ಸಿಂಧನೂರು: ಮಹಿಳೆಯರನ್ನು ಬೌದ್ಧಿಕ, ಆರ್ಥಿಕ ಮತ್ತು ಸಾಮಾಜಿಕವಾಗಿ ಸಬಲೀಕರಣ ಮಾಡುವ ಉದ್ದೇಶದಿಂದ ಜ್ಞಾನ ವಿಕಾಸ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಶೇಖರ ಶೆಟ್ಟಿ ಹೇಳಿದರು.
ನಗರದ ಏಳುರಾಗಿಕ್ಯಾಂಪ್ನಲ್ಲಿ ಸೋಮವಾರ ಜ್ಞಾನ ವಿಕಾಸ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಸೃಜನಶೀಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತಾಲೂಕಿನಲ್ಲಿ ಜ್ಞಾನ ವಿಕಾಸ ಕೇಂದ್ರಗಳನ್ನು ಆರಂಭಿಸಿ ಸ್ವಚ್ಛತೆ, ಸ್ವಯಂ ಉದ್ಯೋಗ ಕುರಿತ ತರಬೇತಿ ನೀಡಲಾಗುತ್ತಿದೆ ಎಂದರು.
ಏಳುರಾಗಿಕ್ಯಾಂಪ್ ಶಾಲೆಯ ಮುಖ್ಯಶಿಕ್ಷಕ ರಾಜೇಂದ್ರಕುಮಾರ ಮಾತನಾಡಿ, ಈ ಕ್ಯಾಂಪಿನಲ್ಲಿ ಜನ ಜೀವನ ತುಂಬ ಕಷ್ಟಕರವಾಗಿದ್ದು, ಕುಟುಂಬ ನಿರ್ವಹಣೆ ಮಹಿಳೆಯರ ಶ್ರಮದಿಂದಲೇ ನಡೆಯುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರ ಸಬಲೀಕರಣಕ್ಕಾಗಿ ಯೋಜನೆಗಳನ್ನು ರೂಪಿಸುತ್ತಿರುವುದು ಉತ್ತಮ ಕಾರ್ಯವಾಗಿದೆ ಎಂದರು.