More

    ವಿಪತ್ತು ನಿರ್ವಹಣೆಗೆ ಸಜ್ಜಾಗಲು ಡಿಸಿ ಕರೆ

    ವಿಜಯಪುರ: ಕಳೆದೆ ನಾಲ್ಕೈದು ದಿನಗಳಿಂದ ಜಿಲ್ಲೆಯಲ್ಲಿ ಜಿಟಿಜಿಟಿ ಮಳೆ ಸುರಿಯುತ್ತಿದ್ದು ಜಲಮೂಲಗಳು ಚೇತರಿಸಿಕೊಂಡಿವೆ. ನದಿ ಪಾತ್ರಗಳಲ್ಲಿ ನೀರಿನ ಹರಿವು ಕ್ರಮೇಣ ಹೆಚ್ಚುತ್ತಿದ್ದು ವಿಪತ್ತು ನಿರ್ವಹಣೆಗೆ ಸಜ್ಜಾಗಬೇಕೆಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ಕೃಷ್ಣಾ, ಭೀಮಾ ಮತ್ತು ಡೋಣಿ ನದಿ ಪಾತ್ರದಲ್ಲಿ ಪ್ರವಾಹಕ್ಕೆ ಒಳಗಾಗವಹುದಾದ 54 ಗ್ರಾಪಂಗಳ 167 ಗ್ರಾಮಗಳಲ್ಲಿ ತೀವ್ರ ನಿಗಾ ಇರಿಸಬೇಕು. ಜನರಲ್ಲಿ ಮುಂಚಿತವಾಗಿಯೇ ಜಾಗೃತಿ ಮೂಡಿಸಿ ಯಾವುದೇ ಅನಾಹುತಗಳು ಸಂಭವಿಸದಂತೆ ನೋಡಿಕೊಳ್ಳಬೇಕು ಎಂದರು.

    ಪ್ರತಿದಿನ ಮಳೆಯ ವರದಿ, ಪ್ರಕೃತಿ ವಿಕೋಪದಿಂದ ಉಂಟಾಗಿರುವ ಮಾನವ-ಜಾನುವಾರು ಜೀವ ಹಾನಿ, ಕೃಷಿ ಮತ್ತು ತೋಟಗಾರಿಕೆ ಬೆಳೆ ಹಾನಿ ಮತ್ತು ಮಳೆಯಿಂದ ಹಾನಿಗೊಳಗಾದ ಮನೆಗಳ ವರದಿಯನ್ನು ತಕ್ಷಣವೇ ಸಿದ್ಧಪಡಿಸಿ ಸಲ್ಲಿಸಬೇಕು. ತಹಸೀಲ್ದಾರ್, ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಆಸ್ತಿ-ಪಾಸ್ತಿ, ಜೀವ ಹಾನಿಯಾಗದಂತೆ ನೋಡಿಕೊಳ್ಳಬೇಕು ಎಂದರು.

    ಹವಾಮಾನ ಮುನ್ಸೂಚನೆ ಹಾಗೂ ಮುನ್ನೆಚ್ಚರಿಕೆಗಳನ್ನು ಎನ್‌ಡಿಎಂಎ ಅಭಿವೃದ್ಧಿ ಪಡಿಸಿರುವ ಕಾಮನ್ ಅಲರ್ಟ್ ಪ್ರೋಟೊಕಾಲ್ ಮೂಲಕ ಸಾರ್ವಜನಿಕರ ಮೊಬೈಲ್‌ಗಳಿಗೆ ರವಾನಿಸಲಾಗುತ್ತದೆ. ಈ ಕುರಿತಂತೆಯೂ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ವಿವಿಧ ಮಾಧ್ಯಮಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು. ತುರ್ತು ಸಂದರ್ಭಗಳಲ್ಲಿ ಗ್ರಾಮ ಮಟ್ಟದಲ್ಲಿ ಡಂಗುರ ಸಾರುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಅವಶ್ಯವಿದ್ದಲ್ಲಿ ಕೆಎಸ್‌ಎನ್‌ಡಿಎಂಸಿಯಲ್ಲಿ ಚಾಲ್ತಿಯಲ್ಲಿರುವ ವರುಣ ಮಿತ್ರ ಸಹಾಯವಾಣಿ 9243345433ಕ್ಕೆ ಕರೆ ಮಾಡಲು ತಿಳಿಸಬೇಕೆಂದರು.

    ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖಾ ಪಡೆ, ನಾಗರಿಕ ರಕ್ಷಣಾ ದಳ, ಗೃಹ ರಕ್ಷಕ ದಳ, ಆಪದ್ ಮಿತ್ರ ಅಡಿಯಲ್ಲಿ ತರಬೇತಿ ಪಡೆದ ಸಮುದಾಯ ಮಟ್ಟದ ಸ್ವಯಂ ಸೇವಕರನ್ನು ಜಾಗೃತಿಗೊಳಿಸಿ ಸಿದ್ಧವಾಗಿರಿಸಿಕೊಳ್ಳಬೇಕು. ಲಭ್ಯವಿರುವ ರಕ್ಷಣಾ ಸಲಕರಣೆ ಸುಸ್ಥಿತಿಯಲ್ಲಿರುವುದನ್ನು ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ವಿಪತ್ತಿ ಪರಿಸ್ತಿತಿಯಲ್ಲಿ ಸೇವೆ ಸಲ್ಲಿಸಲು ಇಚ್ಚಿಸುವ ಈಜುಗಾರರು, ಹಾವು ಹಿಡಿಯುವರು ಮತ್ತು ನಾಗರಿಕ ಸ್ವಯಂ ಸೇವಕರ ಸಂಪರ್ಕ ವಿಳಾಸವನ್ನು ಪಡೆದುಕೊಂಡು, ಅವಶ್ಯವಿದ್ದಾಗ ಇವರ ಸೇವೆ ಪಡೆಯುವಂತೆ ಅವರು ಸೂಚಿಸಿದರು.

    ಅತಿವೃಷ್ಟಿ-ಪ್ರವಾಹದಿಂದಾಗಿ ರಸ್ತೆ ಸಂಪರ್ಕ ಕಡಿತಗೊಂಡಲ್ಲಿ ಕೂಡಲೇ ಬದಲಿ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು. ವಿದ್ಯುತ್ ಕಂಬಗಳ ತಪಾಸಣೆ ನಡೆಸಬೇಕು. ದೋಷಗಳಿದ್ದಲ್ಲಿ ತುರ್ತಾಗಿ ಸರಿಪಡಿಸಲು ಕ್ರಮ ಕೈಗೊಳ್ಳಬೇಕು. ಟ್ರಾನ್ಸಫಾರ್ಮರ್ ಬ್ಯಾಂಕ್‌ನಲ್ಲಿ ಟ್ರಾನ್ಸ್‌ಫಾರ್ಮರ್‌ಗಳನ್ನು ದಾಸ್ತಾನಿಟ್ಟುಕೊಳ್ಳಬೇಕು. ಮಳೆಗಾಲದಲ್ಲಿ ವಿದ್ಯುತ್ ಸರಬರಾಜುವಿಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಲು ಹಾಗೂ ತುರ್ತು ಸ್ಥಿತಿಗೆ ಸ್ಪಂದಿಸಲು ತ್ವರಿತ ಪ್ರತಿಕ್ರಿಯೆ ತಂಡ ರಚಿಸಬೇಕು. ಮಳೆ ಗಾಳಿಗೆ ಬೀಳುವಂತಹ ವಿದ್ಯುತ್ ತಂತಿ ಹಾದು ಹೋಗುವ ಮರಗಳನ್ನು ಗುರುತಿಸಿ ಕೊಂಬೆಗಳನ್ನು ಕತ್ತರಿಸಬೇಕು. ಯಾವುದೇ ಕಾರಣಕ್ಕೂ ವಿದ್ಯುತ್ ಅವಘಡಗಳು ಸಂಭವಿಸದಂತೆ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

    ಸಾಂಕ್ರಾಮಿಕ ರೋಗಗಳು ಹರಡದಂತೆ ಅವಶ್ಯಕ ಕ್ರಮ ಕೈಗೊಳ್ಳಬೇಕು. ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್ ಮಾಡಬೇಕು. ಕುಡಿಯುವ ನೀರಿಗೆ ಕ್ಲೋರಿನೇಶನ್ ಮಾಡುವುದು, ಸೋಂಕುನಿವಾರಕ, ಲಸಿಕೆಗಳು, ವ್ಯಾಕ್ಸಿನೇಶನ್ ದಾಸ್ತಾನಿಟ್ಟುಕೊಳ್ಳಬೇಕು. ಹಾವು ಕಡಿತ ಔಷಧ ಸಂಗ್ರಹಿಸಿಡಬೇಕು. ವೈದ್ಯರು, ಅರೆವೈದ್ಯರು ಮತ್ತು ಆಂಬುಲೆನ್ಸ್ ಒಳಗೊಂಡ ತ್ವರಿತ ತಂಡವನ್ನು ರಚಿಸಿಕೊಳ್ಳಬೇಕು. ಮಳೆಗಾಲದಲ್ಲಿ ವ್ಯಾಪಿಸಬಹುದಾದ ಕಾಯಿಲೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.

    ಜಿಲ್ಲಾ ಕೇಂದ್ರದಲ್ಲಿ ಈಗಾಗಲೇ ಜಿಲ್ಲಾ ಕಂಟ್ರೋಲ್ ರೂಮ್ ದೂರವಾಣಿ ಟೋಲ್ ಫ್ರೀ ಸಂಖ್ಯೆ 1077 (08352-221261) ಸ್ಥಾಪಿಸಲಾಗಿದ್ದು, ತಾಲೂಕು ಮಟ್ಟದಲ್ಲಿಯೂ 24/7 ಕಂಟ್ರೋಲ್ ರೂಮ್ ಸ್ಥಾಪಿಸಿ, ಸಹಾಯವಾಣಿ ಸಂಖ್ಯೆಯನ್ನು ಸಾರ್ವಜನಿಕರಿಗೆ ಒದಗಿಸಬೇಕು. ಈ ಕುರಿತು ವ್ಯಾಪಕವಾಗಿ ಪ್ರಚಾರ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

    ಜಿಪಂ ಸಿಇಒ ರಾಹುಲ್ ಶಿಂಧೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದೀನ್ ಸೌದಾಗರ, ಇಂಡಿ ಉಪವಿಭಾಗಾಧಿಕಾರಿ ಆಬೀದ್ ಗದ್ಯಾಳ, ಬಸವಣ್ಣೆಪ್ಪಾ ಕಲಶೆಟ್ಟಿ, ಜಿಪಂ ಯೋಜನಾ ನಿರ್ದೇಶಕ ನಿಂಗಪ್ಪ ಗೋಠೆ, ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ಕೆ .ಚವ್ಹಾಣ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts