ದೇವದುರ್ಗ: ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಹರಿಸುವ ನೀರಿನ ಪ್ರಮಾಣ ತಗ್ಗಿದೆ. ಇದರಿಂದಾಗಿ 12 ದಿನಗಳಿಂದ ಜಲ ದಿಗ್ಬಂಧನಕ್ಕೆ ಒಳಗಾಗಿದ್ದ ಹೂವಿನಹೆಡಗಿ ಶ್ರೀಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಇದೀಗ ಗೋಚರಿಸುತ್ತಿದೆ.
ಪೂಜಾರಿಗಳು ಭಾನುವಾರ ದೇವಸ್ಥಾನ ಸ್ವಚ್ಛಗೊಳಿಸಿ ಪೂಜೆ ಸಲ್ಲಿಸಿದರು. ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿರುವುದರಿಂದ ನದಿದಂಡೆ ಗ್ರಾಮಗಳ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ನಾರಾಯಣಪುರ ಜಲಾಶಯದಿಂದ ನದಿಗೆ ಭಾನುವಾರ 6 ಸಾವಿರ ಕ್ಯೂಸೆಕ್ ನೀರು ಹರಿಸಲಾಗಿದೆ. ಆಲಮಟ್ಟಿ ಜಲಾಶಯದಿಂದ ನಾರಾಯಣಪುರ ಜಲಾಶಯಕ್ಕೆ ಹರಿದುಬರುತ್ತಿದ್ದ ನೀರಿನ ಪ್ರಮಾಣ ಕೂಡ ಎರಡು ದಿನಗಳಿಂದ ಭಾರಿ ಇಳಿಕೆಯಾಗಿದೆ.