ಹನೂರು : ಪಟ್ಟಣದಲ್ಲಿ ಏಪ್ರಿಲ್ 1 ರಿಂದ 4 ದಿನಗಳ ಕಾಲ ಜರುಗುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರಾ ಮಹೋತ್ಸವವು ಶಾಂತಿಯುತವಾಗಿ ನೆರವೇರಲು ಎಲ್ಲರ ಸಹಕಾರ ಅತ್ಯಗತ್ಯ ಎಂದು ಇನ್ಸ್ಪೆಕ್ಟರ್ ಶಶಿಕುಮಾರ್ ತಿಳಿಸಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಭಾನುವಾರ ಆಯೋಜಿಸಿದ್ದ ವಿವಿಧ ಸಮುದಾಯಗಳ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಬೆಟ್ಟಳ್ಳಿ ಜಾತ್ರಾ ಮಹೋತ್ಸವ ತನ್ನದೇ ಆದ ಐತಿಹಾಸಿಕ ಹಿನ್ನೆಲೆ ಹೊಂದಿದ್ದು, ಜಾತ್ರೆಗೆ ಅಪಾರ ಸಂಖ್ಯೆಯಲ್ಲಿ ಭಾಗವಹಿಸುವುದು ಗಮನಕ್ಕೆ ಬಂದಿದೆ. ಹಾಗಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸುವುದು ನಮ್ಮ ಕರ್ತವ್ಯ. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಜಾತ್ರೆ ಸುಸೂತ್ರವಾಗಿ ನಡೆಯಲು ತಮ್ಮೆಲ್ಲರ ಸಹಕಾರ ಮುಖ್ಯ. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪ್ರತಿಯೊಬ್ಬರೂ ಇದನ್ನು ಪಾಲನೆ ಮಾಡಬೇಕು. ಯಾವುದೇ ಕಾರಣಕ್ಕೂ ಉಲ್ಲಂಘನೆಯಾಗಬಾರದು. ಈ ಬಗ್ಗೆ ಅಗತ್ಯ ಕ್ರಮವಹಿಸಬೇಕು ಎಂದು ಸೂಚಿಸಿದರು.
ಶ್ರೀ ಬೆಟ್ಟಳ್ಳಿ ಮಾರಮ್ಮ ಆಡಳಿತ ಮಂಡಳಿ ಅಧ್ಯಕ್ಷ ಲಿಂಗರಾಜು ಮಾತನಾಡಿ, ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಅಗ್ನಿಕುಂಡ ಕಂಬ ಸ್ಥಾಪನೆ, ಜಾಗರ ಸಮರ್ಪಣೆ, ತಂಪುಜ್ಯೋತಿ, ಬಾಯಿಬೀಗ ಹಾಗೂ ಅಗ್ನಿಕುಂಡ ದರ್ಶನದ ದಿನದಂದು ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸಿಕೊಡಬೇಕು ಎಂದು ಮನವಿ ಮಾಡಿದರು.
ಎಸ್ಐ ರಿಹಾನಾ ಬೇಗಂ, ಪಪಂ ಸದಸ್ಯರಾದ ಹರೀಶ್, ಸಂಪತ್ಕುಮಾರ್, ಮುಖಂಡರಾದ ನಿಂಗರಾಜು, ತಿಮ್ಮೇಗೌಡ, ನಟರಾಜು, ಮಹೇಶ್, ಮಂಜೇಶ್, ಸಿದ್ದರಾಜು, ಮಾದೇಶ್, ನಟರಾಜು, ಸತೀಶ್ ಹಾಗೂ ಇನ್ನಿತರರು ಇದ್ದರು.