ದಾವಣಗೆರೆ : ವಿದ್ಯಾರ್ಥಿಗಳು ಸತತ ಪರಿಶ್ರಮದಿಂದ ಅಧ್ಯಯನ ಮಾಡುವ ಮೂಲಕ ಉನ್ನತ ಸಾಧನೆ ಕೈಗೊಳ್ಳಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ. ಶಿವರಾಜು ತಿಳಿಸಿದರು.
ಭದ್ರಾ ವಿಜ್ಞಾನ ಪದವಿಪೂರ್ವ ಕಾಲೇಜಿನಿಂದ ನಗರದ ಕುವೆಂಪು ಕನ್ನಡ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ವೇದಿಕೆ, ಪ್ರತಿಭಾ ಪುರಸ್ಕಾರ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜೀವನದಲ್ಲಿ ಶ್ರದ್ಧೆ, ನಿಷ್ಟೆ ಹಾಗೂ ಪ್ರಾಮಾಣಿಕತೆ ಬೆಳೆಸಿಕೊಂಡು ಸಾಧನೆ ಹಾದಿಯಲ್ಲಿ ಹೆಜ್ಜೆ ಹಾಕಬೇಕು ಎಂದು ತಿಳಿಸಿ, ವಿದ್ಯಾರ್ಥಿಗಳೊಂದಿಗೆ ತಮ್ಮ ಜೀವನದ ಅನುಭವ ಹಂಚಿಕೊಂಡರು.
ದಾವಣಗೆರೆ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಸಿ.ಎಚ್. ಮುರುಗೇಂದ್ರಪ್ಪ ಮಾತನಾಡಿ, ವಿದ್ಯಾರ್ಥಿಗಳು ವಿನಯ, ಸಂಸ್ಕಾರ ಹಾಗೂ ಸನ್ನಡತೆ ಅಳವಡಿಸಿಕೊಳ್ಳಬೇಕು ಎಂದರು.
ಭದ್ರಾ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರೊ.ಡಿ. ಚಂದ್ರಪ್ಪ ಮಾತನಾಡಿ, ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಅಧ್ಯಯನಕ್ಕೆ ಮಹತ್ವ ನೀಡಬೇಕು ಎಂದು ಹೇಳಿದರು.
ಭದ್ರಾ ಸ್ನಾತಕೋತ್ತರ ಕೇಂದ್ರದ ಪ್ರಾಂಶುಪಾಲ ಪ್ರೊ.ಟಿ. ಮುರುಗೇಶ್, ಭದ್ರಾ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಎಂ. ಸಂಕೇತ್, ಬಿ.ಎನ್. ಧನಂಜಯ್ ಇದ್ದರು. ಉಪನ್ಯಾಸಕಿ ಶ್ರೀಲಕ್ಷ್ಮಿ ಸ್ವಾಗತಿಸಿದರು. ಎಸ್.ಎಂ. ಶಿವಕುಮಾರ್ ನಿರೂಪಿಸಿದರು. ರಾಜು ಕಂಠಿ ವಂದಿಸಿದರು.