ಸಂಬರಗಿ: ಸಹಕಾರಿ ಸಂಸ್ಥೆಗಳನ್ನು ಪ್ರಾರಂಭಿಸುವುದಕ್ಕಿಂತ ಉಳಿಸಿ, ಬೆಳೆಸಿಕೊಂಡು ಹೋಗುವುದು ಅತ್ಯಂತ ಮುಖ್ಯವಾದ ಸಂಗತಿಯಾಗಿದ್ದು, ಈ ನಿಟ್ಟಿನಲ್ಲಿಯೇ 18 ವರ್ಷಗಳಿಂದಲೂ ಬರಪೀಡಿತ ಮದಬಾವಿ ಗ್ರಾಮದಲ್ಲಿ ಬೀರೇಶ್ವರ ಕೋ-ಆಪ್ ಸೊಸೈಟಿ ಗ್ರಾಹಕರ ವಿಶ್ವಾಸ ಗಳಿಸಿ ಲಾಭದಲ್ಲಿ ಮುನ್ನಡೆಯುತ್ತಿರುವುದು ಸಂತೋಷದ ಸಂಗತಿ ಎಂದು ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
ತಾಲೂಕಿನ ಮದಬಾವಿ ಗ್ರಾಮದಲ್ಲಿ ಸೋಮವಾರ ಶ್ರೀ ಬೀರೇಶ್ವರ ಕೋ-ಆಪ್ ಸೊಸೈಟಿ ನೂತನ ಕಟ್ಟಡ ಉದ್ಧಾಟಿಸಿ ಮಾತನಾಡಿದ ಅವರು, ಸಹಕಾರಿ ಸಂಸ್ಥೆಗಳ ಆಡಳಿತ ಮಂಡಳಿ ಸಂಸ್ಥೆಯ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರಬೇಕು. ಜತೆಗೆ ಸಂಘದ ಸಿಬ್ಬಂದಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿದರೆ ಪ್ರಗತಿ ಹೊಂದಲು ಸಾಧ್ಯ ಎಂದರು. ಜವಳಿ ಸಚಿವ ಶ್ರೀಮಂತ ಪಾಟೀಲ ಮಾತನಾಡಿ, ಸಹಕಾರಿ ಸಂಘಗಳು ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ರೈತರಿಗೆ, ಕೃಷಿ ಕಾರ್ಮಿಕರಿಗೆ, ಉದ್ಯಮಿಗಳಿಗೆ, ವ್ಯಾಪಾರಸ್ಥರಿಗೆ ಸಾಲ ನೀಡುವ ಮೂಲಕ ಸಮಗ್ರ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.
ಕೌಲಗುಡ್ಡ-ಹಣಮಾಪುರದ ಸಿದ್ಧ-ಸಿರಿ ಸಿದ್ಧಾಶ್ರಮದ ಶ್ರೀ ಸಿದ್ಧಯೋಗಿ ಅಮರೇಶ್ವರ ಮಹಾರಾಜರು ಮಾತನಾಡಿದರು. ಬೀರೇಶ್ವರ ಕೋ-ಆಪ್ ಸೊಸೈಟಿ ಅಧ್ಯಕ್ಷ ಸಂಜಯ ಬಾಡಗಿ ಅಧ್ಯಕ್ಷತೆ ವಹಿಸಿದ್ದರು. ಸರೂರ-ಅಗಸ ತೀರ್ಥದ ರೇವಣಸಿದ್ಧ ಮಹಾರಾಜರು, ಶೆಟ್ಟರ ಮಠದ ಮರುಳಸಿದ್ಧ ಸ್ವಾಮೀಜಿ, ಕೋಳಿಗುಡ್ಡದ ಸ್ವರೂಪಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಹಕಾರಿ ಸಂಘಗಳ ಹಿರಿಯ ನಿಬಂಧಕ ಎ.ಎಸ್. ಡೊಂಗರಗಾಂವ ಇತರರು ಇದ್ದರು.