More

    ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಡೆಯಿರಿ

    ದಾವಣಗೆರೆ : ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆದು ಅವರಿಗೆ ಸಮಾಜದಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ತಿಳಿಸಿದರು.
     ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾಡಳಿತ ಕಚೇರಿಯ ತುಂಗಭದ್ರ ಸಭಾಂಗಣದಲ್ಲಿ ಬೇಟಿ ಬಚಾವೋ-ಬೇಟಿ ಪಡಾವೋ ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ ಅಭಿಯಾನದಡಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.
     ಇಂದಿನ ದಿನಮಾನಗಳಲ್ಲಿ ಹೆಣ್ಣು ಮಕ್ಕಳು ಎಲ್ಲ ಸವಾಲು ಸ್ವೀಕರಿಸಿ ಪ್ರತಿಯೊಂದು ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವ ಮೂಲಕ ತನ್ನದೇ ಆದ ನೆಲೆ ಕಂಡುಕೊಂಡು ಧೈರ್ಯದಿಂದ ಮುನ್ನಡೆಯುತ್ತಿದ್ದಾಳೆ. ಇಂತಹ ಹೆಣ್ಣು ಮಕ್ಕಳನ್ನು ರಕ್ಷಿಸುವ ಮತ್ತು ಪ್ರೋತ್ಸಾಹಿಸುವ ಗುಣವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
      ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ಬಹಳಷ್ಟು  ದೌರ್ಜನ್ಯ ಘಟನೆಗಳು ನಡೆಯುತ್ತಿವೆ, ಇಂತಹ ಪ್ರಕರಣ ಕಂಡುಬಂದಲ್ಲಿ ತಪ್ಪಿತಸ್ಥರಿಗೆ ಕಾನೂನು ರೀತಿ ಕಠಿಣ ಶಿಕ್ಷೆ ವಿಧಿಸಿದರೆ ಮಾತ್ರ ಮುಂದೆ ಇಂತಹ ಪ್ರಕರಣ ಮರುಕಳಿಸುವುದಿಲ್ಲ. ಇತ್ತೀಚೆಗೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದ್ದು, ಇದನ್ನು ತಡೆಯಲು ಕ್ರಮ ಕೈಗೊಳ್ಳಬೇಕಾಗಿದೆ ಎಂದರು.
       ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿಂದಿನ ಕಾಲದಿಂದಲೂ ಲಿಂಗ ತಾರತಮ್ಯವಿದ್ದು, ಇಂದಿಗೂ ಜೀವಂತವಾಗಿದೆ. ಇದು ಮನೆಗಳಿಂದ ಪ್ರಾರಂಭವಾಗಿ ಎಲ್ಲ ಕಡೆ ಮುಂದುವರಿದಿದೆ. ಗಂಡು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿದರೆ, ಹೆಣ್ಣು ಮಕ್ಕಳ ಶಿಕ್ಷಣ ಕೇವಲ ಪ್ರೌಢಶಾಲೆ, ಕಾಲೇಜು ಹಂತಕ್ಕೆ ಮೊಟಕುಗೊಳ್ಳುತ್ತಿದೆ. ಹೆಣ್ಣು ಕೇವಲ ಮನೆ ಕೆಲಸಕ್ಕೆ ಮಾತ್ರ ಸೀಮಿತ ಬೇಡ. ಗಂಡು ಮಕ್ಕಳಂತೆ ಅವರಿಗೂ ಸ್ವಾತಂತ್ರೃ ನೀಡಬೇಕು ಎಂದು ತಿಳಿಸಿದರು.
     ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳು ಬೇಕೆಂದು ಬಯಸುವರರ ಸಂಖ್ಯೆ ಹೆಚ್ಚುತ್ತಿದೆ. ಹೆತ್ತವರನ್ನು ಗಂಡು ಮಕ್ಕಳಿಗಿಂತ ಹೆಚ್ಚು ಪ್ರೀತಿಯಿಂದ ಹೆಣ್ಣು ಮಕ್ಕಳು ನೋಡಿಕೊಳ್ಳುತ್ತಾರೆ. ಉತ್ತಮ ಶಿಕ್ಷಣ ಕೊಡಿಸಿ ಅವರ ಸಾಧನೆಗೆ ಸ್ಫೂರ್ತಿ ನೀಡುವ ಕೆಲಸ ಮಾಡಬೇಕು. ಹೆಣ್ಣು ಮಕ್ಕಳನ್ನು ಸಂರಕ್ಷಿಸಿದರೆ ನಾಗರೀಕತೆ ಉಳಿದು, ಸಮಾಜ ಮತ್ತು ದೇಶ ಅಭಿವೃದ್ದಿಯಾಗುತ್ತದೆ ಎಂದು ಹೇಳಿದರು.
      ಜಿಲ್ಲೆಯಲ್ಲಿ ಮತದಾರರ ಪಟ್ಟಿಯನ್ವಯ 1000 ಪುರುಷರಿಗೆ 1006 ಮಹಿಳೆಯರಿದ್ದಾರೆ. ನಮ್ಮಲ್ಲಿರುವ ಲಿಂಗ ತಾರತಮ್ಯದ ಭಾವನೆ ಬದಲಾಗಬೇಕು. ಇತ್ತೀಚೆಗೆ ಜಿಲ್ಲೆಯಲ್ಲಿ 18 ವರ್ಷದೊಳಗಿನ ಹೆಣ್ಣು ಮಕ್ಕಳು ಗರ್ಭಿಣಿಯಾಗುತ್ತಿದ್ದಾರೆ, ಇದು ನಮ್ಮ ಜಿಲ್ಲೆಗೆ ಕಳಂಕ ತರುವ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.
        ಇದೇ ಸಂದರ್ಭದಲ್ಲಿ ಕ್ಯಾಲೆಂಡರ್ ಬಿಡುಗಡೆಗೊಳಿಸಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಶಾಲಾ ವಿದ್ಯಾರ್ಥಿಗಳಿಗೆ ಸನ್ಮಾನಿಸಯಿತು.
          ಜಿ.ಪಂ ಉಪ ಕಾರ್ಯದರ್ಶಿ ಕೃಷ್ಣನಾಯ್ಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ವಾಸಂತಿ ಉಪ್ಪಾರ್, ಮಹಿಳಾ ರಕ್ಷಣಾ ಘಟಕದ ರಕ್ಷಣಾಧಿಕಾರಿ ಕವಿತಾ, ಮಹಿಳಾ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಮಲ್ಲಮ್ಮ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts