ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ಕಬ್ಬನ್ ಪಾರ್ಕ್ ಒಳಗೆ ವಾಹನಗಳ ಸಂಚಾರ ಹಾಗೂ ನಿಲುಗಡೆಗೆ ವಿಧಿಸಲಾಗಿದ್ದ ನಿಷೇಧವನ್ನು ಮುಂದುವರಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಕಬ್ಬನ್ಪಾರ್ಕ್ ನಡಿಗೆದಾರರ ಸಂಘದ ಅಧ್ಯಕ್ಷರೂ ಆಗಿರುವ ವಕೀಲ ಎಸ್. ಉಮೇಶ್ ಸಲ್ಲಿಸಿರುವ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಸಿಜೆ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ, ನಗರ ಭೂಸಾರಿಗೆ ನಿರ್ದೇಶನಾಲಯ, ತೋಟಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಸೇರಿ ಅರ್ಜಿಯಲ್ಲಿನ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆ ಮುಂದೂಡಿತು.
ಅರ್ಜಿಯಲ್ಲೇನಿದೆ?: ‘ಕರ್ನಾಟಕ ಉದ್ಯಾನ, ಆಟದ ಮೈದಾನ ಹಾಗೂ ಬಯಲು ಪ್ರದೇಶಗಳು (ಸಂರಕ್ಷಣೆ ಹಾಗೂ ನಿಯಂತ್ರಣ) ಕಾಯ್ದೆ-1985’ರ ಅಡಿ ಅಧಿಸೂಚಿತ ಉದ್ಯಾನವಾಗಿರುವ ಕಬ್ಬನ್ಪಾರ್ಕ್ ಒಳಗೆ ಲಾಕ್ಡೌನ್ ಸಂದರ್ಭದಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು. ಕಬ್ಬನ್ ಉದ್ಯಾನದ ಒಳಗೆ ವಾಹನಗಳ ಸಂಚಾರ ಹಾಗೂ ರ್ಪಾಂಗ್ ನಿಷೇಧಿಸುವುದು ಸೂಕ್ತವೆಂದು ತಿಳಿಸಿ ಸೆ.2ರಂದು ನಗರ ಭೂಸಾರಿಗೆ ನಿರ್ದೇಶನಾಲಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಹೀಗಿದ್ದರೂ, ಆ ಶಿಫಾರಸಿಗೆ ವಿರುದ್ಧವಾಗಿ ವಾಹನ ಸಂಚಾರಕ್ಕೆ ಮತ್ತೆ ಅನುಮತಿ ನೀಡಲು ಸರ್ಕಾರ ಮುಂದಾಗಿದೆ. ಭೂಸಾರಿಗೆ ನಿರ್ದೇಶನಾಲಯದ ಶಿಫಾರಸ್ಸು ಅನುಷ್ಠಾನಕ್ಕೆ ತಂದು ಉದ್ಯಾನದ ಒಳಗೆ ವಾಹನ ಸಂಚಾರ ನಿಷೇಧಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.
ಕೆ-ಟಿಇಟಿಯ ಕೀ ಉತ್ತರ ಪ್ರಕಟ : ಆಕ್ಷೇಪಣೆಗಳಿದ್ದರೆ ಅ.21ರೊಳಗೆ ಸಲ್ಲಿಸಲು ಅವಕಾಶ