ದೇವದುರ್ಗ: ಉತ್ತಮ ಆಡಳಿತ, ಅಭಿವೃದ್ಧಿ ಮಾಡಲೆಂದು ಮತದಾರರು ಅಧಿಕಾರ ಕೊಟ್ಟಿದ್ದಾರೆ. ಆದರೆ, ಅದನ್ನೇ ದುರ್ಬಳಕೆ ಮಾಡಿಕೊಂಡು ತೆಲಂಗಾಣ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳು ಕರ್ನಾಟಕದ ಗಡಿಭಾಗಗಳ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಕರ್ನಾಟಕದ ವಿಷಯಕ್ಕೆ ಬಂದ್ರೆ ಜೋಕೆ ಎಂದು ಶಾಸಕ ಕೆ.ಶಿವನಗೌಡ ನಾಯಕ ಎಚ್ಚರಿಸಿದರು.
ಪಟ್ಟಣದ ಸಾರ್ವಜನಿಕ ಕ್ಲಬ್ ಮೈದಾನದಲ್ಲಿ ಕನ್ನಡ ಕ್ರಿಯಾ ಸಮಿತಿಯಿಂದ ಬುಧವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ, ಸಾಧಕರಿಗೆ ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿ, ತೆಲಂಗಾಣ ಸಿಎಂ ಚಂದ್ರಶೇಖರ ರಾವ್, ರಾಯಚೂರು ಹಾಗೂ ಮಹಾರಾಷ್ಟ್ರ ಸಿಎಂ ಏಕನಾಥ ಸಿಂಧೆ, ಬೆಳಗಾವಿ ತಮ್ಮ ರಾಜ್ಯಕ್ಕೆ ಸೇರ್ಪಡೆಯಾಗಬೇಕು ಎಂದು ಉದ್ಧಟತನ ಹೇಳಿಕೆ ನೀಡುತ್ತಿದ್ದಾರೆ. ಮತದಾರರು ನೀಡಿದ ಅವಕಾಶ ಮರೆತು ಗಡಿ ತಂಟೆಗಳನ್ನು ಮಾಡುತ್ತ ರಾಜ್ಯ-ರಾಜ್ಯಗಳ ನಡುವೆ ಗೊಂದಲ, ಅಶಾಂತಿ ಉಂಟು ಮಾಡುತ್ತಿದ್ದಾರೆ ಎಂದು ದೂರಿದರು.