ಹನೂರು: ಪ್ರತಿಯೊಬ್ಬರೂ ಆವಿಷ್ಕರಿಸುವ ಹಾಗೂ ಸಂಶೋಧಿಸುವ ಮನೋಭಾವವನ್ನು ಬೆಳೆಸಿಕೊಳ್ಳುವುದರ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಬಿಇಒ ಶಿವರಾಜು ತಿಳಿಸಿದರು.
ತಾಲೂಕಿನ ಲೊಕ್ಕನಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಬುಧವಾರ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಸ್ತುಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿಜ್ಞಾನಿ ಸರ್ ಸಿ.ವಿ ರಾಮನ್ ಆವಿಷ್ಕಾರದ ಸ್ಮರಣಾರ್ಥವಾಗಿ ಜೀವನದಲ್ಲಿ ವಿಜ್ಞಾನದ ಬಗ್ಗೆ ಜಾಗೃತಿ ಮೂಡಿಸುವ ದಿಸೆಯಲ್ಲಿ ಪ್ರತಿ ವರ್ಷ ಫೆ.28ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದೆ. ಆದ್ದರಿಂದ ವಿದ್ಯಾರ್ಥಿ ದಿಸೆಯಲ್ಲೇ ಪ್ರತಿಯೊಬ್ಬರೂ ವಿಜ್ಞಾನದ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಬೇಕು. ಇದರಿಂದ ಚಿಂತನಾ ಸಾಮರ್ಥ್ಯ ವೃದ್ಧಿಸುವುದರ ಜತೆಗೆ ಪ್ರಶ್ನಿಸುವ, ಆವಿಷ್ಕರಿಸುವ ಪ್ರವೃತ್ತಿ ಬೆಳೆಯುತ್ತದೆ. ಜತೆಗೆ ಸಂಶೋಧನೆಗೆ ದಾರಿ ಮಾಡಿಕೊಡುತ್ತದೆ ಎಂದು ತಿಳಿಸಿದರು.
ಬಳಿಕ ಆಯೋಜಿಸಲಾಗಿದ್ದ ವಿವಿಧ ಮಾದರಿಯ ವಿಜ್ಞಾನ ವಸ್ತುಪ್ರದರ್ಶನದಲ್ಲಿ ವಿದ್ಯಾರ್ಥಿಗಳು ವಿವಿಧ ಬಗೆಯ ಮಾದರಿಗಳನ್ನು ಪ್ರದರ್ಶಿಸಿದರು.
ಶಿಕ್ಷಣ ಸಂಯೋಜಕರಾದ ಕಿರಣ್ಕುಮಾರ್, ಕಂದವೇಲು, ಚಿನ್ನಪ್ಪಯ್ಯ, ಸಿಆರ್ಪಿಗಳಾದ ಅನ್ವರ್ಖಾನ್, ಷಣ್ಮುಗಂ, ರಮೇಶ್, ಮುಖ್ಯ ಶಿಕ್ಷಕರಾದ ಮಾದೇಶ, ಲೋಕೇಶ್, ಸುರೇಶ್ ಹಾಗೂ ಇನ್ನಿತರರು ಇದ್ದರು.