ಚಿಕ್ಕಮಗಳೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷ ಸೋಲುತ್ತದೆ ಎಂಬ ಕಾರಣಕ್ಕೆ ಕಾಂಗ್ರೆಸಿಗರು ಯುದ್ಧಕ್ಕೆ ಮುಂಚೆಯೇ ಸೋಲು ಒಪ್ಪಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಬುಧವಾರ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದ ಬಳಿಕ ಮಾಜಿ ಸಚಿವ ಸಿ.ಟಿ.ರವಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದೇಶದಲ್ಲಿ ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗುತ್ತಾರೆ. ರಾಜ್ಯದಲ್ಲಿ 28 ಸ್ಥಾನಗಳನ್ನೂ ಬಿಜೆಪಿ ಗೆಲ್ಲುತ್ತದೆ ಎಂದು ಕಾಂಗ್ರೆಸ್ ಶಾಸಕರೇ ಹೇಳಿದ್ದಾರೆ. ಕಾಂಗ್ರೆಸ್ ಶಾಸಕರ ಪರವಾಗಿ ಬಾಲಕೃಷ್ಣ ಈ ಮಾತನ್ನು ಹೇಳಿದ್ದಾರೆ ಎಂದರು.
ದೇಶದಲ್ಲಿ ಐಎನ್ಡಿಐಎ ಒಡೆದು ಚೂರಾಗಿದೆ. ಮೈತ್ರಿ ಒಕ್ಕ್ಕೂಟದಿಂದ ಒಬ್ಬೊಬ್ಬರೇ ಹೊರಬರುತ್ತಿದ್ದಾರೆ. ರಾಹುಲ್ ಗಾಂಧಿ ನೇತೃತ್ವದ ಹೊಂದಾಣಿಕೆಗೆ ಯಾರೂ ಒಪ್ಪುತ್ತಿಲ್ಲ ಎಂದು ವ್ಯಂಗ್ಯವಾಡಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ 400 ಸ್ಥಾನ ಗೆಲ್ಲುವುದು ಬಿಜೆಪಿ ಗುರಿ. ಆ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.