ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ಪರ-ವಿರೋಧ ಬಣದಿಂದ ಉಂಟಾದ ಗಲಭೆ ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಸಾವಿನ ಸಂಖ್ಯೆ 13ಕ್ಕೇರಿದೆ. ವಾತಾವರಣ ಇನ್ನು ಪ್ರಕ್ಷುಬ್ಧವಾಗಿದ್ದು ಈಶಾನ್ಯ ದೆಹಲಿ ಜಿಲ್ಲೆಗಳಲ್ಲಿ ಗಲಭೆಕೋರರು ಕಂಡಲ್ಲಿ ಗುಂಡಿಕ್ಕಲು ಆದೇಶವನ್ನು ಹೊರಡಿಸಲಾಗಿದೆ.
ಈಶಾನ್ಯ ದೆಹಲಿಯ ಚಾಂದ್ ಬಾಘ್ ಮತ್ತು ಭಜನ್ಪುರ ಸೇರಿದಂತೆ ಅನೇಕ ಭಾಗಗಳಲ್ಲಿ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ. ಕಲ್ಲು ತೂರಾಟ, ಅಂಗಡಿ ಮತ್ತು ವಾಹನಗಳಿಗೆ ಬೆಂಕಿ ಹಚ್ಚುವುದು ಮುಂದುವರಿದಿರುವ ಹಿನ್ನೆಲೆಯಲ್ಲಿ ಯುಮುನಾ ವಿಹಾರ ಏರಿಯಾದ ದೆಹಲಿ ಪೊಲೀಸ್ ವರಿಷ್ಠಾಧಿಕಾರಿ ಕಂಡಲ್ಲಿ ಗುಂಡಿಕ್ಕಲು ಆದೇಶ ಹೊರಡಿಸಿದ್ದಾರೆ.
ಮೌಜಾಪುರ, ಜಫ್ರಾಬಾದ್, ಚಾಂದ್ಬಾಘ್ ಮತ್ತು ಕರ್ವಾಲ್ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಅಲ್ಲದೆ ಈಶಾನ್ಯ ದೆಹಲಿ ಭಾಗದಲ್ಲಿ ಜಾರಿಯಲ್ಲಿರುವ 144 ಸೆಕ್ಷನ್ನ್ನು ಮಾರ್ಚ್ 24ರವರೆಗೆ ವಿಸ್ತರಿಸಲಾಗಿದೆ.
ಗಲಭೆಯಲ್ಲಿ 180 ಮಂದಿ ಗಾಯಗೊಂಡಿದ್ದಾರೆ. ಅದರಲ್ಲೂ ಸುಮಾರು 70 ಮಂದಿ ಗುಂಡೇಟಿನಿಂದ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. 56 ಪೊಲೀಸ್ ಸಿಬ್ಬಂದಿಯೂ ಸಹ ಗಾಯಗೊಂಡಿದ್ದಾರೆ. ದೆಹಲಿಯ ಹಲವು ಭಾಗಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಹಿಂಸಾಚಾರದಲ್ಲಿ ಮೃತಪಟ್ಟ ಪೊಲೀಸ್ ಸಿಬ್ಬಂದಿ ಮತ್ತು ಇತರರಿಗೆ ಸಿಎಂ ಕೇಜ್ರಿವಾಲ್ ಸಂತಾಪ ಸೂಚಿಸಿದ್ದಾರೆ.
ಪೌರತ್ವ ತಿದ್ದಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರ ಸಂಬಂಧ ಇಂದು ಗೃಹ ಸಚಿಹ ಅಮಿತ್ ಷಾ ಅವರೊಂದಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರೊಂದಿಗೆ ಸಭೆ ನಡೆಯಿತು.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಮನ ವೇಳೆಯೇ ಕೆಲವರು ಪ್ರಚಾರಕ್ಕಾಗಿ ರಾಷ್ಟ್ರ ರಾಜಧಾನಿಯಲ್ಲಿ ಹಿಂಸಾಚಾರ ಸೃಷ್ಟಿಸಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. (ಏಜೆನ್ಸೀಸ್)