ಚಿಕ್ಕಮಗಳೂರು: ಸಂಸದ ಅನಂತ್ ಕುಮಾರ್ ಹೆಗಡೆ ಅವರು ಸಂವಿಧಾನ ತಿದ್ದುಪಡಿ ಮಾಡುವುದಾಗಿ ಹೇಳಿರುವುದಲ್ಲಿ ತಪ್ಪಿಲ್ಲ. ಸಂವಿಧಾನದಲ್ಲಿಯೇ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಅವರು ನೀಡಿದ ಹಿಂದಿನ ಹೇಳಿಕೆಯಿಂದ ಗೊಂದಲ ಉಂಟಾಗಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದುವರೆಗೆ ಸಂವಿಧಾನವನ್ನು 105 ಬಾರಿ ತಿದ್ದುಪಡಿ ಮಾಡಲಾಗಿದೆ. ಅದರಲ್ಲಿ 95 ಬಾರಿ ಸಂವಿಧಾನ ತಿದ್ದುಪಡಿ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಹೀಗಿರುವಾಗ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎನ್ನುವುದು ತಪ್ಪೇ ಎಂದು ಪ್ರಶ್ನಿಸಿದರು.
ಸಂವಿಧಾನ ತಿದ್ದುಪಡಿ ಮಾಡಲು ಅಂಬೇಡ್ಕರ್ ಸಂವಿಧಾನದಲ್ಲಿ ಅವಕಾಶ ಕಲ್ಪಿಸಿದ್ದಾರೆ. ಆದರೆ ಸಂವಿಧಾನ ಬದಲಿಸಲು ಯಾರಿಗೂ ಸಾಧ್ಯವಿಲ್ಲ. ಸಂವಿಧಾನ ಅಲುಗಾಡಿಸಲು ಬಯಸುವವರು ರಾಷ್ಟ್ರೀಯತೆ ವಿರುದ್ಧ ಪ್ರಾದೇಶಿಕತೆ ಎತ್ತಿ ಕಟ್ಟುವುದು ಸಂವಿಧಾನಕ್ಕೆ ಮಾಡುವ ಅಪಚಾರ. ಕಾಂಗ್ರೆಸ್ಗೆ ನೈತಿಕತೆ ಇದ್ದರೆ ಇಷ್ಟೊತ್ತಿಗಾಗಲೇ ಡಿಎಂಕೆ ಜತೆ ಸಂಬಂಧ ಕಳೆದುಕೊಳ್ಳಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿಯಿಂದ ಆಪರೇಷನ್ ಕಮಲ ಆರಂಭಗೊಂಡಿದೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಸಿದ ಅವರು, ಕಾಂಗ್ರೆಸ್ ಇಷ್ಟೊಂದು ಚೀಪ್ ಆಗಿ ಯೋಚಿಸುತ್ತದೆ ಎಂದು ನಾನು ಭಾವಿಸಿರಲಿಲ್ಲ. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಮ್ಮ ಪಕ್ಷದ ಒಬ್ಬರ ವೋಟನ್ನು ಕ್ರಾಸ್ ಮಾಡಿಸಿದ್ದರು. ಅದಕ್ಕೆ ಎಷ್ಟು ಕೊಟ್ಟಿದ್ದರು ಎಂದು ಕೇಳಬಹುದಲ್ಲವೇ? ಈ ಹಿಂದೆ ಡಿ.ಕೆ.ಶಿವಕುಮಾರ್ ಜನತಾದಳವನ್ನೇ ಖಾಲಿ ಮಾಡುತ್ತೇನೆ ಎಂದು ಹೇಳಿದ್ದರು. ಈ ರೀತಿ ಖಾಲಿ ಮಾಡಿಸುವುದಕ್ಕೆ ಯಾವ ರೀತಿ ಆಮಿಷ ತೋರಿಸಿದ್ದರು ಎಂಬುದನ್ನು ಮೊದಲು ಸ್ಪಷ್ಟಪಡಿಸಲಿ ಎಂದು ಕಿಡಿಕಾರಿದರು.