ದಾವಣಗೆರೆ: ಮೆಕ್ಕೆಜೋಳ ಮತ್ತು ಭತ್ತ ಖರೀದಿ ಕೇಂದ್ರ ಆರಂಭಿಸಲು ಆಗ್ರಹಿಸಿ ಮಾಯಕೊಂಡ ಮತ್ತು ಬಸವಾಪಟ್ಟಣ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟಿಸಿದರು.
ಜಯದೇವ ವೃತ್ತದಲ್ಲಿ ಸೇರಿ, ಕೈಯಲ್ಲಿ ಭತ್ತ, ಮೆಕ್ಕೆಜೋಳದ ಸಸಿಗಳನ್ನು ಹಿಡಿದು ಘೋಷಣೆ ಕೂಗಿದ ಪ್ರತಿಭಟನಾಕಾರರು ಉಪ ವಿಭಾಗಾಧಿಕಾರಿ ಕಚೇರಿಗೆ ತೆರಳಿ ರಾಜ್ಯಪಾಲರಿಗೆ ಮನವಿಪತ್ರ ರವಾನಿಸಿದರು.
ಈ ವರ್ಷ ಉತ್ತಮ ಮಳೆಯಾಗಿ ಮೆಕ್ಕೆಜೋಳ ಹಾಗೂ ಭತ್ತದ ಬೆಳೆ ಚೆನ್ನಾಗಿ ಬಂದಿದೆ. ಆದರೆ ಈ ಕೃಷಿ ಉತ್ಪನ್ನಗಳ ಬೆಲೆಯು ಪಾತಾಳಕ್ಕೆ ಕುಸಿದಿದ್ದು ರೈತರು ಸಂಕಷ್ಟು ಅನುಭವಿಸುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
ಸರ್ಕಾರ ಮೆಕ್ಕೆಜೋಳಕ್ಕೆ 2 ಸಾವಿರ ರೂ, ಭತ್ತಕ್ಕೆ 2500 ರೂ. ಬೆಲೆಯನ್ನು ನಿಗದಿಪಡಿಸಬೇಕು. ಖರೀದಿ ಕೇಂದ್ರ ತೆರೆದು ಬೆಂಬಲಬೆಲೆಯ ಮೂಲಕ ಖರೀದಿಸಬೇಕು. ಇದಕ್ಕೆ ಮಿತಿ ಹೇರಬಾರದು ಎಂದು ಒತ್ತಾಯಿಸಿದರು.
ಈ ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗ ಜಿಲ್ಲಾ ಮಟ್ಟದಲ್ಲಿ ಭತ್ತ ಹಾಗೂ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಆರಂಭಿಸಿ ರೈತರಿಗೆ ನೆರವಾಗಿತ್ತು. ಈಗಲೂ ಅದೇ ರೀತಿಯ ವ್ಯವಸ್ಥೆ ಜಾರಿಗೆ ತರಬೇಕೆಂದು ಆಗ್ರಹಿಸಿದರು.
ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಮೆಕ್ಕೆಜೋಳ ಹಾಗೂ ಭತ್ತದ ಫಸಲು ಬಹುತೇಕ ಹಾನಿಯಾಗಿ ರೈತರು ನಷ್ಟದಲ್ಲಿದ್ದಾರೆ. ಸರ್ಕಾರ ಅವರ ಸಹಾಯಕ್ಕೆ ಬರಬೇಕು ಎಂದು ಸರ್ಕಾರಕ್ಕೆ ಬೇಡಿಕೆಯಿಟ್ಟರು.
ಜಿ.ಪಂ. ಸದಸ್ಯ ಬಸವಂತಪ್ಪ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಎಪಿಎಂಸಿ ಅಧ್ಯಕ್ಷ ಚಂದ್ರಶೇಖರ್, ಮಾಜಿ ಅಧ್ಯಕ್ಷ ಮುದೇಗೌಡ್ರ ಗಿರೀಶ್, ಶರಣಪ್ಪ, ಶಂಭುಲಿಂಗಪ್ಪ, ಪ್ರಕಾಶ್, ಸತೀಶ್, ಅಂಜಿನಪ್ಪ, ಶೇಖರಪ್ಪ ಪಾಲ್ಗೊಂಡಿದ್ದರು.