ಮೈಸೂರು: ಇತ್ತೀಚೆಗಷ್ಟೇ ಉದ್ಘಾಟನೆಯಾದ ನೂತನ ಸಂಸತ್ ಭವನದಲ್ಲಿ ಭಾರಿ ಭದ್ರತಾ ಲೋಪ ಕಂಡುಬಂದಿದ್ದು, ಎರಡು ಪ್ರತ್ಯೇಕ ಘಟನೆಯಲ್ಲಿ ನಾಲ್ವರು ಅಪರಿಚಿತರು ಸದನದ ಒಳಗೆ ಮತ್ತು ಹೊರಗೆ ಭಯದ ವಾತಾವರಣ ಸೃಷ್ಟಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಕೃತ್ಯಕ್ಕೆ ಸಂಸದರೇ ನೇರ ಹೊಣೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.
ಇದನ್ನೂ ಓದಿ: ಲೋಕಸಭೆ ಕಲಾಪ ವೇಳೆ ಭದ್ರತಾ ಲೋಪ; ಸಂಸದ ಪ್ರತಾಪ್ ಸಿಂಹ ಅವರನ್ನು ವಿಚಾರಣೆಗೆ ಒಳಪಡಿಸಿ: ಸಿಎಂ ಸಿದ್ದರಾಮಯ್ಯ
ವೈರಲ್ ಆಗಿರುವ ವಿಡಿಯೋದಲ್ಲಿ ಮೈಸೂರಿನ ಜಲದರ್ಶಿನಿ ಅತಿಥಿಗೃಹ ಆವರಣದಲ್ಲಿರುವ ಸಂಸದ ಪ್ರತಾಪ್ ಸಿಂಹ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ್ದಾರೆ. ಈ ಕೃತ್ಯಕ್ಕೆ ಸಂಸದ ಪ್ರತಾಪ್ ಸಿಂಹ ಅವರೇ ನೇರ ಹೊಣೆ ಎಂದು ಆರೋಪಿಸಿದ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ಸಂಸದರ ಕಚೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.