ಪಿರಿಯಾಪಟ್ಟಣ: ಭವ್ಯ ಭಾರತದ ಭವಿಷ್ಯವನ್ನು ಮುನ್ನಡೆಸುವ ನಿಟ್ಟಿನಲ್ಲಿ ಸಂವಿಧಾನ ರಚಿತಗೊಂಡಿದ್ದು ಸಂವಿಧಾನದ ಪೀಠಿಕೆಯನ್ನು ನಾವೆಲ್ಲರೂ ಅರ್ಥೈಸಿಕೊಂಡಲ್ಲಿ ಈ ದಿನಕ್ಕೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ತಹಸೀಲ್ದಾರ್ ಕುಂಜಿ ಅಹಮ್ಮದ್ ತಿಳಿಸಿದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಧ್ವಜ ಸಂದೇಶ ನೀಡಿ ಮಾತನಾಡಿದರು.
ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ವ್ಯವಸ್ಥೆ, ಸಂಸದೀಯ ವ್ಯವಸ್ಥೆ, ಪೌರತ್ವ ಸೇರಿದಂತೆ ಸಾಕಷ್ಟು ವಿಶೇಷತೆಗಳು ನಮ್ಮ ಸಂವಿಧಾನದಲ್ಲಿ ಅಡಕಗೊಂಡಿದ್ದು ವ್ಯಕ್ತಿ ಗೌರವ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಸಂವಿಧಾನವನ್ನು ಅಳವಡಿಸಿಕೊಂಡಿದ್ದೇವೆ ಎಂದು ತಿಳಿಸಿದರು.
ಸ್ವಾತಂತ್ರ್ಯ ಪಡೆದ ನಂತರ ಹೊಸ ಭರವಸೆಯೊಂದಿಗೆ ಆಡಳಿತ ನಡೆಸಲು ಮುಂದಾದ ಸರ್ಕಾರ ಸುಗಮ ಆಡಳಿತಕ್ಕಾಗಿ ಉತ್ತಮ ಸಂವಿಧಾನ ರಚಿಸಿಕೊಳ್ಳಲಾಯಿತು, ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿಶ್ರಮದಿಂದ ಪ್ರಪಂಚದಲ್ಲಿ ಅತ್ಯುತ್ತಮ ಸಂವಿಧಾನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸಂವಿಧಾನ ನಮ್ಮದಾಗಿದೆ ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್ ಸಂವಿಧಾನ ಪೀಠಿಕೆ ಬೋಧಿಸಿದರು. ಬಿಇಒ ಬಸವರಾಜು ಮಾತನಾಡಿದರು. ಶಾಲಾ ವಿದ್ಯಾರ್ಥಿಗಳು ಮತ್ತು ಪೊಲೀಸ್ ಇಲಾಖೆ ವತಿಯಿಂದ ಆಕರ್ಷಕ ಪಥಸಂಚಲನ ನಡೆಯಿತು. ವಿವಿಧ ಶಾಲೆಯ ಮಕ್ಕಳು ಸಮೂಹ ನೃತ್ಯ ನಡೆಸಿಕೊಟ್ಟರು.
ತಾಪಂ ಇಒ ಸುನೀಲ್ಕುಮಾರ್, ಪುರಸಭೆ ಮುಖ್ಯಾಧಿಕಾರಿ ಕೆ.ಯು.ಮುತ್ತಪ್ಪ, ಕೃಷಿ ಇಲಾಖೆ ಎಡಿಎ ವೈ.ಪ್ರಸಾದ್, ತೋಟಗಾರಿಕೆ ಇಲಾಖೆ ಎಡಿಎಚ್ ಪ್ರಸಾದ್, ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ಲೋಕೋಪಯೋಗಿ ಇಲಾಖೆ ಎಇಇ ವೆಂಕಟೇಶ್, ಪುರಸಭೆ ಸದಸ್ಯರಾದ ರತ್ನಮ್ಮ, ನಿರಂಜನ್, ಮಂಜುನಾಥ್, ಪಿ.ಸಿ.ಕೃಷ್ಣ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಪ್ರಶಾಂತ್ ಮತ್ತಿತರರು ಹಾಜರಿದ್ದರು.