ಬೆಂಗಳೂರು: ಕರೊನಾ ಸೋಂಕಿನ ಭೀತಿ ಇಲ್ಲದಿದ್ದರೆ ಇಷ್ಟೊತ್ತಿಗೆ ಶಾಲಾ-ಕಾಲೇಜುಗಳು ಆರಂಭವಾಗಬೇಕಿತ್ತು. ಶಾಲಾ ಮಕ್ಕಳಿಗೆ ಆನ್ಲೈನ್ ಶಿಕ್ಷಣ, ಮನೆಪಾಠ ಸದ್ಯ ಚಾಲ್ತಿಯಲ್ಲಿದೆಯಾದರೂ ಪದವಿ ಕಾಲೇಜುಗಳ ತರಗತಿ ಶುರು ಆಗಿರಲಿಲ್ಲ. ಇದಕ್ಕೂ ಮುಹೂರ್ತ ಫಿಕ್ಸ್ ಆಗಿದ್ದು, ಇನ್ನು ನಾಲ್ಕೇ ದಿನದಲ್ಲಿ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷ ಆರಂಭವಾಗಲಿದೆ.
ಈ ಬಗ್ಗೆ ಸ್ವತಃ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರೇ ಪ್ರಕಟಿಸಿದ್ದಾರೆ. ಬುಧವಾರ ಬೆಳಗ್ಗೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೆಪ್ಟೆಂಬರ್ 1ರಿಂದಲೇ ಆನ್ಲೈನ್ ಮೂಲಕ ಪೂರ್ಣ ಪ್ರಮಾಣದಲ್ಲಿ ತರಗತಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ನಿಂದ ನೇರ (ಆಫ್ಲೈನ್) ತರಗತಿಗಳು ಶುರುವಾಗಲಿವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿರಿ ಸರ್ಕಾರಿ / ಖಾಸಗಿ ಅನುದಾನಿತ ಐಟಿಐಗಳಿಗೆ ಪ್ರವೇಶಾವಕಾಶ
ಕೇಂದ್ರ ಸರ್ಕಾರದಿಂದ ನೇರ ತರಗತಿಗಳ ಆರಂಭಕ್ಕೆ ಮಾರ್ಗಸೂಚಿ ಬರಬೇಕಿದೆ. ಸೆಪ್ಟೆಂಬರ್ನಲ್ಲಿ ಕೆಲ ಪದವಿ ಪರೀಕ್ಷೆಗಳು ನಡೆಯಲಿವೆ. ಹೀಗಾಗಿ ಸರ್ಕಾರವೂ ಮುಂದಿನ ತಿಂಗಳಿಂದ ಆನ್ಲೈನ್ ಮೂಲಕವೇ ಎಲ್ಲ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರ್ಣ ಪ್ರಮಾಣದಲ್ಲಿ ಚಾಲನೆ ನೀಡಲು ನಿರ್ಧರಿಸಿದೆ. ಜತೆಗೆ, ಅಕ್ಟೋಬರ್ನಿಂದಲೇ ಎಲ್ಲ ಕಾಲೇಜು ಆರಂಭಿಸಲಾಗುವುದು. ವಿದ್ಯಾರ್ಥಿಗಳು ಕೂಡ ತರಗತಿಗಳಿಗೆ ಹಾಜರಾಗಬೇಕಾಗುತ್ತದೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ ತಿಳಿಸಿದರು.
ತರಗತಿ ಆರಂಭಿಸಲು ಈಗಾಗಲೇ ಯುಜಿಸಿ ಮಾರ್ಗಸೂಚಿಯಂತೆ ರಾಜ್ಯ ಸರ್ಕಾರ ಎಲ್ಲ ರೀತಿಯ ಪೂರ್ವಭಾವಿ ಸಿದ್ಧತೆಯನ್ನು ಮಾಡಿಕೊಂಡಿದೆ. ಕೇಂದ್ರ ಸರ್ಕಾರದ ಆದೇಶ ಬರುತ್ತಿದ್ದಂತೆಯೇ ಈ ನಿಟ್ಟಿನಲ್ಲಿ ರಾಜ್ಯವು ಕಾರ್ಯೋನ್ಮುಖವಾಗಲಿದೆ ಎಂದು ವಿವರಿಸಲಿದೆ.
ಶೈಕ್ಷಣಿಕ ವರ್ಷದ ಆರಂಭದ ಜತೆಗೆ ಅಂತಿಮ ವರ್ಷದ ಎಲ್ಲ ಪದವಿ, ಡಿಪ್ಲೊಮಾ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಬ್ಯಾಕ್ಲಾಗ್ ಉಳಿಸಿಕೊಂಡಿರುವ ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಯಲಿದೆ ಎಂದು ಡಿಸಿಎಂ ಹೇಳಿದರು.
ನೀಟ್ ಪರೀಕ್ಷೆ ವಿರೋಧ ಮಾಡುತ್ತಿರುವವರಿಗೆ ಖಂಡಿತವಾಗಿಯೂ ದುರುದ್ದೇಶವಿದೆ. ಆದರೆ, ರಾಜ್ಯ ಸರ್ಕಾರ ಈ ಪರೀಕ್ಷೆಗೆ ಬೇಕಾದ ಎಲ್ಲ ಸಹಕಾರ ನೀಡಲಿದೆ ಎಂದು ಸ್ಪಷ್ಟಪಡಿಸಿದರು.