ಬೆಂಗಳೂರು: ಮಾ.27ರಿಂದ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಮಧುಮೇಹದಿಂದ ಬಳಲುತ್ತಿ ರುವ ವಿದ್ಯಾರ್ಥಿಗಳು ಇನ್ಸುಲಿನ್ನಂತಹ ವೈದ್ಯಕೀಯ ಸಲಕರಣೆ ಕೊಂಡೊಯ್ಯಲು ಅವಕಾಶ ಕಲ್ಪಿಸಲಾಗಿದೆ.
ಮಧುಮೇಹದಿಂದ ಬಳಲುವ ವಿದ್ಯಾರ್ಥಿಗಳಿಗೆ ಸಕ್ಕರೆ ಅಂಶ ನಿಯಂತ್ರಿಸುವ ಇನ್ಸುಲಿನ್ ಪಂಪ್ ಸೇರಿ ಮಾತ್ರೆಯನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗಲು ಅನುಮತಿ ನೀಡಬೇಕೆಂದು ವಿದ್ಯಾರ್ಥಿಗಳ ಪಾಲಕರು ಕೋರಿದ್ದರು. ಇನ್ಸುಲಿನ್ ಕೊಂಡೊಯ್ಯಲು ಪರೀಕ್ಷಾ ಕೇಂದ್ರಗಳ ಅಧೀಕ್ಷಕರಿಗೆ ವಿದ್ಯಾರ್ಥಿಗಳು ಮನವಿ ಮಾಡಿದರೆ, ಸಕ್ಕರೆ ಕಾಯಿಲೆ ಕುರಿತ ವೈದ್ಯರ ಸಲಹಾ ಪತ್ರವನ್ನು ಪರಿಶೀಲಿಸಿ ಅವಕಾಶ ನೀಡಲಿದ್ದಾರೆ ಎಂದು ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.
ಕ್ರಮಕ್ಕೆ ಮನವಿ: ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಆತಂಕ ಉಂಟು ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಪತ್ರ ಬರೆದಿದ್ದಾರೆ.