ಚಿತ್ರದುರ್ಗ: ನರೇಗಾದಡಿ ಹಳ್ಳಿಗಾಡಿನ ಜನರಿಗೆ ಕೆಲಸ ಒದಗಿಸುವುದರೊಂದಿಗೆ ಶಾಶ್ವತ ಹಾಗೂ ಜನೋಪಯೋಗಿ ಕಾರ್ಯಗಳನ್ನು ಕೈಗೊಳ್ಳುವ ಸದುದ್ದೇಶದಿಂದ ಸರ್ಕಾರ ಅಮೃತ ಸರೋವರ ಯೋಜನೆ ಜಾರಿಗೊಳಿಸಿದೆ ಎಂದು ಮುಖ್ಯ ಇಂಜಿನಿಯರ್ ಕೆ.ಸಿ. ಮಲ್ಲಪ್ಪ ಹೇಳಿದರು.
ತಾಲೂಕಿನ ಐನಹಳ್ಳಿ ಗ್ರಾಮ ಹಾಗೂ ಹಿರಿಯೂರು ತಾಲೂಕಿನ ಮರಡಿಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಅಮೃತ ಸರೋವರ ಕಾಮಗಾರಿಗಳನ್ನು ಇತ್ತೀಚೆಗೆ ವೀಕ್ಷಣೆ ಮಾಡಿ ಮಾತನಾಡಿದರು.
ಪ್ರಾಕೃತಿಕ ಜಲ ಮೂಲಗಳನ್ನು ಸಂರಕ್ಷಿಸಿ, ಕೆರೆ ಕಟ್ಟೆಗಳ ಹೂಳು ತೆಗೆದು ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಸಣ್ಣ ಹಿಡುವಳಿದಾರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ನರೇಗಾ ಅಮೃತ ಸರೋವರ ಯೋಜನೆ ಜಿಲ್ಲೆಯಲ್ಲಿ ಈಗಾಗಲೇ ಜಾರಿಗೊಳಿಸಲಾಗಿದೆ. 75 ಜಲಮೂಲಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರ ಜಿಲ್ಲಾ ಪಂಚಾಯಿತಿಗೆ ಗುರಿ ನೀಡಿದೆ ಎಂದರು.
ಜಿಲ್ಲೆಯಲ್ಲಿ ಒಟ್ಟು 122 ಜಲಮೂಲಗಳನ್ನು ಅಭಿವೃದ್ಧಿ ಪಡಿಸಲು ಗುರುತಿಸಲಾಗಿದೆ. ನರೇಗಾ ನೀಡಿದ ಗುರಿ ಮೀರಿ ಹೆಚ್ಚಿನ ಸಾಧನೆ ತೋರುವ ಉಮೇದಿನಲ್ಲಿ ಜಿಲ್ಲಾ ಪಂಚಾಯಿತಿ ಕಾರ್ಯ ಆರಂಭಿಸಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕನಿಷ್ಠ 20 ಜಲಮೂಲಗಳನ್ನು ಅಭಿವೃದ್ಧಿಪಡಿಸಿ ಆಗಸ್ಟ್ 15 ರಂದು ಜಲಮೂಲಗಳ ಬಳಿ ಧ್ವಜಾರೋಹಣ ನೆರವೇರಿಸಲಾಗುವುದು ಎಂದರು.
ಜಿಲ್ಲೆಯ 6 ತಾಲೂಕುಗಳಲ್ಲಿನ ಗ್ರಾಮಗಳ ಕೆರೆ/ಗೋಕಟ್ಟೆ ಸಮಗ್ರ ಅಭಿವೃದ್ಧಿ ಪಡಿಸುವಂತೆ ಪಂಚಾಯತ್ರಾಜ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಹಾಗೂ ಗ್ರಾಪಂ ಪಿಡಿಒಗಳಿಗೆ ಸೂಚಿಸಿದರು. ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಸ್ಥಳೀಯ ಸಂಸ್ಥೆಗಳ ಚುನಾಯಿತರು, ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದರು.