More

    ಮಕ್ಕಳಿಗೆ ಜ್ವರ ಬಂದರೆ ಆಸ್ಪತ್ರೆಗೆ ದಾಖಲಿಸಿ ; ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮಾರ್ಗದರ್ಶನ

    ತುಮಕೂರು: ಮಕ್ಕಳಲ್ಲಿ ಕಾಣಿಸುವ ರೋಗಗಳನ್ನು ಗುಣಪಡಿಸುವುದಾಗಿ ಪೂಜೆ, ಪುನಸ್ಕಾರ, ಮಾಟ ಮಂತ್ರ ಮಾಡುವ ಮೌಢ್ಯಾಚರಣೆ ಕಂಡು ಬಂದರೆ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಎಚ್ಚರಿಸಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ಸಮಗ್ರ ರೋಗಗಳ ಕಣ್ಗಾವಲು ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಕೆಲವೆಡೆ ಮಕ್ಕಳಲ್ಲಿ ವೈರಲ್ ಫೀವರ್ ಕಂಡುಬರುತ್ತಿದ್ದು, ಜ್ವರ ತಗುಲಿದ ಬಹುತೇಕ ಮಕ್ಕಳು ಮರಣ ಹೊಂದುವ ಸಾಧ್ಯತೆಗಳಿವೆ. ಆದ್ದರಿಂದ ಜ್ವರ ಕಂಡು ಬಂದ ಮಕ್ಕಳಿಗೆ ತಕ್ಷಣವೇ ವೈದ್ಯಕೀಯ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕು ಎಂದರು.

    ಗ್ರಾಮೀಣ ಪ್ರದೇಶದಲ್ಲಿ ಬಹುತೇಕರು ವೈದ್ಯಕೀಯ ಚಿಕಿತ್ಸೆ ನಿರ್ಲಕ್ಷಿಸಿ ಜ್ವರದಿಂದ ಬಳಲುತ್ತಿರುವ ಮಕ್ಕಳನ್ನು ಗುಣಪಡಿಸಲು ದೇವಸ್ಥಾನಗಳ ಮೊರೆ ಹೋಗುತ್ತಿದ್ದು, ಅಧಿಕಾರಿಗಳು ಇದಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ರೋಗ ಗುಣಪಡಿಸಲು ದೇವಸ್ಥಾನಗಳಿಗೆ ಹೋಗದೆ ವೈದ್ಯಕೀಯ ಚಿಕಿತ್ಸೆ ಕೊಡಿಸಬೇಕು. ಮೌಢ್ಯತೆಯಿಂದ ರೋಗ ಗುಣಪಡಿಸುವ ಪ್ರಸಂಗಗಳು ಕಂಡುಬಂದಲ್ಲಿ ಸಾರ್ವಜನಿಕರು ಸ್ಥಳೀಯ ಆರೋಗ್ಯಾಧಿಕಾರಿಗಳಿಗೆ ಮಾಹಿತಿ ಒದಗಿಸಬೇಕು ಎಂದರು.

    ಜಿಲ್ಲೆಯಲ್ಲಿ ಹರಡುವ ಸಾಂಕ್ರಾಮಿಕ ಮತ್ತು ಸಾಂಕ್ರಾಮಿಕವಲ್ಲದ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಮಲೇರಿಯಾ, ಚಿಕೂನ್‌ಗುನ್ಯಾ, ಡೆಂಘೆ, ಕ್ಷಯರೋಗ, ಮೆದುಳು ಜ್ವರ ಸೇರಿ ಹಲವು ಮಾರಣಾಂತಿಕ ರೋಗಗಳ ನಿಯಂತ್ರಣಕ್ಕೆ ಸಂಬಂಧಿಸಿದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡು, ರೋಗ ನಿಯಂತ್ರಣಕ್ಕೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

    ತಗ್ಗಿದ ಮಲೇರಿಯಾ: ಕಳೆದ ಎರಡ್ಮೂರು ವರ್ಷಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಪ್ರಸ್ತುತ ಮಲೇರಿಯಾ ಪ್ರಕರಣಗಳ ಪ್ರಮಾಣ ಗಣನೀಯವಾಗಿ ತಗ್ಗಿದೆ. ಪ್ರಸಕ್ತ ಸಾಲಿನಲ್ಲಿ ಈವರೆಗೆ ಜಿಲ್ಲೆಯಲ್ಲಿ 3 ಮಲೇರಿಯಾ ಪ್ರಕರಣಗಳು ಮಾತ್ರ ಪತ್ತೆಯಾಗಿವೆ. ಉಳಿದಂತೆ, 71 ಡೆಂಗ್ಯೂ, 77 ಚಿಕುನ್‌ಗುನ್ಯಾ ಪ್ರಕರಣಗಳು ವರದಿಯಾಗಿದ್ದು, ಈ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಡಿಸಿ ಸೂಚಿಸಿದರು. ಕಳಪೆ ಸ್ಥಿತಿಯಲ್ಲಿರುವ ಬಸ್, ರೈಲ್ವೆ ನಿಲ್ದಾಣ ಹಾಗೂ ಎಪಿಎಂಸಿ ಮಾರುಕಟ್ಟೆಯ ರಸ್ತೆಗಳು ಸೊಳ್ಳೆಗಳ ಉತ್ಪತ್ತಿ ತಾಣಗಳಾಗಿದ್ದು, ಈ ರಸ್ತೆಗಳಲ್ಲಿ ಕೊಳಚೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದರಲ್ಲದೆ, ಕೆಎಸ್ಸಾರ್ಟಿಸಿ ಅಧಿಕಾರಿಗಳು ನಿರುಪಯುಕ್ತ ಟೈರ್‌ಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

    ಬೀದಿನಾಯಿ ಹಾವಳಿ ನಿಯಂತ್ರಿಸಿ: ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ಮಕ್ಕಳು ಸೇರಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ನಾಯಿಗಳ ಸಂಖ್ಯೆ ಹೆಚ್ಚಾಗಿರುವಂತಹ ಪ್ರದೇಶಗಳನ್ನು ಗುರುತಿಸಿ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಕೋಳಿ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡದ ಕಾರಣ ನಗರ ಪ್ರದೇಶದಲ್ಲಿ ನಾಯಿಗಳ ಸಂಖ್ಯೆ ಹೆಚ್ಚಾಗಿದ್ದು, ತ್ಯಾಜ್ಯ ವಿಲೇವಾರಿಯನ್ನು ಸಮರ್ಪಕವಾಗಿ ಮಾಡಿ, 2 ರಿಂದ 3 ವಾರಗಳೊಳಗೆ ಬೀದಿ ನಾಯಿಗಳ ಸಮಸ್ಯೆ ಬಗೆಹರಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts