ನವದೆಹಲಿ: ಕರೊನಾ ವೈರಸ್ COVID19 ಸೋಂಕು ಹರಡುವಿಕೆ ತಡೆಯಲು ಕೇಂದ್ರ ಸರ್ಕಾರ ದೇಶವ್ಯಾಪಿ 21 ದಿನಗಳ ಲಾಕ್ಡೌನ್ ಘೋಷಿಸಿದೆ. ಇದರ ಬೆನ್ನಲ್ಲೇ ಅನೇಕ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿರುವ ಸರ್ಕಾರ ಇದೀಗ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ.
ಕರೊನಾ ವೈರಸ್ ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ತುರ್ತು ಸೇವೆಗಳ ಲಭ್ಯತೆಯನ್ನು ಸುಲಭಗೊಳಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆ ಹೇಳಿಕೊಂಡಿದೆ.
ಈ ಸಂಬಂಧ ಹೇಳಿಕೆ ನೀಡಿರುವ ಸಾರಿಗೆ ಸಚಿವ ನಿತಿನ್ ಗಡ್ಕರಿ, COVID19 ಸೋಂಕು ಹರಡುತ್ತಿರುವ ಕಾರಣ, ಈ ಸಂಕಷ್ಟ ಮಯ ಸನ್ನಿವೇಶವನ್ನು ಎದುರಿಸಲು ದೇಶ ಸಮರ ಸಾರಿದ್ದು, ಲಾಜಿಸ್ಟಿಕ್ಸ್ಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ದೇಶಾದ್ಯಂತ ಎಲ್ಲ ಟೋಲ್ಗಳನ್ನೂ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ತುರ್ತು ಸೇವೆಗಳ ಲಭ್ಯತೆ, ಉಳಿದ ತುರ್ತು ಸಾರಿಗೆ ಸಂಚಾರಕ್ಕೂ ಇದು ಅನುಕೂಲವಾಗಲಿದೆ. ಸಮಯವೂ ಉಳಿತಾಯವಾಗಲಿದೆ ಎಂದು ಸಚಿವ ಗಡ್ಕರಿ ಹೇಳಿಕೊಂಡಿದ್ದಾರೆ. (ಏಜೆನ್ಸೀಸ್)