ಬಳ್ಳಾರಿ: ರಾಜ್ಯದಲ್ಲಿ ಕಾಂಗ್ರೆಸ್ ಪರ ವಾತಾವರಣ ಇದೆ. ಭ್ರಷ್ಟಾಚಾರ ನಿರ್ಮೂಲನೆ ಮಾಡಬೇಕಾದರೆ ಶೇ.40 ಕಮಿಷನ್ ಸರ್ಕಾರವನ್ನು ಕಿತ್ತು ಹಾಕಬೇಕಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಇದನ್ನೂ ಓದಿ:371(ಜೆ) ಕಲಂ ಜಾರಿಗೆ ಶ್ರಮಿಸಿದ ನಾಯಕ
ನಗರದ ಕಾಣೇಕಲ್ ಬಸ್ ನಿಲ್ದಾಣದ ಬಳಿ ಸೋಮವಾರ ಮತಪ್ರಚಾರದ ಬಹಿರಂಗ ಸಭೆಯಲ್ಲಿ ಮಾತನಾಡಿದರು. ಕಲ್ಯಾಣ ಕರ್ನಾಟಕಕ್ಕೆ ಕಾಂಗ್ರೆಸ್ ಸಾಕಷ್ಟು ಕೊಡುಗೆ ನೀಡಿದೆ. ಮತ್ತೆ ಅಧಿಕಾರಕ್ಕೆ ಬಂದರೆ ಇನ್ನಷ್ಟು ಪ್ರಗತಿ ಮಾಡುತ್ತೇವೆ. ಈಗಾಗಲೇ ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ. ಹಸ್ತಕ್ಕೆ ಐದು ಬೆರಳಿವೆ. ಅದರಂತೆ ಐದು ಗ್ಯಾರಂಟಿ ನಮ್ಮ ಸರ್ಕಾರ ಮಾಡಲಿದೆ. ಕಲ್ಯಾಣ ಕರ್ನಾಟಕಕ್ಕೆ 371 (ಜೆ) ಮೀಸಲಾತಿ ನೀಡಲಾಗಿದೆ. ಈ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಚ್ಚಿನ ಅನುದಾನ ನೀಡಿಲ್ಲ ಎಂದು ಆರೋಪಿಸಿದರು.
ಪ್ರಧಾನಿ ನರೇಂದ್ರ ಮೋದಿ ಎಲ್ಲಿ ಹೋಗುತ್ತಾರೋ ಅಲ್ಲಿ ಬರೀ ಸುಳ್ಳುಗಳನ್ನು ಹೇಳುತ್ತಾರೆ. ಅಧಿಕಾರಕ್ಕೆ ಬರುವ ಮುನ್ನ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ಹಾಕುತ್ತೇವೆ ಎಂದಿದ್ದರು. ಸ್ವಿಸ್ ಬ್ಯಾಂಕ್ನಿಂದ ಕಪ್ಪುಹಣ ತರುತ್ತೇವೆ ಎಂದು ಭರವಸೆ ನೀಡಿದ್ದರು. ಪ್ರತಿ ವರ್ಷ ಎರಡು ಕೋಟಿ ಜನರಿಗೆ ಉದ್ಯೋಗ ನೀಡುತ್ತೇವೆ ಎಂದು ಆಶ್ವಾಸನೆ ನೀಡಿದ್ದರು. ಇದಾವುದನ್ನು ಅವರು ಈಡೇರಿಸಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಅಭ್ಯರ್ಥಿ ನಾರಾ ಭರತ್ರೆಡ್ಡಿ, ಪಾಲಿಕೆ ಮೇಯರ್ ಡಿ.ತ್ರಿವೇಣಿ, ಮಾಜಿ ಮೇಯರ್ ಎಂ.ರಾಜೇಶ್ವರಿ ಸುಬ್ಬರಾಯುಡು, ವೆಂಕಟೇಶ ಹೆಗಡೆ, ಜೆ.ಎಸ್.ಆಂಜನೇಯಲು ಮತ್ತಿತರರಿದ್ದರು.
ಭಾಷಣಕ್ಕೆ ಮಳೆ ಅಡ್ಡಿ
ಸಂಜೆ ವೇಳೆಗೆ ಮೋಡ ಕವಿದ ವಾತಾವರಣವಿತ್ತು. ಕಾಂಗ್ರೆಸ್ನ ಬಹಿರಂಗ ಸಭೆ ವೇಳೆ ಸುರಿಯುವ ಮಳೆ ನಡುವೆಯೂ ಮಲ್ಲಿಕಾರ್ಜುನ ಖರ್ಗೆ ಭಾಷಣವನ್ನು ಮುಂದುವರಿಸಿದರು. ಕೊನೆಗೆ ಮಳೆ ಜೋರಾದ ಹಿನ್ನೆಲೆಯಲ್ಲಿ ಭಾಷಣವನ್ನು ಮೊಟಕುಗೊಳಿಸಿ ತೆರಳಿದರು.