ಬಳ್ಳಾರಿ: ದೇಶ, ವಿದೇಶದಿಂದ ಆಗಮಿಸುವ ಪ್ರವಾಸಿಗರ ಮಾಹಿತಿ ನೀಡಬೇಕೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿಲ್ಲೆಯ ಹೋಟೆಲ್ ಮಾಲೀಕರಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕರೊನಾ ವೈರಸ್ಗೆ ಸಂಬಂಧಿಸಿದಂತೆ ಏರ್ಪಡಿಸಿದ್ದ ಜಿಲ್ಲೆಯ ಹೋಟೆಲ್ ಮಾಲೀಕರ ಸಭೆಯಲ್ಲಿ ಮಾತನಾಡಿದರು. ಕರೊನಾ ಸೋಂಕು ಕಂಡು ಬಂದ ದೇಶಗಳಿಂದ ಬರುವ ಪ್ರವಾಸಿಗರ ಮಾಹಿತಿಯನ್ನು ಕೂಡಲೇ ನೀಡಬೇಕು. ಈ ಕುರಿತ ಮಾಹಿತಿಯನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಿರುವ ಜನಸ್ಪಂದನಾ ಕೇಂದ್ರದ ದೂ.ಸಂ. 8277888866/08392-277100 ಗೆ ಕರೆ ಅಥವಾ ವಾಟ್ಸ್ ಆ್ಯಪ್ ಮೂಲಕ ನೀಡಬೇಕು ಎಂದು ತಿಳಿಸಿದರು.
1077 ಉಚಿತ ಸಹಾಯವಾಣಿಗೂ ಕರೆ ಮಾಡಿ ಮಾಹಿತಿ ನೀಡಬಹುದು. ಈ ಕೇಂದ್ರ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲಿದೆ. ಕರೊನಾ ವೈರಸ್ ರೋಗ ಲಕ್ಷಣ ಬಗ್ಗೆ ಕರಪತ್ರ ಹಂಚುವುದರ ಜತೆಗೆ ಹೋಟೆಲ್ಗಳಲ್ಲಿ ಫಲಕಗಳನ್ನು ಅಳವಡಿಸಬೇಕು. ಜಿಲ್ಲೆಯಲ್ಲಿ ರೋಗ ಹರಡದಂತೆ ಕ್ರಮಕೈಗೊಳ್ಳಲಾಗಿದ್ದು, ಪ್ರಕರಣಗಳು ಕಂಡುಬಂದಿಲ್ಲ ಎಂದು ಜಿಲ್ಲಾಧಿಕಾರಿ ನಕುಲ್ ತಿಳಿಸಿದರು. ಡಿಎಚ್ಒ ಎಚ್.ಎಲ್.ಜನಾರ್ದನ, ಕರೊನಾ ವೈರಸ್ ರೋಗ ಲಕ್ಷಣಗಳ ಬಗ್ಗೆ ಮಾಹಿತಿ ನೀಡಿದರು.
ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮೋತಿಲಾಲ್ ಲಮಾಣಿ, ಜಿಲ್ಲಾ ಸರ್ಜನ್ ಡಾ.ಎನ್.ಬಸರೆಡ್ಡಿ, ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ, ಆರೋಗ್ಯ ಇಲಾಖೆ ಅಧಿಕಾರಿಗಳಾದ ಡಾ.ರಾಜಶೇಖರ, ಡಾ.ವಿಜಯಲಕ್ಷ್ಮಿ, ಡಾ.ಇಂದ್ರಾಣಿ ಇತರರಿದ್ದರು.