ಬೆಂಗಳೂರು: ಡಿಸೆಂಬರ್ 19ರಂದು ನಗರದ ಬೇಗೂರಿನಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಂತೆ ಗಂಭೀರವಾಗಿ ಗಾಯಗೊಂಡಿದ್ದ ತಂದೆ ಹಾಗೂ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮೃತರನ್ನು ಸಂದೇಶ್ (30) ಹಾಗೂ ರೋಹನ್ (2.5) ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಗಾಯಗೊಂಡಿದ್ದ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ: ಸಂಸತ್ ಅಧಿವೇಶನದ ವೇಳೆ ಭದ್ರತಾ ಲೋಪದ ಬಗ್ಗೆ ಬಿಟ್ಟು ಬೇರೆ ಏನಾದರೂ ಕೇಳಿ: ಪ್ರತಾಪ್ ಸಿಂಹ
ಗಂಭೀರವಾಗಿ ಗಾಯಗೊಂಡಿದ್ದ ಸಂದೇಶ್ ಹಾಗೂ ರೋಹನ್ ಇಬ್ಬರನ್ನು ಮೊದಲಿಗೆ ಸೆಂಟ್ ಜೋಸೆಫ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೆ ಇಬ್ಬರೂ ಭಾನುವಾರ ಮುಂಜಾನೆ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯ ಹಿನ್ನಲೆ
ಡಿಸೆಂಬರ್19ರಂದು ಬೇಗೂರು ಠಾಣಾ ವ್ಯಾಪ್ತಿಯ ಗಾರ್ವೆಬಾವಿಪಾಳ್ಯದ ಲಕ್ಷ್ಮೀ ಲೇಔಟ್ನಲ್ಲಿ ಸುಬ್ರಮಣಿ ಎಂಬುವವರಿಗೆ ಸೇರಿದ ಕಟ್ಟಡದಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಐವರು ಗಾಯಗೊಂಡಿದ್ದರು. ಘಟನೆಯಲ್ಲಿ ಉತ್ತರ ಪ್ರದೇಶ ಮೂಲದ ಸಂದೇಶ್(30), ಆತನ ನಾದಿನಿ ನಿಖಿಲಾ(26) ಮತ್ತು ಮೂವರು ಮಕ್ಕಳಾದ ರೋಷಿಣಿ, ರೋಹನ್ ಹಾಗೂ ರೋಷನ್ ಎಂಬುವರು ಗಾಯಗೊಂಡಿದ್ದರು. ಆದರೆ ಈಗ ಸಂದೇಶ್ ಹಾಗೂ ರೋಹನ್ ಮೃತಪಟ್ಟಿದ್ದಾರೆ.