ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಆಪ್ತ, ಸಂಸದ ರಾಹುಲ್ ರಮೇಶ್ ಶೆವಾಲೆ ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನೆ(UBT) ಮುಖ್ಯಸ್ಥ ಉದ್ಧವ್ ಠಾಕ್ರೆ, ರಾಜ್ಯಸಭೆ ಸದಸ್ಯ ಸಂಜಯ್ ರಾವುತ್ ಹಾಗೂ ಶಾಸಕ ಆದಿತ್ಯ ಠಾಕ್ರೆಗೆ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣವು ಪಕ್ಷದ ಚಿಹ್ನೆಯನ್ನ 2,000 ಸಾವಿರ ಕೋಟಿ ರೂಪಾಯಿಗೆ ಖರೀದಿಸಿದೆ ಎಂದು ಈ ಮೂವರು ನಾಯಕರು ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ರಾಹುಲ್ ಶೆವಾಲೆ ದೆಹಲಿ ಹೈಕೋರ್ಟಿನಲ್ಲಿ ಮಾನನಷ್ಟ ಮೊಕದ್ದಮೆಯನ್ನ ದಾಖಲಿಸಿದ್ದರು.
ಇದನ್ನೂ ಓದಿ: ನಿತಿನ್ ಗಡ್ಕರಿಗೆ ಬೆದರಿಕೆ ಹಾಕಿದ್ದ ಶಂಕಿತನನ್ನು ಬೆಳಗಾವಿಯಿಂದ ಕರೆದೊಯ್ದ ನಾಗ್ಪುರ ಪೊಲೀಸರು
ಸಂಸದ ರಾಹುಲ್ ಶೆವಾಲೆ ಪರ ವಾದ ಮಂಡಿಸಿದ ಹಿರಿಯ ವಕೀಲ ರಾಜೀವ್ ನಾಯ್ಯರ್ ತಮ್ಮ ಕಕ್ಷಿದಾರರ ವಿರುದ್ಧ ಯಾವುದೇ ಮಾನಹಾನಿಕಾರಕ ಹೇಳಿಕೆಗಳನ್ನ ನೀಡದಂತೆ ತಡೆಯಾಜ್ಞೆ ನೀಡುವಂತೆ ನ್ಯಾಯಾಲಯಕ್ಕೆ ವಿನಂತಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರತೀಕ್ ಜಲನ್ ಅವರಿದ್ದ ಏಕಸದಸ್ಯ ಪೀಠವು ಪ್ರತಿವಾದಿಗಳು ಪ್ರತಿಕ್ರಿಯೆ ನೀಡಿದ ನಂತರವಷ್ಟೇ ಆದೇಶವನ್ನ ಹೊರಡಿಸಲಾಗುವುದು ಎಂದು ತಿಳಿಸಿ ವಿಚಾರಣೆಯನ್ನ ಎಪ್ರಿಲ್ 17ಕ್ಕೆ ಮುಂದೂಡಿದ್ದಾರೆ.