ತೀರ್ಥಹಳ್ಳಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಯನ್ನು ಪ್ರತಿ ಮನೆಗಳಿಗೆ ತಲುಪಿಸುವ ಮೂಲಕ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯವನ್ನು ಮತವಾಗಿ ಪರಿವರ್ತಿಸುವಲ್ಲಿ ಕಾರ್ಯಕರ್ತರು ಮುಂದಾಗಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಪಟ್ಟಣದ ಪ್ರೇರಣಾ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಮಂಡಲ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಸಂಸದನಾಗಿ ನನ್ನ ಅವಧಿಯಲ್ಲಿ ಈ ಕ್ಷೇತ್ರಕ್ಕೆ ದಾಖಲೆ ಪ್ರಮಾಣದ ಅನುದಾನವನ್ನು ತಂದಿದ್ದೇನೆ. ವಿಶೇಷವಾಗಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ, ಸೇತುವೆ ನಿರ್ಮಾಣ, ರೈಲ್ವೆ ಸಂಪರ್ಕ, ವಿಮಾನ ನಿಲ್ದಾಣ ಹೀಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಮಂಡಲದ ನೂತನ ಅಧ್ಯಕ್ಷ ನವೀನ್ ಹೆದ್ದೂರು ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಪ್ರತಿ ಬೂತ್ ಮಟ್ಟದಲ್ಲಿ ಪ್ರಚಾರ ಪಡಿಸುವ ಮೂಲಕ ಕಾರ್ಯಕರ್ತರು ಮತದಾರರ ಮನವನ್ನು ಗೆಲ್ಲಬೇಕಿದೆ ಎಂದರು.
ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ರಾಜ್ಯ ಸರ್ಕಾರ ಅಧಿಕಾರಕ್ಕೆ ವರ್ಷ ಸಮೀಪಿಸುತ್ತಿದ್ದರೂ ಗ್ಯಾರಂಟಿ ಯೋಜನೆಯಿಂದಾಗಿ ಅಭಿವೃದ್ಧಿ ಶೂನ್ಯವಾಗಿದೆ. ಕೃಷಿ ಸಮ್ಮಾನ್, ಬೆಳೆ ವಿಮೆ ಮುಂತಾದ ಯೋಜನೆಗಳ ಮೂಲಕ ಕೇಂದ್ರ ಸರ್ಕಾರದ ಕಳೆದ ಹತ್ತು ವರ್ಷಗಳ ಸಾಧನೆ ದೇಶದ ಚಿತ್ರಣವನ್ನೇ ಬದಲಿಸಿದೆ. ರಾಜ್ಯದಲ್ಲಿ ನಮ್ಮ ಸರ್ಕಾರದ ಅವಧಿಯಲ್ಲಿ ಕೂಡ ತಾಲೂಕಿನ ಎಲ್ಲ ಸಮುದಾಯ ಭವನಗಳಿಗೆ ಕೋಟ್ಯಂತರ ರೂ. ಅನುದಾನ ನೀಡಿದೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟು ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.
ಮಂಡಲದ ನೂತನ ಅಧ್ಯಕ್ಷ ನವೀನ್ ಹೆದ್ದೂರು, ಬಾಳೇಬೈಲು ರಾಘವೇಂದ್ರ ನಾಯಕ್, ಕೆ.ನಾಗರಾಜ ಶೆಟ್ಟಿ, ಅಶೋಕಮೂರ್ತಿ, ಕೆ.ಎಂ.ಮೋಹನ್, ರಕ್ಷಿತ್ ಮೇಗರವಳ್ಳಿ, ಮೋಹನ್ ಭಟ್ ಇದ್ದರು.