ದಾವಣಗೆರೆ: ಸಮಾಜದ ಸ್ವಾಸ್ಥೃ ಕಾಪಾಡುವ ಪೊಲೀಸರು ತಮ್ಮ ಆರೋಗ್ಯದ ಕಡೆಗೆ ಕಾಳಜಿ ವಹಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕೆ.ಬಿ.ಗೀತಾ ಹೇಳಿದರು.
ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪೊಲೀಸರ ಪ್ರಾಮಾಣಿಕ ಸೇವೆಯಿಂದಾಗಿ ಸಮಾಜದಲ್ಲಿ ನಾವು ನೆಮ್ಮದಿಯಿಂದ ಜೀವಿಸಲು ಸಾಧ್ಯವಾಗಿದೆ. ಅವರು ಆರೋಗ್ಯದ ಕಡೆಗೆ ಕಡಿಮೆ ಗಮನ ಹರಿಸುತ್ತಾರೆ. ಇದರಿಂದ ದೇಹದಲ್ಲಿ ಪ್ರತಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಂಡು ಕೆಲಸ ನಿರ್ವಹಿಸಬೇಕಿದೆ ಎಂದರು.
ಪೂರ್ವ ವಲಯ ಐಜಿಪಿ ಎಸ್.ರವಿ ಮಾತನಾಡಿ, ಕರೊನಾ ವಿಚಾರದಲ್ಲಿ ನಾವು ಎಚ್ಚರಿಕೆ ಹೊಂದಿರಬೇಕು. ಅದರಿಂದ ನಮಗೆ ಏನೂ ಆಗುವುದಿಲ್ಲ ಎಂಬ ಮನೋಭಾವನೆ ಬೇಡ ಎಂದು ಕಿವಿಮಾತು ಹೇಳಿದರು.
ಕರೊನಾ ಸೋಂಕು ಏನೆಲ್ಲಾ ಸಂಕಷ್ಟವನ್ನು ತಂದೊಡ್ಡಿತು ಎಂಬುದು ನಮ್ಮ ಮುಂದಿದೆ. ಕೆಲವರಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ ದೊರೆಯಿತು. ಪೊಲೀಸರಿಗೆ ಇಂಥ ಸಂದರ್ಭ ಒದಗಿಲ್ಲ. ಜನರ ಮಧ್ಯೆ ಹೋಗಿ ಕೆಲಸ ಮಾಡಬೇಕಿದೆ. ಹೀಗಾಗಿ ಪೊಲೀಸರು ಎಚ್ಚರಿಕೆ, ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದರು.
ಹೆಚ್ಚುವರಿ ಎಸ್ಪಿ ರಾಜೀವ್, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಇದ್ದರು.
ಹುತಾತ್ಮ ಸಿಬ್ಬಂದಿಗಳ ಸ್ಮರಣೆ: ಜಿಲ್ಲಾ ಪೊಲೀಸ್ ವತಿಯಿಂದ ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸ್ಮರಣೆ ಮಾಡಲಾಯಿತು. ಹುತಾತ್ಮ ಪೊಲೀಸರ ಸ್ಮಾರಕಕ್ಕೆ ಹೂಗುಚ್ಛ ಅರ್ಪಿಸಲಾಯಿತು. ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸೂಚಿಸಲಾಯಿತು. ಪೊಲೀಸ್ ಧ್ವಜ ಅರ್ಧಕ್ಕೆ ಇಳಿಸಿ ಎರಡು ನಿಮಿಷ ಮೌನ ಆಚರಿಸಲಾಯಿತು.
ಎಸ್ಪಿ ಹನುಮಂತರಾಯ ಮಾತನಾಡಿ, ಈ ವರ್ಷ ದೇಶದಲ್ಲಿ 264, ರಾಜ್ಯದಲ್ಲಿ 17, ಜಿಲ್ಲೆಯಲ್ಲಿ ನಾಲ್ಕು ಜನ ಪೊಲೀಸರು ಹುತಾತ್ಮರಾಗಿದ್ದಾರೆ. ಅವರ ತ್ಯಾಗ, ಧೈರ್ಯ ನಮಗೆಲ್ಲ ಆದರ್ಶವಾಗಲಿ ಎಂದು ಹೇಳಿದರು.
ಜಿಲ್ಲೆಯಲ್ಲಿ ಹುತಾತ್ಮರಾದವರ ಕುಟುಂಬ ವರ್ಗದವರಿಗೆ ಗೌರವಿಸಲಾಯಿತು. ಆರ್ಪಿಐ ಎಸ್.ಎನ್.ಕಿರಣ್ ಕುಮಾರ್ ನೇತೃತ್ವದಲ್ಲಿ ಕವಾಯತು ನಡೆಯಿತು. ಎಆರ್ಎಸ್ಐ ಹೊನ್ನೂರಪ್ಪ ತಂಡದ ಬ್ಯಾಂಡ್ ವಾದನ ನಡೆಯಿತು.