More

    ರಾಜ್ಯ ಬಜೆಟ್​​ನಲ್ಲಿ ನೀರಾವರಿ ಕ್ಷೇತ್ರಕ್ಕೆ ಸಿಕ್ಕ ಕೊಡುಗೆ, ಸಮಗ್ರ ಚಿತ್ರಣ ಹೀಗಿದೆ…

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 14ನೇ ಬಾರಿಗೆ ರಾಜ್ಯ ಬಜೆಟ್​​​ನ್ನು ಮಂಡಿಸಿದ್ದು, ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ.

    ಜಲಸಂಪನ್ಮೂಲ ಇಲಾಖೆಯಡಿ ಕಳೆದ ಎಪ್ರಿಲ್​ 1ರವರೆಗೆ ಅನುಮೋದಿಸಲಾಗಿರುವ ರಾಜ್ಯದ ಹಲವಾರು ಯೋಜನೆಗಳಿಗೆ ಒಂದು ಲಕ್ಷ ಕೋಟಿ ರೂ.ಗಳನ್ನು ಒದಗಿಸುವ ಅವಶ್ಯಕತೆಯಿದೆ. ಈ ಯೋಜನೆಗಳ ವೆಚ್ಚವು ಕಾಮಗಾರಿ ಹಾಗೂ ಭೂಸ್ವಾಧೀನ ವೆಚ್ಚ ಹೆಚ್ಚಳದ ಕಾರಣ ಇದು 25,000 ರಿಂದ 40,000 ಕೋಟಿ ರೂ.ಗಳಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದಿದ್ದಾರೆ.

    ಇದಲ್ಲದೇ ಕಳೆದ 6 ತಿಂಗಳ ಅವಧಿಯಲ್ಲಿ 25,548 ಕೋಟಿ ರೂ. ಅಂದಾಜು ವೆಚ್ಚದ 1,274 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಚಾಲನೆ ನೀಡಲಾಗಿದೆ. ಮಂದಗತಿಯಲ್ಲಿ ಸಾಗುತ್ತಿರುವ ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮವಹಿಸುವುದರೊಂದಿಗೆ ಪ್ರಸಕ್ತ ಸಾಲಿನಲ್ಲಿ 940 ಕೋಟಿ ರೂ. ಬಾಕಿ ಮೊತ್ತದ 10 ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ, ಸುಮಾರು 25,948 ಹೆಕ್ಟೇರ್‌ ನೀರಾವರಿಗೆ ಸಾಮರ್ಥ್ಯ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

    ಇದನ್ನೂ ಓದಿ: ದೃಷ್ಟಿಮಾಂದ್ಯರಿಗೆ ‘ಆಶಾಕಿರಣ’; ಮಧುಮೇಹ, ರಕ್ತದೊತ್ತಡ ಇರುವವರ ಮನೆಬಾಗಿಲಿಗೆ ಔಷಧಿ!

    ಕೇಂದ್ರ ಸರ್ಕಾರದ PMKSY-AIBP ಯೋಜನೆಯಡಿ 2021-26ನೇ ಅವಧಿಗೆ ಪರಿಗಣಿಸಲಾದ ಪಟ್ಟಿಯಲ್ಲಿ ರಾಜ್ಯದ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 1 ಮತ್ತು 2ರ ವಿಸ್ತರಣೆ ಹಾಗೂ ಸನ್ನತಿ ಏತ ನೀರಾವರಿ ಯೋಜನೆಗಳನ್ನು ಗುರುತಿಸಲಾಗಿದೆ. ಸದರಿ ಯೋಜನೆಗಳಿಗೆ ಸಕ್ಷಮ ಪ್ರಾಧಿಕಾರಗಳ ತೀರುವಳಿ ಪಡೆದು, ಕೇಂದ್ರ ಸಹಾಯಧನ ಪಡೆಯಲು ಆದ್ಯತೆಯ ಕ್ರಮ ಜರುಗಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

    ಮಧ್ಯ ಕರ್ನಾಟಕದ ಪ್ರಮುಖ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಇಲ್ಲಿಯವರೆಗೂ ಅಧಿಕೃತವಾಗಿ ಅನುಮೋದಿಸಿರುವುದಿಲ್ಲ. ಕೇಂದ್ರ ಸರ್ಕಾರವು 2023-24ನೇ ಸಾಲಿನ ತನ್ನ ಆಯವ್ಯಯದಲ್ಲಿ 5,300 ಕೋಟಿ ರೂ.ಗಳ ಅನುದಾನವನ್ನು ಭದ್ರಾ ಯೋಜನೆಗೆ ಘೋಷಿಸಿದ್ದು ಸದರಿ ಅನುದಾನವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಯೋಜನೆಯ ಅನುಷ್ಠಾನಕ್ಕೆ ಆದ್ಯತೆಯ ಮೇಲೆ ಕ್ರಮವಹಿಸಲಾಗುವುದು ಎಂದು ಹೇಳಿದ್ದಾರೆ.

    ಇದನ್ನೂ ಓದಿ: ರಾಜ್ಯ ಬಜೆಟ್​: ತೃತೀಯಲಿಂಗಿ, ಮಾಜಿ ದೇವದಾಸಿಯರೂ ಗೃಹಲಕ್ಷ್ಮೀ ಯೋಜನೆ ವ್ಯಾಪ್ತಿಗೆ

    ಮಹದಾಯಿ ನ್ಯಾಯಾಧಿಕರಣದಿಂದ ಕಳಸಾ ಮತ್ತು ಬಂಡೂರಾ ನಾಲಾ ತಿರುವು ಕುಡಿಯುವ ನೀರಿನ ಯೋಜನೆಗೆ ಹಂಚಿಕೆಯಾದ 3.90 ಟಿ.ಎಂ.ಸಿ. ನೀರಿನ ಬಳಕೆಗಾಗಿ ಈಗಾಗಲೇ ಕೇಂದ್ರ ಜಲ ಆಯೋಗದ ತೀರುವಳಿ ದೊರಕಿದ್ದು, ಅವಶ್ಯಕವಿರುವ ಅರಣ್ಯ ತೀರುವಳಿ ಪಡೆದು, ಕಾಮಗಾರಿಗಳಿಗೆ ಚಾಲನೆ ನೀಡಲು ಪ್ರಯತ್ನಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಕುಲಹಳ್ಳಿ-ಹನ್ನೂರು, ತಿಮ್ಮಾಪುರ, ಸಸಾಲಟ್ಟಿ-ಶಿವಲಿಂಗೇಶ್ವರ ಮತ್ತು ಮಂಟೂರು ಮಹಾಲಕ್ಷ್ಮಿ ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ ಸುಮಾರು 39,134 ಹೆಕ್ಟೇರ್‌ ಅಚ್ಚುಕಟ್ಟು ಸ್ಥಿರೀಕರಣ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

    ನಮ್ಮ ಸರ್ಕಾರದ ಅವಧಿಯಲ್ಲಿ ತೀವ್ರಗತಿಯಲ್ಲಿ ಪೂರ್ಣಗೊಳಿಸಲು ಚಾಲನೆಗೊಳಿಸಿದ್ದ 12,912 ಕೋಟಿ ರೂ. ಮೊತ್ತದ ಎತ್ತಿನ ಹೊಳೆ ಯೋಜನೆಯನ್ನು ಹಿಂದಿನ ಸರ್ಕಾರವು ಸಕಾಲದಲ್ಲಿ ಪೂರ್ಣಗೊಳಿಸದ ಕಾರಣ ದರ ಹೆಚ್ಚಳಗೊಂಡು ಈ ಯೋಜನೆಯು 23,252 ಕೋಟಿ ರೂ. ಮೊತ್ತಕ್ಕೆ ಪರಿಷ್ಕೃತಗೊಂಡಿದೆ.

    ಇದನ್ನೂ ಓದಿ: ಬಿಜೆಪಿಯ ಯೋಜನೆಯನ್ನು ಕೈಬಿಟ್ಟ ಕಾಂಗ್ರೆಸ್: ಜಿಲ್ಲೆಗೊಂದು ಗೋಶಾಲೆ, ವಿವೇಕ ಸಿರಿಗೆ ಎಳ್ಳುನೀರು!

    ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯ ವಿವರವಾದ ಯೋಜನಾ ವರದಿ ಹಾಗೂ ಪರಿಸರ ತೀರುವಳಿ ಪ್ರಸ್ತಾವನೆಯನ್ನು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಶೀಘ್ರವಾಗಿ ತೀರುವಳಿ ಪಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. Compensatory afforestationಗೆ ಅಗತ್ಯವಿರುವ ಭೂಮಿಯನ್ನು ಗುರುತಿಸಲಾಗಿದ್ದು, ಭೂಸ್ವಾಧೀನ ಪ್ರಕ್ರಿಯೆಗಳನ್ನು ಜರುಗಿಸಲು ಆದ್ಯತೆ ಮೇರೆಗೆ ಕ್ರಮವಹಿಸಲಾಗುವುದು.

    ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ:
    ರಾಜ್ಯದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು 172 ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಇವುಗಳಲ್ಲಿ 19 ಕೆರೆ ತುಂಬಿಸುವ ಯೋಜನೆಗಳನ್ನು 770 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಿ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ, ಬೀದರ್, ಉತ್ತರ ಕನ್ನಡ, ವಿಜಯನಗರ, ಕೊಪ್ಪಳ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ 899 ಕೆರೆಗಳಿಗೆ ನೀರು ತುಂಬಿಸಲಾಗುವುದು.

    ಎತ್ತಿನ ಹೊಳೆ ಯೋಜನೆಯಡಿ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮವಹಿಸಿ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲು ಆದ್ಯತೆಯ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು.

    ಇದನ್ನೂ ಓದಿ: ದಾಖಲೆ ಬರೆದ ‘ಸಲಾರ್’ ಟೀಸರ್; ಸಂಚಲನ ಮೂಡಿಸಿದ ಪ್ರಭಾಸ್-ನೀಲ್​​ ಕಾಂಬಿನೇಷನ್​!

    ತುಂಗಭದ್ರಾ ಜಲಾಶಯದಲ್ಲಿ ಹೂಳಿನ ಸಂಗ್ರಹಣೆಯಿಂದ ಉಂಟಾಗಿರುವ ನೀರು ಸಂಗ್ರಹಣೆ ಸಾಮರ್ಥ್ಯದ ಕೊರತೆ ನಿವಾರಿಸಲು ಕೊಪ್ಪಳ ಜಿಲ್ಲೆಯ ನವಲೆ ಬಳಿ ಸಮತೋಲನಾ ಜಲಾಶಯ (Balancing reservoir) ನಿರ್ಮಾಣ ಯೋಜನೆಯನ್ನು ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚಿಸಿ, ಸಹಮತಿಯೊಂದಿಗೆ ಯೋಜನೆ ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳಲಾಗುವುದು.

    ಕೃಷ್ಣಾ ನ್ಯಾಯಾಧಿಕರಣ-2ರ ತೀರ್ಪಿನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ಕ್ಕೆ ಹಂಚಿಕೆಯಾಗಿರುವ 130 ಟಿ.ಎಂ.ಸಿ ನೀರಿನ ಬಳಕೆಗಾಗಿ ಯೋಜನಾ ಕಾಮಗಾರಿಗಳ ಜೊತೆಗೆ ಭೂಸ್ವಾಧೀನತೆ ಹಾಗೂ ಪುನರ್‌ ವಸತಿ ಮತ್ತು ಪುನರ್‌ ನಿರ್ಮಾಣಕ್ಕೆ ಆದ್ಯತೆ ನೀಡಿ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು.(ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts