ಬೆಂಗಳೂರು: ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆ ಡಾ. ಲೀಲಾ ಸಂಪತ್ ಕುಮಾರ್ ವಿರುದ್ಧ ಕೇಳಿಬಂದಿರುವ ಕರ್ತವ್ಯಲೋಪ ಹಾಗೂ ದುರ್ನಡತೆ ಆರೋಪ ಪ್ರಕರಣದಲ್ಲಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಇತ್ತೀಚಿಗೆ ಕೆ.ಆರ್.ಪುರ ಆಸ್ಪತ್ರೆಗೆ ನಿಯೋಜನೆಗೊಂಡಿದ್ದ ಸ್ನಾತಕೋತ್ತರ ವಿದ್ಯಾರ್ಥಿಗಳ ಮೇಲೆ ಈ ವೈದ್ಯೆಯು ಅನಗತ್ಯವಾಗಿ ರೇಗಾಡುವುದು, ಅವಾಚ್ಯ ಶಬ್ದಗಳಿಂದ ನಿಂದಿಸುವುದು ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದಾರೆಂದು ದೂರು ನೀಡಲಾಗಿತ್ತು. ಜತೆಗೆ ಆಸ್ಪತ್ರೆಯ ಇತರ ವೈದ್ಯರು, ಶುಶ್ರೂಷಕ ಅಧಿಕಾರಿಗಳು ಹಾಗೂ 108 ಆಂಬುಲೆನ್ಸ್ ಸಿಬ್ಬಂದಿ ಕೂಡ ಮೇಲಾಧಿಕಾರಿಗಳಿಗೆ ದೂರು ನೀಡಿದ್ದರು. ದೂರು ಪ್ರಕರಣ ಆಧರಿಸಿ ಕೆ.ಆರ್.ಪುರ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ವರದಿ ಸಲ್ಲಿಸಿದ್ದರು.
ಘಟನೆ ಸಂಬಂಧ ನಗರ ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಹಾಗೂ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಯ ತಂಡ ಆಸ್ಪತ್ರೆಗೆ ಭೇಟಿ ನೀಡಿ ವಾಸ್ತವಾಂಶಗಳ ಬಗ್ಗೆ ಪರಿಶೀಲನೆ ನಡೆಸಿದ್ದರು. ವೈದ್ಯೆ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ದೂರುದಾರರು ಪೆನ್ಡ್ರೈವ್ ಮೂಲಕ ಸಾಕ್ಷ್ಯ ನೀಡಿದ್ದರು. ಇದನ್ನಾಧರಿಸಿ ವೈದ್ಯೆಯ ನಡೆ ಸರಿಯಲ್ಲ ಎಂಬ ತೀರ್ಮಾನಕ್ಕೆ ಬರಲಾಗಿತ್ತು. ಇದರ ಬಗ್ಗೆ ಇಲಾಖೆಗೆ ವರದಿ ಸಲ್ಲಿಸಿದ ಬಳಿಕ ಡಾ. ಲೀಲಾ ಸಂಪತ್ ಕುಮಾರ್ ಅವರನ್ನು ಸೇವೆಯಿಂದ ಅಮಾನತು ಮಾಡುವ ಆದೇಶವನ್ನು ಆರೋಗ್ಯ ಇಲಾಖೆಯ ಆಯುಕ್ತ ಡಿ.ರಂದೀಪ್ ಆದೇಶ ಹೊರಡಿಸಿದ್ದಾರೆ.