ದಾವಣಗೆರೆ : ದಾವಣಗೆರೆ ಜಿಲ್ಲೆಯು ಅಭಿವೃದ್ಧಿ ಹೊಂದಿದ ಪ್ರದೇಶವಾಗಿ ಹೊರ ಹೊಮ್ಮಿದೆ. ಆದರೆ 0.78 ಸೂಚ್ಯಂಕದೊಂದಿಗೆ ಚನ್ನಗಿರಿ ಅತ್ಯಂತ ಹಿಂದುಳಿದ ತಾಲೂಕಾಗಿದೆ ಎಂದು ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಅಧ್ಯಕ್ಷ, ಆರ್ಥಿಕ ತಜ್ಞ ಪ್ರೊ. ಎಂ. ಗೋವಿಂದ ರಾವ್ ಹೇಳಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ, ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯಿಂದ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಜಗಳೂರು ಮತ್ತು ಹೊನ್ನಾಳಿ ಅನುಕ್ರಮವಾಗಿ 0.80 ಮತ್ತು 0.86 ಸೂಚ್ಯಂಕದೊಂದಿಗೆ ಅತೀ ಹಿಂದುಳಿದ ತಾಲೂಕುಗಳಾಗಿವೆ ಎಂದು ಅಭಿಪ್ರಾಯಪಟ್ಟರು. ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ರಾಜ್ಯದ 175 ತಾಲೂಕುಗಳನ್ನು ಅಧ್ಯಯನ ಮಾಡಿ ಡಾ. ಡಿ.ಎಂ. ನಂಜುಂಡಪ್ಪ ಅವರು 39 ಅತ್ಯಂತ ಹಿಂದುಳಿದ, 40 ಅತಿ ಹಿಂದುಳಿದ ಹಾಗೂ 35 ಹಿಂದುಳಿದ ತಾಲೂಕುಗಳು ಎಂದು ಗುರುತಿಸಿದ್ದರು. ಇದರಲ್ಲಿ ಉತ್ತರ ಕರ್ನಾಟಕ ಭಾಗದ 26 ಅತ್ಯಂತ ಹಿಂದುಳಿದ ತಾಲೂಕುಗಳು, ದಕ್ಷಿಣ ಕರ್ನಾಟಕದ 13 ತಾಲೂಕುಗಳು ಇದ್ದವು ಎಂದರು. ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ದಾವಣಗೆರೆ ಜಿಲ್ಲೆಗೆ ಶಿಫಾರಸಿನ ಅನ್ವಯ, ಸರ್ಕಾರ 2007-08 ರಿಂದ 2023-24 ರವರೆಗೆ 821 ಕೋಟಿ ರೂ. ಹಂಚಿಕೆ ಮಾಡಿ ಇದರಲ್ಲಿ 698 ಕೋಟಿ ಅಭಿವೃದ್ಧಿಗೆ ಬಿಡುಗಡೆಯಾಗಿದೆ. ಈ ಪೈಕಿ 640 ಕೋಟಿ ರೂ. ಖರ್ಚಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಪ್ರಸ್ತುತ 240 ತಾಲೂಕುಗಳಿವೆ. ಇಷ್ಟೊಂದು ಹಣ ಖರ್ಚು ಮಾಡಿದ ಬಳಿಕ, ತಾಲೂಕುಗಳ ಹಿಂದುಳಿದಿರುವಿಕೆ ಕಡಿಮೆ ಆಗಿದೆಯೆ?, ಯಾವೆಲ್ಲಾ ಕ್ಷೇತ್ರದಲ್ಲಿ ಏನೇನು ಅಭಿವೃದ್ಧಿಯಾಗಿದೆ. ಹಣ ನೀಡಿದರೂ ಪ್ರಗತಿ ಆಗಲಿಲ್ಲವೆಂದರೆ ಅದಕ್ಕೆ ಕಾರಣಗಳೇನು ಎಂಬುದನ್ನು ಕೂಲಂಕಷವಾಗಿ ಪರಿಶೀಲಿಸಿ, ರಾಜ್ಯದಲ್ಲಿನ ಅಸಮತೋಲನ ಸರಿಪಡಿಸಿ, ಸಮಗ್ರ ಕರ್ನಾಟಕ ಅಭಿವೃದ್ಧಿಗೊಳ್ಳಲು ಏನೆಲ್ಲ ಕ್ರಮ ವಹಿಸಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯನ್ನು ರಚಿಸಿದೆ ಎಂದರು. ಈ ಸಮಿತಿಯನ್ನು 2024 ರ ಸೆಪ್ಟೆಂಬರ್ನಲ್ಲಿ ರಚಿಸಲಾಗಿದ್ದು ಅಕ್ಟೋಬರ್ನಿಂದ ಕೆಲಸ ಆರಂಭಿಸಿದೆ. ರಾಜ್ಯದಲ್ಲಿ ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳು ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯ ವೇಗ ಹೊಂದಿವೆ. ಉಳಿದ ಜಿಲ್ಲೆಗಳಲ್ಲಿ ಆ ಚಿತ್ರಣವಿಲ್ಲ ಎಂದು ತಿಳಿಸಿದರು. ಸಮಿತಿಯ ಸದಸ್ಯ ಕಾರ್ಯದರ್ಶಿ ಡಾ. ಆರ್. ವಿಶಾಲ್, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಜಿ.ಪಂ. ಮುಖ್ಯ ಯೋಜನಾಧಿಕಾರಿ ಮಲ್ಲಾ ನಾಯ್ಕ ಇದ್ದರು. … (ಕೋಟ್) ಸಮಿತಿಯು 2024ರ ಅಕ್ಟೋಬರ್ನಿಂದ ಕೆಲಸ ಆರಂಭಿಸಿದೆ. ಅಂಕಿ ಅಂಶಗಳನ್ನು ಕಲೆ ಹಾಕುತ್ತಿದ್ದೇವೆ. ನಮಗೆ ನೀಡಿರುವ ಅವಧಿ ಒಂದು ವರ್ಷ. ಸೆಪ್ಟೆಂಬರ್ ಅಂತ್ಯದೊಳಗೆ ವರದಿ ಸಲ್ಲಿಸಬೇಕಿದೆ. ಗೋವಾ ಮತ್ತು ಸಿಕ್ಕಿಂ ರಾಜ್ಯಗಳನ್ನು ಬಿಟ್ಟರೆ ಕರ್ನಾಟಕ ತಲಾ ಆದಾಯದಲ್ಲಿ 2ನೇ ಸ್ಥಾನದಲ್ಲಿದೆ. ಅಭಿವೃದ್ಧಿ ಆಗುತ್ತಿದೆ, ಆದರೆ ಕೆಲ ಪ್ರದೇಶಗಳ ಹಿಂದುಳಿಯುವಿಕೆಯೂ ಕಡಿಮೆಯಾಗಿಲ್ಲ. ಪ್ರೊ. ಎಂ. ಗೋವಿಂದ ರಾವ್, ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷ
