ನವದೆಹಲಿ: ಕಳೆದ ಕೆಲ ದಿನಗಳಿಂದ ದೇಶದಲ್ಲಿ ಅಗ್ನಿ ಅವಘಡದ ಘಟನೆಗಳು ಹೆಚ್ಚುತ್ತಿದ್ದು, ಅನೇಕರು ಪ್ರಾಣ ಕೆದುಕೊಂಡಿದ್ದಾರೆ. ಗುಜರಾತ್ನ ರಾಜ್ಕೋಟ್ನಲ್ಲಿರುವ ಗೇಮಿಂಗ್ ಸೆಂಟರ್ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 25ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಮಾಸುವ ಮುನ್ನವೇ ರಾಷ್ಟ್ರ ರಾಜಧಾನಿ ನವದೆಹಲಿಯ ಬೇಬಿ ಕೇರ್ ಸೆಂಟರ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 7 ನವಜಾತ ಶಿಶುಗಳು ಸಜೀವ ದಹನವಾಗಿದೆ.
ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಈ ದುರ್ಘಟನೆ ಸಂಭವಿಸಿದ್ದು, 12 ಶಿಶುಗಳನ್ನು ರಕ್ಷಿಸಲಾಗಿದೆ. ಘಟನೆಯಲ್ಲಿ ಏಳು ಶಿಶುಗಳು ಮೃತಪಟ್ಟಿದ್ದು, ಇನ್ನುಳಿದ ಐದು ಶಿಶುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ವಿಚ್ಛೇದನ ವದಂತಿ ನಡುವೆಯೇ ಸಾಮಾಜಿಕ ಜಾಲತಾಣದಲ್ಲಿ ಹಾರ್ದಿಕ್ ಪತ್ನಿಯ ಪೋಸ್ಟ್ ವೈರಲ್
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ದೆಹಲಿಯ ವಿವೇಕ್ ವಿಹಾರ್ನಲ್ಲಿರುವ ಶಿಶುಪಾಲನಾ ಕೇಂದ್ರದಲ್ಲಿ ರಾತ್ರಿ 11:32ರ ಸುಮಾರಿಗೆ ಬೆಂಕಿ ಕಾಣಿಸಿಕೊಂಢಿದ್ದು, ಕ್ಷಣಾರ್ಧದಲ್ಲೇ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ಶಿಶುಗಳನ್ನು ರಕ್ಷಿಸಿ ಬೆಂಕಿಯನ್ನು ನಂದಿಸಿದ್ದಾರೆ. 12 ನವಜಾತ ಶಿಶುಗಳನ್ನು ಕಟ್ಟಡದಿಂದ ಹೊರತೆಗೆಯಲಾಯಿತು, ಆದರೆ ಚಿಕಿತ್ಸೆ ವೇಳೆ 7 ನವಜಾತ ಶಿಶುಗಳು ಮೃತಪಟ್ಟಿವೆ.
ಆಸ್ಪತ್ರೆಯಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದು ಈವರೆಗೆ ತಿಳಿದು ಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಶೀಘ್ರದಲ್ಲೇ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.