More

    ಮರಣ ಪ್ರಮಾಣ ತಗ್ಗಿಸಲು ಅಗತ್ಯ ಕ್ರಮಕ್ಕೆ ಡಿಸಿ ಸೂಚನೆ

    ದಾವಣಗೆರೆ : ಮಕ್ಕಳು ಮತ್ತು ತಾಯಂದಿರ ಮರಣ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಮಿಷನ್ ಇಂದ್ರಧನುಷ್ ಅಭಿಯಾನದ ಕೊನೆಯ ಹಂತವನ್ನು ಯಶಸ್ವಿಯಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಸೂಚನೆ ನೀಡಿದರು.
     ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನಡೆದ 3ನೇ ಸುತ್ತಿನ ಮಿಷನ್ ಇಂದ್ರಧನುಷ್ 5.0 ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿ, ತುಂಬು ಗರ್ಭಿಣಿಯರಿಗೆ ತುರ್ತು ಸಂದರ್ಭದಲ್ಲಿ ವೆಂಟಿಲೇಟರ್ ವ್ಯವಸ್ಥೆ, ಬಿ.ಪಿ, ಮಧುಮೇಹ ಪರೀಕ್ಷೆ, ಅಗತ್ಯ ಔಷಧ ಹಾಗೂ ಚಿಕೆತ್ಸೆ ನೀಡಬೇಕು ಎಂದು ತಿಳಿಸಿದರು.
     ಜಿಲ್ಲಾ, ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಇಂದ್ರಧನುಷ್ ಅಭಿಯಾನವು ಪರಿಣಾಮಕಾರಿಯಾಗಿ ಕಾರ್ಯಗತಗೊಳ್ಳಬೇಕು. ನಗರದ ವಿವಿಧ ಭಾಗಗಳಲ್ಲಿ ಪಾಲಕರೇ ಮಕ್ಕಳಿಗೆ ಲಸಿಕೆ ಹಾಕಿಸಲು ಹಿಂದೆ ಸರಿಯುತ್ತಿದ್ದು, ತಾಲೂಕು ವ್ಯಾಪ್ತಿಯಲ್ಲಿ 44 ಮಕ್ಕಳು ಲಸಿಕೆಯಿಂದ ವಂಚಿತರಾಗಿರುವುದರಿಂದ ಈ ಕುರಿತು ಪಾಲಕರಿಗೆ ಸಂಪೂರ್ಣ ಮಾಹಿತಿ ನೀಡಬೇಕು ಎಂದರು.
     ಮೂರನೇ ಸುತ್ತಿನ ಮಿಷನ್ ಇಂದ್ರಧನುಷ್ ಅಭಿಯಾನವು ಅ. 9 ರಿಂದ 14ರ ವರೆಗೆ ನಡೆಯಲಿದ್ದು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ತರಬೇತಿ ನೀಡಬೇಕು. ನಿಗದಿತ ಸಮಯದಲ್ಲಿ ರೋಗಿಗಳ ತುರ್ತು ಚಿಕಿತ್ಸೆಗಾಗಿ 108 ಆಂಬುಲೆನ್ಸ್ ಸೇವೆಯನ್ನು ಬಳಸಿಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿ ರೋಗಿಗಳಿಗೆ ಫ್ಯಾನ್, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.
     ನಗರದಲ್ಲಿ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳೇ ಗಾಂಜಾ ಅಥವಾ ಇತರೆ ಮಾದಕ ವಸ್ತುಗಳಿಗೆ ಹೆಚ್ಚು ಆಕರ್ಷಿತರಾಗಿ ಬಲಿಯಾಗುತ್ತಿದ್ದಾರೆ. ಕಾಲೇಜುಗಳಲ್ಲಿ ಆಪ್ತ ಸಮಾಲೋಚನೆ ನಡೆಸಿ ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳನ್ನು ಮುಕ್ತಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ಹೇಳಿದರು.
     ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಷಣ್ಮುಖಪ್ಪ, ಆರ್.ಸಿ.ಎಚ್ ಅಧಿಕಾರಿ ಡಾ. ರೇಣುಕಾರಾಧ್ಯ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ನಾಗೇಂದ್ರಪ್ಪ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ವೈದ್ಯಾಧಿಕಾರಿಗಳು, ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts