More

    ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಡಿಸಿ ಭೇಟಿ

    ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ರಾಜಕಾಲುವೆ ಸಮಸ್ಯೆ ಇತ್ಯರ್ಥಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ವಿಸõತ ಯೋಜನಾ ವರದಿ ಸಿದ್ಧಪಡಿಸಿ, ಅಲ್ಪಾವಧಿ ಹಾಗೂ ದೀರ್ಘಾವಧಿ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.

    ಇತ್ತೀಚೆಗೆ ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದ ಪ್ರವಾಹ ಉಂಟಾಗಿ, ಅದರಿಂದ ಹಾನಿಗೀಡಾದ ಪ್ರದೇಶಗಳಿಗೆ ಮಹಾನಗರ ಪಾಲಿಕೆ ಹಾಗೂ ಇನ್ನಿತರ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಭೇಟಿ ನೀಡಿ, ಪರಿಶೀಲಿಸಿದರು.

    ಈ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ದಿವ್ಯಪ್ರಭು, ನಗರ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾದರೆ ಸಮಸ್ಯೆಗಳು ಉಲ್ಬಣವಾಗುತ್ತಿವೆ. ಅವುಗಳನ್ನು ತುರ್ತಾಗಿ ಪರಿಹರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

    ನಗರ ಪ್ರದೇಶದಲ್ಲಿರುವ ಚರಂಡಿ, ಒಳ ಚರಂಡಿ ಮತ್ತು ರಾಜಕಾಲುವೆಯನ್ನು ಸ್ವಚ್ಛಗೊಳಿಸುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ರಾಜಕಾಲುವೆಯಲ್ಲಿ ಹೂಳು ತುಂಬದಂತೆ ಕ್ರಮ ಕೈಗೊಳ್ಳಬೇಕು. ತ್ಯಾಜ್ಯ ಹಾಗೂ ಅನಗತ್ಯ ವಸ್ತುಗಳನ್ನು ಸಾರ್ವಜನಿಕರು ರಾಜಕಾಲುವೆಯಲ್ಲಿ ಹಾಕಬಾರದು ಎಂದು ಸಲಹೆ ನೀಡಿದರು.

    ಮೇದಾರ ಓಣಿಯಲ್ಲಿನ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗುವುದರ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆದುಕೊಳ್ಳಲಾಗಿದೆ. ನಾರಾಯಣ ಸೋಫಾ, ಸದರ್ ಸೋಫಾ ಪ್ರದೇಶದ ಮನೆಗಳಿಗೆ ರಾಜಕಾಲುವೆ ನೀರು ನುಗ್ಗುತ್ತಿದೆ. ಈ ಹಿನ್ನೆಲೆಯಲ್ಲಿ ಸರಿಯಾದ ಯೋಜನೆ ರೂಪಿಸಿ, ಮನೆಗಳಿಗೆ ನೀರು ಪ್ರವೇಶಿಸದಂತೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

    ರಾಜಕಾಲುವೆ ಅತಿಕ್ರಮಣದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಾಗುವುದು. ಸಾರ್ವಜನಿಕರ ಅಭಿಪ್ರಾಯ ತೆಗೆದುಕೊಂಡು ಮುಂದಿನ ಕ್ರಮ ವಹಿಸಲಾಗುವುದು. ಮಳೆಯಿಂದ ಯಾವುದೇ ಜೀವ ಹಾನಿ ಆಗಬಾರದು ಎಂಬುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಧಿಕಾರಿಗಳ ಸಭೆ ನಡೆಸಲಾಗುವುದು. ತುರ್ತು ಸ್ಪಂದನಾ ತಂಡ ರಚಿಸಲಾಗುವುದು. ತಂಡವು ಮುಂದಿನ ದಿನಗಳಲ್ಲಿ ಕಾರ್ಯನಿರ್ವಹಿಸಲಿದೆ ಎಂದರು.

    ಇದಕ್ಕೂ ಮೊದಲು ಮೇದಾರ ಓಣಿ, ತುಳಜಾ ಭವಾನಿ ವೃತ್ತ, ಕಮರಿಪೇಟೆ ಪೊಲೀಸ್ ಠಾಣೆ ರಸ್ತೆ, ಹಳೆ ಹುಬ್ಬಳ್ಳಿ ಸೇತುವೆ ಹಾಗೂ ಗಬ್ಬೂರು ಸರ್ವೀಸ್ ರೋಡ್ ಕೆಳ ಹಂತದ ಸೇತುವೆಗಳಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಭೇಟಿ ನೀಡಿ, ವೀಕ್ಷಣೆ ಮಾಡಿದರು.

    ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ, ಹುಬ್ಬಳ್ಳಿ ಶಹರ ತಹಶೀಲ್ದಾರ ಕಲಗೌಡ ಪಾಟೀಲ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

    ಬಾಕ್ಸ್

    * ವಿದ್ಯುತ್ ತಂತಿ, ಮರಗಳ ತೆರವು :

    ನಗರ ಪ್ರದೇಶದ ರಸ್ತೆಯ ಬದಿಗಳಲ್ಲಿರುವ ಅಪಾಯಕಾರಿ ಮರ ಹಾಗೂ ಮರದ ಕೊಂಬೆಗಳನ್ನು ತೆರವುಗೊಳಿಸಲಾಗುವುದು. ಅರಣ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ, ತ್ವರಿತಗತಿಯಲ್ಲಿ ಜೀವ ಹಾನಿ ಉಂಟು ಮಾಡುವ ಮರಗಳನ್ನು ತೆರವುಗೊಳಿಸಲಾಗುತ್ತದೆ. ಹೆಸ್ಕಾಂ ಇಲಾಖೆ ಅಧಿಕಾರಿಗಳೊಂದಿಗೆ ರ್ಚಚಿಸಿ, ಬೀಳುವಂತಹ ವಿದ್ಯುತ್ ಕಂಬಗಳನ್ನು ತೆರವು ಮಾಡಲಾಗುವುದು. ಅಪಾಯಕಾರಿಯಾಗುವ ರೀತಿಯಲ್ಲಿರುವ ವಿದ್ಯುತ್ ತಂತಿಗಳನ್ನು ಹಾಕದಂತೆ ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

    * ಅವೈಜ್ಞಾನಿಕ ರಸ್ತೆ ಉಬ್ಬುಗಳಿಗೆ ಕಡಿವಾಣ

    ಅವಳಿ ನಗರದ ವಿವಿಧ ಪ್ರದೇಶಗಳಲ್ಲಿನ ರಸ್ತೆಗಳಿಗೆ ಅವೈಜ್ಞಾನಿಕವಾಗಿ ರಸ್ತೆ ಉಬ್ಬುಗಳನ್ನು ನಿಮಾಣ ಮಾಡಲಾಗಿದೆ. ವೈಜ್ಞಾನಿಕವಾಗಿ ಹಾಗೂ ನಿಯಮಾನುಸಾರವಾಗಿ ರಸ್ತೆಗಳಿಗೆ ಉಬ್ಬುಗಳನ್ನು ನಿರ್ವಿುಸಬೇಕು. ಈಗಾಗಲೇ ಹಾಕಲಾಗಿರುವ ಅವೈಜ್ಞಾನಿಕ ರಸ್ತೆ ಉಬ್ಬುಗಳನ್ನು ಕೂಡಲೇ ತೆರವು ಮಾಡಲಾಗುವುದು. ಈ ಕುರಿತು ರಸ್ತೆ ಸುರಕ್ಷತಾ ಸಮಿತಿಯ ಅಧಿಕಾರಿಗಳೊಂದಿಗೆ ರ್ಚಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

    * ಮಾದಕ ವಸ್ತು, ಡ್ರಗ್ಸ್ ನಿಯಂತ್ರಣಕ್ಕೆ ಕ್ರಮ

    ಜಿಲ್ಲೆಯಲ್ಲಿ ಹೆಚ್ಚಾಗಿ ಮಾದಕ ವಸ್ತುಗಳು, ಡ್ರಗ್ಸ್ ಮಾರಾಟವಾಗುತ್ತಿದ್ದು, ಅವುಗಳ ನಿಯಂತ್ರಣಕ್ಕೆ ಕ್ರಮ ವಹಿಸಲಾಗುವುದು. ಜಿಲ್ಲೆಗೆ ಮಾದಕ ವಸ್ತುಗಳು ಬರದಂತೆ ತಡೆಹಿಡಿಯಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ಈ ಬಗ್ಗೆ ನಿಗಾ ವಹಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

    *

    ಧಾರಾಕಾರ ಮಳೆ ಸುರಿದು ನಾಲ್ಕೈದು ದಿನಗಳಾದರೂ ಮೇದಾರ ಓಣಿಯಲ್ಲಿನ ರಾಜಕಾಲುವೆ ಸ್ವಚ್ಛಗೊಳಿಸದ ಮಹಾನಗರ ಪಾಲಿಕೆ ಅಧಿಕಾರಿಗಳು, ಬುಧವಾರದಂದು ಜಿಲ್ಲಾಧಿಕಾರಿ ಭೇಟಿ ನೀಡುತ್ತಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಜೆಸಿಬಿ, ಟ್ರಾ್ಯಕ್ಟರ್​ನೊಂದಿಗೆ ಆಗಮಿಸಿ ರಾಜಕಾಲುವೆ ಸ್ವಚ್ಛತೆಗೆ ಮುಂದಾದರು. ಜಿಲ್ಲಾಧಿಕಾರಿ ಭೇಟಿ ನೀಡಿದ ಸಂದರ್ಭದಲ್ಲಿ ಸ್ಥಳೀಯ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಈ ವಿಷಯವನ್ನು ಅವರ ಗಮನಕ್ಕೆ ತಂದು, ಅಸಮಾಧಾನ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts