳ ತಾಳಲಾರದೆ ಬಿಜೆಪಿ ಸೇರ್ಪಡೆಯಾಗಿರುವುದಾಗಿ ತಿಳಿಸಿದ್ದಾರೆ. ಗಿರಿರಾಜ್ ಜತೆಗೆ ಆಮ್ ಆದ್ಮಿ ಪಕ್ಷದ ಯುವ ಘಟಕದ ಅಧ್ಯಕ್ಷ ಅನುರಾಗ್ ಸಿಂಗ್ ಬ್ರಾರ್ ಬಿಜೆಪಿ ಸೇರಿದ್ದಾರೆ.
ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಗಿರಿರಾಜ್, ಕಳೆದ ವರ್ಷ ಇಂಜಿನಿಯರ್ಗಳ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಸುಳ್ಳು ಮೊಕದ್ದಮೆಯನ್ನು ದಾಖಲಿಸಿ ಪೊಲೀಸರಿಗೆ ಶರಣಾಗುವಂತೆ ಮಾಡಿದ್ದರು. ಮುಖ್ಯಮಂತ್ರಿಗಳು ನನ್ನ ಮಾತನ್ನು ಕೇಳದೆ ಯಾರೋ ಕೆಲವರ ಮಾತನ್ನು ಕಟ್ಟಿಕೊಂಡು ರಾಜಕೀಯ ಮಾಡಿದರು. ಕಾಂಗ್ರೆಸ್ನಲ್ಲಿ ನನ್ನನ್ನು ನಡೆಸಿಕೊಂಡ ರೀತಿಯಿಂದ ಮನನೊಂದು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಮೆಚ್ಚಿ ಬಿಜೆಪಿ ಸೇರಿದ್ದೇನೆ ಎಂದು ಗಿರಿರಾಜ್ ಮಾಲಿಂಗ ಹೇಳಿದ್ದಾರೆ.
ಇದನ್ನೂ ಓದಿ: ಕ್ರಿಕಟ್ ದಿಗ್ಗಜನ ದಾಖಲೆ ಮುರಿದ ಬೆನ್ನಲ್ಲೇ ಕೊಹ್ಲಿಯನ್ನು ಸ್ವಾರ್ಥಿ ಎಂದ ನೆಟ್ಟಿಗರು
ಗಿರಿರಾಜ್ ಜತೆಗೆ ರಾಜ್ಯ ಕಾಂಗ್ರೆಸ್ ಘಟಕದ ಪ್ರಮುಖ ನಾಯಕರಾದ ಮುಸ್ತಾಕ್ ಅಹ್ಮದ್ ಖಾನ್, ರವಿ ಪಚೌರಿ, ದೀಪ್ ಸಿಂಗ್ ಕುಶ್ವಾಹ, ಮಂಗಿಲಾಲ್ ಶರ್ಮಾ ಮತ್ತು ರಾಮವರನ್ ಶರ್ಮಾ ಕೂಡ ಬಿಜೆಪಿ ಸೇರಿದ್ದಾರೆ. ಧೋಲ್ಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಮ್ಮದೇ ಆದ ಪ್ರಾಬಲ್ಯವನ್ನು ಹೊಂದಿರುವ ಗಿರಿರಾಜ್ ಬಿಜೆಪಿ ಸೇರ್ಪಡೆ ಕಾಂಗ್ರೆಸ್ಗೆ ದೊಡ್ಡ ಹೊಡೆತ ಎಂದೇ ಹೇಳಲಾಗಿದೆ.
ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ಚುನಾವಣೆ ಮುಂಬರುವ ಲೋಕಸಭೆ ಎಲೆಕ್ಷನ್ಗೆ ಸೆಮಿಫಿನಾಲೆ ಎಂದೇ ಹೇಳಲಾಗಿದೆ. 200 ಸದಸ್ಯಬಲದ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.