ದಾವಣಗೆರೆ : ಇಲ್ಲಿನ ಎಸ್.ಎಂ. ಕೃಷ್ಣ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಆರೋಗ್ಯ ಕಾರ್ಯಕ್ರಮಗಳ ಕುರಿತಂತೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಕೇಂದ್ರದ ಹಿರಿಯ ಆಡಳಿತ ವೈದ್ಯಾಧಿಕಾರಿ ಡಾ.ಎಲ್.ಡಿ. ವೆಂಕಟೇಶ್ ತಿಳಿಸಿದರು.
ಆರೋಗ್ಯ ಕೇಂದ್ರಕ್ಕೆ ಬುಧವಾರ ಭೇಟಿ ನೀಡಿದ ಫಾಲ್ಕಾನ್ ಪಿಯುಸಿ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ, ಮಾತನಾಡಿದರು.
ತಾಯಿ ಮತ್ತು ಮಕ್ಕಳ ಆರೋಗ್ಯ ಕಾರ್ಯಕ್ರಮ, ರಾಷ್ಟ್ರೀಯ ಕೀಟಜನ್ಯ, ಕ್ಷಯರೋಗ ನಿರ್ಮೂಲನೆ, ಕುಷ್ಠರೋಗ ನಿಯಂತ್ರಣ, ಅಸಾಂಕ್ರಾಮಿಕ ರೋಗಗಳು, ಅನಿಮಿಯಾ ಮುಕ್ತ ಭಾರತ ಹಾಗೂ ರೇಬಿಸ್ ನಿಯಂತ್ರಣ ಕಾರ್ಯಕ್ರಮದಡಿ ನೀಡಲಾಗುತ್ತಿರುವ ಚಿಕಿತ್ಸಾ ಸೌಲಭ್ಯಗಳ ಕುರಿತು ಸಂಪೂರ್ಣ ಮಾಹಿತಿ ನೀಡಿದರು.
ತಾಯಿ ಮತ್ತು ಮಕ್ಕಳ ಆರೋಗ್ಯ ಕಾರ್ಯಕ್ರಮದಡಿ ಮಹಿಳೆಯು ಗರ್ಭಿಣಿ ಎಂದು ದೃಢಪಟ್ಟ ನಂತರ ತಕ್ಷಣವೇ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಾಯಿ ಕಾರ್ಡ್ ಪಡೆದು ಇಏ ಪೋರ್ಟಲ್ನಲ್ಲಿ ನೋಂದಣಿ ಮಾಡಿಸಬೇಕು. ಕೀಟಜನ್ಯ ಕಾರ್ಯಕ್ರಮದಡಿ ಡೆಂೆ, ಮಲೇರಿಯಾ, ಚಿಕೂನ್ಗುನ್ಯಾ, ಮೆದುಳುಜ್ವರ, ಸೊಳ್ಳೆಯಿಂದ ಹರಡುವ ಸಾಂಕ್ರಾಮಿಕ ರೋಗಗಳ ಲಕ್ಷಣ ಹಾಗೂ ನಿಯಂತ್ರಣ ಕ್ರಮಗಳ ಬಗ್ಗೆ ತಿಳಿಸಿದರು.
ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿ ರೋಗಲಕ್ಷಣ ಇರುವವರಿಗೆ ಕಫ ಪರೀಕ್ಷೆ, ದೃಢಪಟ್ಟ ರೋಗಿಗಳಿಗೆ ಉಚಿತ ಮಾತ್ರೆ ನೀಡಲಾಗುವುದಲ್ಲದೆ, ಪ್ರತಿ ತಿಂಗಳು ಆರೋಗ್ಯ ತಪಾಸಣೆ ನಡೆಸಲಾಗುವುದು. ಅನಿಮಿಯಾ ಮುಕ್ತ ಭಾರತ ಕಾರ್ಯಕ್ರಮದಡಿ ಉಚಿತ ರಕ್ತಪರೀಕ್ಷೆ ನಡೆಸಿ ರಕ್ತಹೀನತೆ ಇರುವವರಿಗೆ ಚಿಕಿತ್ಸೆ ನೀಡಲಾಗುವುದು ಎಂದು ಹೇಳಿದರು.
ಕಾಲೇಜು ಪ್ರಾಚಾರ್ಯ ಸೈಯದ್ ಅಲಿ ಮತ್ತು ವಿದ್ಯಾರ್ಥಿಗಳು ಇದ್ದರು.