ಬೆಂಗಳೂರು: ಕರೊನಾ ಸೋಂಕಿನಿಂದ ಮೃತಪಡುವವರು ಒಂದೆಡೆಯಾದರೆ, ಸೋಂಕು ತಗುಲಿರುವ ವಿಷಯ ತಿಳಿಯುತ್ತಲೇ ಕೆಲವರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳು ಅಲ್ಲಲ್ಲಿ ವರದಿಯಾಗುತ್ತಿವೆ.
ಅಂಥದ್ದೇ ಒಂದು ಪ್ರಕರಣ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ. 60 ವರ್ಷದ ಮಹಿಳೆಯೊಬ್ಬರು ಆಸ್ಪತ್ರೆಯ ಚಿಕಿತ್ಸಾ ವಾರ್ಡ್ನ ಶೌಚಾಲಯದಲ್ಲಿ ನೇಣಿಗೆ ಶರಣಗಿದ್ದಾರೆ. ಸೀರೆಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಘಟನೆ ಇಂದು ನಸುಕಿನ ವೇಳೆ ನಡೆದಿದೆ. ಕುಣಿಗಲ್ ನಿವಾಸಿಯಾಗಿದ್ದ ವೃದ್ಧೆ, ರಾಜಗೋಪಾಲನಗರದಲ್ಲಿ ವಾಸವಿದ್ದರು.
ಇವರಿಗೆ ಜ್ವರ, ನೆಗಡಿ ಸೇರಿದಂತೆ ಕರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದವು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಇವರನ್ನು ಪರೀಕ್ಷೆಗೆ ಒಳಪಡಿಸಿದ್ದಾಗ ಕರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು.
ಇದನ್ನೂ ಓದಿ: ಕರೊನಾ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ರೆಡಿ; ಐಸಿಯು, ಬೆಡ್ಗಳು ಸಿದ್ಧ
ಸೋಂಕಿತರಿಗೆ ಮೀಸಲು ಇರುವ ವಿಶೇಷ ವಾರ್ಡ್ನಲ್ಲಿ ಇವರಿಗೆ ಅಡ್ಮಿಟ್ ಮಾಡಲಾಗಿತ್ತು. ಆಸ್ಪತ್ರೆಗೆ ದಾಖಲಾದ ದಿನದಿಂದಲೂ ಇವರು ತುಂಬಾ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇದರಿಂದ ನಸುಕಿನಲ್ಲಿಯೇ ನೇಣು ಹಾಕಿಕೊಂಡಿದ್ದಾರೆ.
ಇವರಿಗೆ ಸೋಂಕು ಇದ್ದ ಹಿನ್ನೆಲೆಯಲ್ಲಿ ಮನೆಯಲ್ಲಿರುವ ನಾಲ್ವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಿಗೂ ಸೋಂಕು ತಗುಲಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಆತ್ಮಹತ್ಯೆಗೆ ಸಂಬಂಧಿಸಿದಂತೆ ಮಲ್ಲೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.