ಬೆಂಗಳೂರು: ಬೆಂಗಳೂರು ಬಯೋ ಇನೋವೇಷನ್ ಸೆಂಟರ್ ವ್ಯಾಪ್ತಿಯಲ್ಲಿ ಜೈವಿಕ ತಂತ್ರಜ್ಞಾನ ಕ್ಷೇತ್ರದ ಕಂಪನಿಯೊಂದು ಕೇವಲ 5 ನಿಮಿಷದಲ್ಲಿ ಕೋವಿಡ್-19 ಸೋಂಕು ಪರೀಕ್ಷೆ ಮಾಡುವ ಯಂತ್ರವನ್ನು ಸಿದ್ಧಪಡಿಸಿದೆ. ಮತ್ತೊಂದು ಕಂಪನಿ ಸೋಂಕು ಪತ್ತೆ ಜತೆಗೆ ಸ್ಯಾಂಪಲ್ ಅನ್ನು ತಕ್ಷಣವೇ ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಯಂತ್ರ ಸಂಶೋಧಿಸಿದೆ ಎಂದು ಡಿಸಿಎಂ ಡಾ. ಸಿ.ಎನ್. ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ.
ರಾಜ್ಯ ಜೈವಿಕ ತಂತ್ರಜ್ಞಾನ ಇಲಾಖೆಯ ‘ಬೆಂಗಳೂರು ಬಯೋ ಇನೋವೇಷನ್ ಸೆಂಟರ್’ಗೆ ಗುರುವಾರ ಭೇಟಿ ನೀಡಿದ ಡಿಸಿಎಂ, ಕೋವಿಡ್-19 ಟೆಸ್ಟ್ ಹಾಗೂ ಔಷಧ ಅನ್ವೇಷಣೆಯಲ್ಲಿ ತೊಡಗಿರುವ ಸಂಶೋಧಕರ ಜತೆ ಸಂವಾದ ನಡೆಸಿದರು. ನಂತರ ಎಸ್ಎನ್ ಲೈಫ್ಸೈನ್ಸಸ್, ಕಫ/ಸ್ವ್ಯಾಬ್ ಮಾದರಿಯಿಂದ ಆರ್ಎನ್ಎ ಬೇರ್ಪಡಿಸುವ ಪ್ರೋಗ್ರಾಂಬಲ್ ರೊಬೊಟಿಕ್ ಯಂತ್ರ ಉದ್ಘಾಟಿಸಿ ಮಾತನಾಡಿದರು.
ಇದನ್ನೂ ಓದಿರಿ ಏರುತ್ತಿದೆ ಕರೊನಾ ಪ್ರಸರಣ; ಬೆಳ್ಳುಳ್ಳಿ, ಈರುಳ್ಳಿ ವ್ಯಾಪಾರಿಗಳ ಮೇಲೇ ಡೌಟ್
ಬೆಂಗಳೂರು ಬಯೋ ಇನೋವೇಷನ್ ಸೆಂಟರ್ನಲ್ಲಿ 45 ಸ್ಟಾರ್ಟ್ಅಪ್ ಗಳು ಕರೊನಾ ಸೋಂಕಿಗೆ ಔಷಧ ಕಂಡುಹಿಡಿಯುವ ಮತ್ತು ತ್ವರಿತವಾಗಿ ಸೋಂಕು ಪತ್ತೆ ಹಚ್ಚುವ ಕಾರ್ಯದಲ್ಲಿ ನಿರತವಾಗಿವೆ. ಕೆಲವು ಸ್ಟಾರ್ಟ್ ಅಪ್ ಗಳು ಕ್ಲಿನಿಕಲ್ ಟೆಸ್ಟ್ ಹಂತದಲ್ಲಿದ್ದರೆ, ಇನ್ನೂ ಕೆಲವು ಸಂಶೋಧನೆ ಮುಗಿಸಿ ನಿಯಂತ್ರಣ ಪ್ರಾಧಿಕಾರಗಳ ಒಪ್ಪಿಗೆಗಾಗಿ ಕಾಯುತ್ತಿವೆ. ಒಟ್ಟಿನಲ್ಲಿ ಕರ್ನಾಟಕದ ಸಂಸ್ಥೆಗಳು ಈ ಸೋಂಕಿನ ವಿರುದ್ಧ ಹೋರಾಡಲು ಜಗತ್ತಿಗೆ ಪರಿಹಾರ ಸೂಚಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಡಿಸಿಎಂ ಹೇಳಿದರು.
ಸೋಂಕು ಪತ್ತೆ ತಂತ್ರಜ್ಞಾನ ಅಭಿವೃದ್ಧಿ ಪಡಿಸಿರುವ ಕಂಪನಿಗಳು ಪ್ರಾಣಿಗಳ ಮೇಲೆ ಪ್ರಯೋಗ ಮಾಡಿ ಯಶಸ್ಸು ಸಾಧಿಸಿವೆ. ಇದೀಗ ಕರೊನಾ ಸೋಂಕಿತರ ಗಂಟಲು ದ್ರವ ನೀಡುವಂತೆ ಕೇಳಿಕೊಂಡಿವೆ. ಈ ಪ್ರಯೋಗ ಯಶಸ್ವಿಯಾದರೆ ಸ್ಥಳೀಯವಾಗಿ ಸಿದ್ಧಪಡಿಸಿದ ತಂತ್ರಜ್ಞಾನದಿಂದಲೇ ಸೋಂಕು ಪತ್ತೆ ಮಾಡಬಹುದು ಎಂದು ಹೇಳಿವೆ. ಆದರೆ, ಪಾಸಿಟಿವ್ ಬಂದಿರುವ ರೋಗಿಯ ಗಂಟಲು ದ್ರವ ಸಂಗ್ರಹ ಮತ್ತು ಪ್ರಯೋಗದ ಬಳಿಕ ವಿಲೇವಾರಿ ಮಾಡುವುದು ಸವಾಲಿನ ಕೆಲಸ. ಈ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು. ಸ್ಟಾರ್ಟ್ಅಪ್ ಕಂಪನಿಗಳು ಮತ್ತು ಸರ್ಕಾರದ ಮಧ್ಯೆ ಸಮನ್ವಯ ಸಾಧಿಸಲು ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿರಿ 700 ಕಿ.ಮೀ. ದೂರದ ಸ್ವಗ್ರಾಮಕ್ಕೆ ಗರ್ಭಿಣಿ ಪತ್ನಿ, ಮಗಳ ಹೊತ್ತು ಸಾಗಿದ್ದೇ ರೋಚಕ ಕಥೆ!
ಎಸ್ಎನ್ ಲೈಫ್ಸೈನ್ಸ್ ಪ್ರೋಗ್ರಾಂಬಲ್ ರೊಬೊಟಿಕ್ ಯಂತ್ರವು ಕಫ/ಸ್ವ್ಯಾಬ್ಗಳ ಕ್ಲಿನಿಕಲ್ ಮಾದರಿಯ ಆರ್ಎನ್ಎ ಪ್ರತ್ಯೇಕಿಸುವ ಕೆಲಸ ಮಾಡುತ್ತದೆ. ಏಕಕಾಲದಲ್ಲಿ 8 ಮಾದರಿಗಳ ಟೆಸ್ಟ್ ಮಾಡುವುದು ಈ ಯಂತ್ರದ ವಿಶೇಷತೆ. ಪ್ರತಿ ಮಾದರಿಯ ಆರ್ಎನ್ಎ ಪ್ರತ್ಯೇಕಿಸುವ ವೆಚ್ಚ 500ರಿಂದ 150 ರೂ.ಗೆ ಇಳಿಯಲಿದೆ ಎಂದು ಡಿಸಿಎಂ ಹೇಳಿದರು.
ಎಸ್ಎನ್ ಲೈಫ್ಸೈನ್ಸಸ್, ನಿಯೋಮ್ ಟೆಕ್ನಾಲಜಿಸ್ ಪ್ರೈ. ಲಿಮಿಟೆಡ್, ಹೈಬ್ರಿನೋಮಿಕ್ಸ್ ಲೈಫ್ ಸೈನ್ಸಸ್ ಆ್ಯಂಡ್ ಡಯಾಗ್ನಾಸ್ಟಿಕ್ಸ್ ಎಲ್ಎಲ್ ಪಿ (ಎಚ್ಎಲ್ ಡಿ) ಹಾಗೂ ಗೆಲೊರಿ ಟಿಎಕ್ಸ್ ಫಾರ್ಮಾಸಿಟಿಕಲ್ಸ್ ಪ್ರೈ. ಲಿಮಿಟೆಡ್ ಕಂಪನಿಯವರು ಸಂಶೋಧನೆಗೆ ಸಂಬಂಧಿಸಿದ ಪ್ರಾತ್ಯಕ್ಷಿಕೆ ನೀಡಿದರು. ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ, ಬಿಬಿಸಿ ಎಂ.ಡಿ ಡಾ.ಜಿತೇಂದ್ರ ಕುಮಾರ್, ಡಾ.ಶರತ್ ಚಂದ್ರ, ವಿಶಾಲ ರಾವ್ ಸೇರಿ ಇತರ ವಿಜ್ಞಾನಿಗಳು ಹಾಜರಿದ್ದರು.
ಇದನ್ನೂ ಓದಿರಿ ಕರೊನಾಕ್ಕೆ ರಾಜ್ಯದಲ್ಲಿ ಇಬ್ಬರು ವೃದ್ಧರ ಬಲಿ: 28 ಹೊಸ ಪ್ರಕರಣ