ಬೆಂಗಳೂರು: ಕರೊನಾ ವೈರಸ್ ಸೋಂಕು ಹರಡಿರುವ ಹಿನ್ನೆಲೆಯಲ್ಲಿ ರಾಜ್ಯದ 1,2253 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದ್ದು ಇವರಲ್ಲಿ 15 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 86, 231 ಮಂದಿ,
ಮಂಗಳೂರು ವಿಮಾನ ನಿಲ್ದಾಣದಲ್ಲಿ 30,606 ಜನ ಕಾರವಾರ ಹಾಗೂ ಮಂಗಳೂರು ಬಂದರುಗಳಲ್ಲಿ 5,695 ಜನ ತಪಾಸಣೆ ನಡೆಸಲಾಗಿದೆ ಎಂದರು.
ಬೆಂಗಳೂರಿನಲ್ಲಿ 13 ಜನ, ಕಲಬುರ್ಗಿಯಲ್ಲಿ 3 ಜನರಿಗೆ ಸೋಂಕು ತಗುಲಿದೆ. ಅದರಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂದರು.
ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ 5 ಮಂದಿ ಚೇತರಿಸಿಕೊಳ್ಳುತ್ತಿದ್ದಾರೆ. ಇಲ್ಲಿವರೆಗೆ 1143 ಮಂದಿ ರಕ್ತ ಹಾಗೂ ಕಫ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರಲ್ಲಿ 915 ಮಂದಿಯ ವರದಿಯಲ್ಲಿ ಯಾವುದೇ ಸೋಂಕು ಇರುವುದು ದೃಢಪಟ್ಟಿಲ್ಲ ಎಂದು ಅವರು ಮಾಹಿತಿ ನೀಡಿದರು.
2280 ಮಂದಿಯನ್ನು ಮನೆಯಲ್ಲಿ ಇಟ್ಟು ನಿಗಾ ವಹಿಸಲಾಗಿದೆ. ಅಂದಾಜು 97 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕರೊನಾ ಸೋಂಕು ಭೀಕರ ಕಾಯಿಲೆ ಅಲ್ಲ. ಹೀಗಾಗಿ ಭಯಪಡುವುದು ಬೇಡ ಎಂದರು.
ಗುರುವಾರ ಒಂದೇ ದಿನ 3 ಸಾವಿರ ಮಂದಿ ಸ್ವಯಂ ಪ್ರೇರಿತವಾಗಿ ಬಂದು ತಪಾಸಣೆಗೆ ಒಳಗಾಗಿದ್ದಾರೆ. ಸೋಂಕಿತರಿಗೆ ಚಿಕಿತ್ಸೆ ನೀಡಲು ವಿಕ್ಟೋರಿಯಾದಲ್ಲಿ 2 ಸಾವಿರ ಹಾಸಿಗೆ, ಕೆಸಿ ಜನರಲ್ ಆಸ್ಪತ್ರೆಯಲ್ಲಿ 400, ಜಯನಗರ ಆಸ್ಪತ್ರೆತಯಲ್ಲಿ 400, ಕಿಮ್ಸ್ ಆಸ್ಪತ್ರೆಯಲ್ಲಿ ಸಾವಿರ ಹಾಸಿಗೆಗಳನ್ನು ಸಿದ್ಧಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಕರೊನಾ ಚಿಕಿತ್ಸೆಗೆ ಪ್ರತ್ಯೇಕ ವಿಶೇಷ ಆಸ್ಪತ್ರೆ ಅಗತ್ಯ ಇದೆ ಎಂದು ಬಹುತೇಕ ಮಂದಿ ಸಲಹೆ ನೀಡಿದ್ದಾರೆ. ಕರೊನಾ ವಿಶೇಷ ಕಾರ್ಯಾಚರಣೆ ಪಡೆಯ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಸಚಿವರು ಹೇಳಿದರು.