ಬೆಂಗಳೂರು: ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ನಡುವಿನ ಮುಸುಕಿನ ಗುದ್ದಾಟಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೆರೆ ಎಳೆದಿದ್ದಾರೆ.
ರಾಜ್ಯದಲ್ಲಿ ಕರೊನಾ ವೈರಸ್ ಸೋಂಕು ಬಗ್ಗೆಯ ಎಲ್ಲ ಮಾಹಿತಿಯನ್ನು ಇನ್ನು ಮುಂದೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ನೀಡುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ತಮ್ಮ ಸಂಪುಟದ ಸಚಿವರೊಂದಿಗೆ ಸಭೆ ನಡೆಸಿದ ಸಿಎಂ ಯಡಿಯೂರಪ್ಪ ಅವರು ಕರೊನಾ ವೈರಸ್ ಬಗ್ಗೆ ಎಲ್ಲ ಮಾಹಿತಿಯನ್ನು ನೀಡುವಂತೆ ಸಚಿವ ಸುರೇಶ್ ಕುಮಾರ್ ಅವರಿಗೆ ಸೂಚಿಸಿದರು.
ಕರೊನಾ ವೈರಸ್ ಸೋಂಕು ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ನಡುವೆ ಮುಸುಕಿನ ಗುದ್ದಾಟ ಆರಂಭವಾಗಿತ್ತು. ಹೀಗಾಗಿ ಅಂಕಿ-ಅಂಶ ನೀಡುವಲ್ಲಿ ದ್ವಂದ್ವ ಉಂಟಾಗುತ್ತಿತ್ತು. ಇದರಿಂದ ಸಿಎಂಗೆ ಮುಜುಗರ ಉಂಟಾಗಿತ್ತು. ಹೀಗಾಗಿ ಅವರು ಈ ಜವಾಬ್ದಾರಿಯನ್ನು ಹಿರಿಯ ಸಚಿವ ಸುರೇಶ್ ಕುಮಾರ್ ಅವರಿಗೆ ವಹಿಸಿದರು.
ವಿಧಾನಸೌಧದಲ್ಲಿ ಪ್ರತಿ ದಿನ ಸಂಜೆ 5.30ಕ್ಕೆ ಸಚಿವ ಸುರೇಶ್ ಕುಮಾರ್ ಕರೊನಾ ವೈರಸ್ ಕುರಿತ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿದ್ದಾರೆ. (ದಿಗ್ವಿಜಯ ನ್ಯೂಸ್)